ಬೆಂಗಳೂರು: ವಕ್ಫ್ ಆಸ್ತಿ ಕಬಳಿಕೆ ತೆರವು ಕಾರ್ಯಾಚರಣೆ ಹೆಸರಿನಲ್ಲಿ ರಾಜ್ಯದ ರೈತರ ಭೂಮಿಯನ್ನು ಕಸಿದುಕೊಳ್ಳಲು ರಾಜ್ಯ ಸರ್ಕಾರ ಸಂಚು ರೂಪಿಸಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಿದರು.
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
ಪಕ್ಷದ ರಾಜ್ಯ ಘಟಕದ ಕರೆ ಮೇರೆಗೆ ಎಲ್ಲ ತಾಲೂಕು ಕೇಂದ್ರ ಮತ್ತು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಧರಣಿ ನಡೆಸಿದ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ತಕ್ಷಣ ವಕ್ಫ್ ಆಸ್ತಿ ತೆರವು ಕಾರ್ಯಾಚರಣೆ ನಿಲ್ಲಿಸಬೇಕು ಎಲ್ಲ ವಕ್ಫ್ ಆಸ್ತಿಯನ್ನು ರಾಷ್ಟ್ರೀಕರಣ ಗೊಳಿಸಬೇಕು ಎಂದು ಒತ್ತಾಯಿಸಿದರು.
ಬಳ್ಳಾರಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಬಿಜೆಪಿ ರಾಜ್ಯ ಅಧ್ಯಕ್ಷ ವಿಜಯೇಂದ್ರ, ನಿಜಾಮರ ಕಾಲದಲ್ಲಿ ರಜಾಕಿಗಳು ಜನರನ್ನು ಲೂಟಿ ಮಾಡುತ್ತಿದ್ದರು. ಅದೇ ರೀತಿ ರೈತರ 15 ಸಾವಿರ ಎಕರೆಯಷ್ಟು ಜಮೀನನ್ನು ಕಸಿಯುವ ಪ್ರಯತ್ನ ಕಾಂಗ್ರೆಸ್ ಮಾಡುತ್ತಿದೆ ಎಂದರು.
ಸರ್ಕಾರದ ಈ ನಡೆ ವಿರುದ್ಧ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಯುತ್ತಿದೆ. ಇದು ಇಲ್ಲಿಗೆ ನಿಲ್ಲುವುದಿಲ್ಲ. ರಾಜ್ಯದಲ್ಲಿ ನಡೆಯುತ್ತಿರುವ ಅನ್ಯಾಯದ ವಿರುದ್ಧ ಬಿಜೆಪಿ ಸುಮ್ಮನೆ ಕೂರುವುದಿಲ್ಲ. ಕಾರಜೋಳ ಅವರ ಸತ್ಯಶೋಧನಾ ಸಮಿತಿ ವರದಿ ನಮ್ಮ ಕೈಸೇರಿದೆ. ನ್ಯಾಯವಾದಿಗಳ ತಂಡವನ್ನೂ ಪಕ್ಷ ರಚನೆ ಮಾಡಿದೆ. ಯಾವುದೇ ರೈತರಿಗೆ ಅನ್ಯಾಯವಾಗಿದ್ದಲ್ಲಿ ವಕೀಲರ ತಂಡವನ್ನು ಸಂಪರ್ಕಿಸಬಹುದು. ಒಂದು ಇಂಚು ಜಾಗ ವಕ್ಫ್ಗೆ ಹೋಗಲು ಬಿಜೆಪಿ ಬಿಡುವುದಿಲ್ಲ. ನಾವು ರೈತರ ಪರ ಇರಲಿದ್ದೇವೆ ಎಂದರು
ಜಮೀರ್ ಎಂಬ ದೇಶದ್ರೋಹಿ ಮೂಲಕ ಎಲ್ಲ ಜಿಲ್ಲೆಗಳಲ್ಲಿ ಅಧಿಕಾರಿಗಳನ್ನು ಬೆದರಿಸಿ ರೈತರ ಜಮೀನುಗಳನ್ನು ಕಿತ್ತುಕೊಳ್ಳಲಾಗುತ್ತಿದೆ. ವಿರಕ್ತ ಮಠದ ಜಮೀನು ವಕ್ಫ್ಗೆ ಹೋಗುವಂತಾಗಿದೆ. ಕೊಪ್ಪಳದಲ್ಲಿ ದಲಿತರ ಜಮೀನು ಕಬಳಿಸಲಾಗುತ್ತಿದೆ. ಕಲಬುರಗಿಯ ಸವಳೇಶ್ವರ ಗ್ರಾಮದ ಬೀರೇಶ್ವರ ದೇಗುಲದ ಜಮೀನನ್ನು ವಕ್ಫ್ ಆಸ್ತಿ ಎಂದು ಗುರುತಿಸಲಾಗಿದೆ. ಇದಕ್ಕೆ ಸಿದ್ದರಾಮಯ್ಯ ಮತ್ತು ಜಮೀರ್ ಕಾರಣ ಎಂದರು.
ವಕ್ಫ್ ತಿದ್ದುಪಡಿ ಕಾಯಿದೆ ಸಂಸದೀಯ ಸಮಿತಿಯ ಮುಂದೆ ಇದೆ. ಪ್ರಧಾನಿ ನರೇಂದ್ರ ಮೋದಿ ಏನಾದರೂ ಈ ಕಾನೂನು ಜಾರಿಗೆ ತಂದರೆ, ರೈತರಿಂದ ಜಮೀನು ಪಡೆಯುವುದು ಕಷ್ಟ ಎಂಬ ಕಾರಣಕ್ಕೆ ಸಿದ್ದರಾಮಯ್ಯ ಹೀಗೆ ಮಾಡುತ್ತಿದ್ದಾರೆ ಎಂದರು.
ಸಂಘ, ಸಂಸ್ಥೆಗಳು ಪ್ರತಿಭಟನೆ ನಡೆಸಿದರೆ ಜಿಲ್ಲಾಧಿಕಾರಿಗಳ ಕಚೇರಿಗೇ ತೆರಳಿ ಮನವಿ ಪತ್ರ ಸಲ್ಲಿಸುವುದು ವಾಡಿಕೆ. ಆದರೆ, ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ ಬಂದಿದ್ದ ಕಾರಣಕ್ಕೆ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಪ್ರತಿಭಟನಾ ಸ್ಥಳಕ್ಕೇ ತೆರಳಿದ್ದರು. ಕಚೇರಿ ಆವರಣದ ಕಟ್ಟೆಯ ಮೇಲೆ ನಿಂತಿದ್ದ ವಿಜಯೇಂದ್ರ ಅವರನ್ನು ಕೆಳಗಿಳಿದು ಬರುವಂತೆ ಜಿಲ್ಲಾಧಿಕಾರಿ ಹೇಳಿದರು.
ಜಿಲ್ಲಾಧಿಕಾರಿ ಮಾತಿಗೆ ಆಕ್ರೋಶಗೊಂಡ ವಿಜಯೇಂದ್ರ, ಇಲ್ಯಾರೂ ರೌಡಿಗಳಿಲ್ಲ, ಪುಡಾರಿಗಳಿಲ್ಲ ಬನ್ನಿ ಎಂದರು. ಮರುಮಾತಾಡದೇ ಕಟ್ಟೆಯ ಬಳಿಗೇ ತೆರಳಿದ ಜಿಲ್ಲಾಧಿಕಾರಿ ಮನವಿ ಪತ್ರ ಸ್ವೀಕರಿಸಿದರು.




