ರಾಜ್ಯ ಸರ್ಕಾರ ಕೂಡ ಮುಂದೆ ಬಂದು ಪರಿಹಾರ ವಿತರಿಸಬೇಕು: ವಿಜಯೇಂದ್ರ

7 months ago

ಬೆಂಗಳೂರು: ಭಾರಿ ಪ್ರಮಾಣದ ಮಳೆ ಹಾನಿ ಹಾಗೂ ಪ್ರವಾಹ ಪರಿಸ್ಥಿತಿ ತಲೆದೂರಿರುವ ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ ಬಿಜೆಪಿ ನಾಯಕರು ಎರಡು ತಂಡಗಳಲ್ಲಿ ಸಮೀಕ್ಷೆ ಕಾರ್ಯ ಆರಂಭಿಸಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ಮತ್ತು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ನೇತೃತ್ವದ ತಂಡ ಬೀದರ್ ಜಿಲ್ಲೆಯಿಂದ ಸಮೀಕ್ಷೆ ಆರಂಭಿಸಿದ್ದು ತಕ್ಷಣವೇ ರಾಜ್ಯ ಸರ್ಕಾರ ತುರ್ತು ಪರಿಹಾರ ಕಾಮಗಾರಿ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಬೆಂಗಳೂರಿನಿಂದ ನಗರದ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮುಖಂಡರು, ಬೀದರ್‌ ತಾಲ್ಲೂಕಿನ ಪಾನ್‌ ಕಾಶೆಂಪುರ್‌ ಗ್ರಾಮಕ್ಕೆ ಭೇಟಿ ನೀಡಿದರು.

ಇತ್ತೀಚೆಗೆ ಸಾಲದ ಹೊರೆಗೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ರೈತ ಮಹಿಳೆ ಗಂಗಮ್ಮ ಮಚಕೂರೆ ಎಂಬುವರ ಮನೆಗೆ ತೆರಳಿ ವೈಯಕ್ತಿಕ ನೆರವು ನೀಡಿದರು. ಆನಂತರ ಬೀದರ್‌ ತಾಲ್ಲೂಕಿನ ಬರೀದಾಬಾದ್‌, ಬುಧೇರಾ ಹಾಗೂ ಇಸ್ಲಾಂಪುರ ಗ್ರಾಮದಲ್ಲಿ ಭಾರಿ ಮಳೆಗೆ ಬೆಳೆ ಹಾನಿಯಾದ ರೈತರ ಜಮೀನುಗಳನ್ನು ವೀಕ್ಷಿಸಿ, ರೈತರಿಗೆ ಸಾಂತ್ವನ ಹೇಳಿದರು.

ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ವಿಜಯೇಂದ್ರ, ಎನ್‌ಡಿಆರ್‌ಎಫ್‌ ಪರಿಹಾರ ಎಷ್ಟು ಬರಬೇಕೋ ಅಷ್ಟು ಬಂದೇ ಬರುತ್ತದೆ. ರಾಜ್ಯ ಸರ್ಕಾರ ಕೂಡ ಮುಂದೆ ಬಂದು ಪರಿಹಾರ ವಿತರಿಸಬೇಕು. ಅಧಿಕಾರಿಗಳನ್ನು ಬಂದು ಭೇಟಿ ಮಾಡಿ ಹೋಗುವುದರಲ್ಲಿ ಅರ್ಥವಿಲ್ಲ. ಸಂಕಷ್ಟದಲ್ಲಿರುವ ರೈತರಿಗೆ ತಕ್ಷಣವೇ ಸ್ಪಂದಿಸುವ ಕೆಲಸವಾಗಬೇಕು. ಸರ್ಕಾರ ಆ ಕೆಲಸ ಮಾಡಬೇಕು ಎಂದರು.

