ಸ್ಥಿತಿಗತಿ ವರದಿಯನ್ನು ಹೈಕೋರ್ಟ್​ಗೆ ಸಲ್ಲಿಸಿದ ರಾಜ್ಯ ಸರ್ಕಾರ

1 year ago

ಬೆಂಗಳೂರು: ಹುಬ್ಬಳ್ಳಿಯಲ್ಲಿ ಇತ್ತೀಚೆಗೆ ಐದು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಯತ್ನ ಹಾಗೂ ಕೊಲೆ ಮಾಡಿದ ಆರೋಪದಲ್ಲಿ ಪೊಲೀಸ್ ಎನ್​ಕೌಂಟರ್​ ಗೆ ಬಲಿಯಾದ ಬಿಹಾರದ ರಿತೇಶ್ ಕುಮಾರ್ ಪ್ರಕರಣದ ಕುರಿತಂತೆ ಸ್ಥಿತಿಗತಿ ವರದಿಯನ್ನು ರಾಜ್ಯ ಸರ್ಕಾರ ಹೈಕೋರ್ಟ್​ಗೆ ಸಲ್ಲಿಸಿದೆ.

ಎನ್ ಕೌಂಟರ್ ವಿರುದ್ಧ ಪೀಪಲ್ಸ್ ಯೂನಿಯನ್ ಫಾರ್​​ ಸಿವಿಲ್​ ಲಿಬರ್ಟೀಸ್​ ಮತ್ತು ಡಾ. ಮಧು ಭೂಷಣ್​​ ಎಂಬುವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಸಿಜೆ ಎನ್. ವಿ. ಅಂಜಾರಿಯಾ ಮತ್ತು ನ್ಯಾ. ಕೆ. ವಿ. ಅರವಿಂದ್ ಅವರ ವಿಭಾಗೀಯ ಪೀಠಕ್ಕೆ ಸರ್ಕಾರ ವರದಿ ಸಲ್ಲಿಸಿತು.

ವಿಚಾರಣೆ ವೇಳೆ ಅಡ್ವೊಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ, ಸಮಯದ ಕೊರತೆ ಹಿನ್ನೆಲೆಯಲ್ಲಿ ಸ್ಥಿತಿಗತಿ ವರದಿಯನ್ನು ನ್ಯಾಯಾಲಯದಲ್ಲಿ ಸಲ್ಲಿಸಲಾಗಿದೆ. ಸುಪ್ರೀಂಕೋರ್ಟ್ ಮಾರ್ಗಸೂಚಿಗಳಂತೆ ಎಲ್ಲ ಅಂಶಗಳನ್ನು ಪಾಲಿಸಲಾಗಿದೆ. ನ್ಯಾಯಾಲಯದ ಆದೇಶ ಪಾಲಿಸುವುದು ನಮ್ಮ ಕರ್ತವ್ಯವಾಗಿದೆ ಎಂದು ಪೀಠಕ್ಕೆ ತಿಳಿಸಿದರು.

ಇದಕ್ಕೆ ಸಮ್ಮತಿಸಿದ ನ್ಯಾಯಪೀಠ, ಅರ್ಜಿದಾರರ ಪರ ವಕೀಲರನ್ನು ಉದ್ದೇಶಿಸಿ, ಸರ್ಕಾರದ ವರದಿ ಸಲ್ಲಿಸಿದ್ದು, ಸರ್ಕಾರದ ಪಾತ್ರ ಮುಗಿದಿದೆ. ಇಷ್ಟಾದರೂ ಅರ್ಜಿ ಬಾಕಿ ಉಳಿಸಬೇಕೆಂದರೆ ಉಳಿಸಲಾಗುವುದು ಎಂದು ತಿಳಿಸಿತು.

ಈ ವೇಳೆ ಅರ್ಜಿದಾರರ ಪರ ವಕೀಲರು, ರಿತೇಶ್ ಕುಮಾರ್ ಎನ್​​​​ಕೌಂಟರ್​​ ಪ್ರಕರಣದ ತನಿಖೆ ಮತ್ತು ವಿಚಾರಣೆಯ ಮೇಲೆ ಹೈಕೋರ್ಟ್ ನಿಗಾ ಇಡಬೇಕು. ಪಿಯುಸಿಎಲ್ ವರ್ಸಸ್ ಮಹಾರಾಷ್ಟ್ರ ರಾಜ್ಯ ಪ್ರಕರಣದಲ್ಲಿನ ಮಾರ್ಗಸೂಚಿಗಳನ್ನು ಪಾಲಿಸಬೇಕು ಎಂದು ಮನವಿ ಮಾಡಿದರು.

ಇದಲ್ಲದೇ ಹಿರಿಯ ವಕೀಲ ಆದಿತ್ಯ ಸೋಂಧಿ ಅವರು ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ಭಾಗಿಯಾಗಿರುವುದರಿಂದ ಅಂತಿಮ ವಾದ ಮಂಡಿಸಲು ಕಾಲಾವಕಾಶ ನೀಡಬೇಕು ಎಂದು ಕೋರಿದರು. ಈ ಅಂಶ ಪರಿಗಣಿಸಿದ ಪೀಠ ವಿಚಾರಣೆಯನ್ನು ಏಪ್ರಿಲ್ 28ಕ್ಕೆ ವಿಚಾರಣೆಯನ್ನು ಮುಂದೂಡಿತು.

Leave a Reply