ರಾಜ್ಯ ವಿದ್ಯುತ್ ಸ್ವಾವಲಂಬನೆಯತ್ತ ಹೆಜ್ಜೆ ಹಾಕಿದೆ: ಗೌರವ್ ಗುಪ್ತ

4 months ago

ಬೆಂಗಳೂರು: ವಿದ್ಯುತ್ ಉತ್ಪಾದನೆಯಲ್ಲಿ ಕರ್ನಾಟಕ ಸ್ವಾವಲಂಬಿಯಾಗುವತ್ತ ಹೆಜ್ಜೆ ಇಟ್ಟಿದ್ದು, ಶೂನ್ಯ ಅಡಚಣೆಯೊಂದಿಗೆ ಗ್ರಾಹಕರಿಗೆ ವಿದ್ಯುತ್ ಪೂರೈಸುವ ಮೂಲಕ ಉತ್ಪಾದನೆ ಮತ್ತು ಸರಬರಾಜಿನಲ್ಲಿ ಸಮನ್ವಯ ಸಾಧಿಸಬೇಕು ಎಂದು ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ  ಕರೆ ನೀಡಿದ್ದಾರೆ.

ಕರ್ನಾಟಕ ವಿದ್ಯುಚ್ಛಕ್ತಿ ಮಂಡಳಿ ಇಂಜಿನಿಯರುಗಳ ಸಂಘದ ಆಯೋಜಿಸಿದ್ದ ಸಂಘದ ಸುವರ್ಣ ಮಹೋತ್ಸವ ಸಂಸ್ಮರಣಾ ಉಪನ್ಯಾಸ, 2026ರ ತಾಂತ್ರಿಕ ದಿನಚರಿ ಬಿಡುಗಡೆ ಮಾಡಿ ಅವರು ಮಾತನಾಡಿದರು.

ಕೋವಿಡ್ ನಂತರ ವಿದ್ಯುತ್ ಬೇಡಿಕೆ ಸಾಕಷ್ಟು ಪ್ರಮಾಣದಲ್ಲಿ ಏರಿಕೆಯಾದಾಗ ಅಗತ್ಯ ಪೂರೈಸಲು ನಮ್ಮಲ್ಲಿ ಯೋಜನೆಗಳಿರಲಿಲ್ಲ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಸಭೆ ನಡೆಸಿ ಹೆಚ್ಚುವರಿ ವಿದ್ಯುತ್ ಉತ್ಪಾದನೆಗೆ ತ್ವರಿತ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು. ಅದರ ಪರಿಣಾಮ ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ತ್ವರಿತಗೊಂಡು ರಾಜ್ಯ ವಿದ್ಯುತ್ ಸ್ವಾವಲಂಬನೆಯತ್ತ ಹೆಜ್ಜೆ ಹಾಕಿದೆ ಎಂದರು.

ಈಗ ಇನ್ನು ಮುಂದೆ ಯಾವುದೇ ಅಡಚಣೆಯಿಲ್ಲದಂತೆ ಗ್ರಾಹಕರಿಗೆ ವಿದ್ಯುತ್‌ ಪೂರೈಸುವತ್ತ ಗಮನ ಹರಿಸಬೇಕು. ಅದಕ್ಕೆ ಬೇಕಾದ ಮೂಲ ಸೌಕರ್ಯಗಳನ್ನು ಹೆಚ್ಚಿಸಿಕೊಳ್ಳುವತ್ತ ಸರ್ಕಾರ ಹೆಜ್ಜೆ ಇಟ್ಟಿದ್ದು, ಇದಕ್ಕೆ ಇಂಜಿನಿಯರುಗಳು ಸಹಕರಿಸಬೇಕು ಎಂದು ಮನವಿ ಮಾಡಿದರು.

ಇಂಧನ ಇಲಾಖೆಯ ಇಂಜಿನಿಯರುಗಳ ಹಲವು ಬೇಡಿಕೆಗಳ  ಬಗ್ಗೆ ಮುಂದಿನ ಸಭೆಗಳಲ್ಲಿ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು. ಇಂಜಿನಿಯರುಗಳ ಬೇಡಿಕೆಗಳನ್ನು ಈಡೇರಿಸಿ ಇಲಾಖೆಯನ್ನು ಇನ್ನಷ್ಟು ಬಲಿಷ್ಠಗೊಳಿಸಲು ಸರ್ಕಾರ ಬದ್ಧವಾಗಿದೆ ಎಂದರು.

Leave a Reply