ಮುಖ್ಯಮಂತ್ರಿಯವರನ್ನು ನಾನು ಟೀಕಿಸಲ್ಲ. ಅವರಿಗೆ ವಿನಂತಿಪೂರ್ವಕವಾಗಿ ಆಗ್ರಹಿಸುತ್ತೇನೆ. ಬಿಜೆಪಿ ಸರ್ಕಾರವಿದ್ದಾಗ, ಯಡಿಯೂರಪ್ಪ ಮುಖ್ಯಮಂತ್ರಿ ಇದ್ದಾಗ ಎನ್‌ಡಿಆರ್‌ಆಫ್‌ ನಿಯಮಗಳಡಿ ಪರಿಹಾರ ನೀಡಲಾಗಿತ್ತು. ಅಷ್ಟೇ ಪರಿಹಾರ ರಾಜ್ಯ ಸರ್ಕಾರದಿಂದಲೂ ನೀಡಿದ್ದರು. ಮನೆ ಕಳೆದುಕೊಂಡವರು, ಬೆಳೆ ಹಾನಿಯಾದವರಿಗೆ ಪರಿಹಾರ ನೀಡಲಾಗಿತ್ತು. ಈಗಲೂ ರಾಜ್ಯ ಸರ್ಕಾರ ಅದೇ ರೀತಿ ಕೆಲಸ ಮಾಡಬೇಕು ಎಂದರು.

ರಾಜಕೀಯ ಮಾಡಲು ನಾವಿಲ್ಲಿಗೆ ಬಂದಿಲ್ಲ. ಸಂಕಷ್ಟದಲ್ಲಿರುವ ರೈತರ ಜೊತೆ ಇರಬೇಕು. ಸಂಕಷ್ಟಕ್ಕೆ ಸ್ಪಂದಿಸಬೇಕು. ರಾಜ್ಯ ಸರ್ಕಾರವನ್ನು ಎಚ್ಚರಿಸಲು ಬಂದಿದ್ದೇವೆ. ಎರಡು ದಿನ ಬೀದರ್‌, ಕಲಬುರಗಿ, ರಾಯಚೂರು ಜಿಲ್ಲೆಗಳಲ್ಲಿ ಪ್ರವಾಸ ಮಾಡಲಿದ್ದೇವೆ. ರೈತರ ಸಂಕಷ್ಟ ಅರಿತು ಸರ್ಕಾರದ ಗಮನ ಸೆಳೆಯುವ ಕೆಲಸ ಮಾಡುತ್ತೇವೆ ಎಂದರು.

ಅತಿವೃಷ್ಟಿಯಿಂದ ಹಾಗೂ ಮಹಾರಾಷ್ಟ್ರದ ಜಲಾಶಯಗಳಿಂದ ನೀರು ಹರಿಸುತ್ತಿರುವ ಕಾರಣದಿಂದ ಬೀದರ್‌, ಕಲಬುರಗಿ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ. ರೈತರು ಈಗಾಗಲೇ ಸಂಕಷ್ಟದಲ್ಲಿ ಇದ್ದರು. ಪ್ರವಾಹದಿಂದ ತೊಗರಿ, ಹೆಸರು ಸೇರಿದಂತೆ ಇತರೆ ಬೆಳೆಗಳು ಸಂಪೂರ್ಣ ನಾಶವಾಗಿದೆ. ಪ್ರವಾಹದಿಂದ ಹೆಚ್ಚಿನ ಸಂಕಷ್ಟವಾಗಿದೆ. ಬೆಳೆ ಜೊತೆಗೆ ಜನರು ಮನೆಗಳನ್ನು ಕಳೆದುಕೊಂಡಿದ್ದಾರೆ. ಅತಿವೃಷ್ಟಿಯಾದಾಗ, ಮಹಾರಾಷ್ಟ್ರದ ಜಲಾಶಯದಿಂದ ನೀರು ಬಿಟ್ಟಾಗ ನದಿ ತೀರದ ರೈತರು, ಬಡವರಿಗೆ ತೊಂದರೆಯಾಗುತ್ತಿದೆ. ರಾಜ್ಯ ಸರ್ಕಾರ ಶಾಶ್ವತ ಪರಿಹಾರದ ಬಗ್ಗೆ ಚಿಂತನೆ ನಡೆಸಬೇಕು ಎಂದರು.

ಬೆಂಗಳೂರಿನಿಂದ ನಗರದ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮುಖಂಡರು, ಬೀದರ್‌ ತಾಲ್ಲೂಕಿನ ಪಾನ್‌ ಕಾಶೆಂಪುರ್‌ ಗ್ರಾಮಕ್ಕೆ ಭೇಟಿ ನೀಡಿದರು.

Leave a Reply