ರಾಜ್ಯ ಹೈಕೋರ್ಟ್ಗೆ ಏಪ್ರಿಲ್ 29 ರಿಂದ ಮೇ 25ರವರೆಗೆ ಬೇಸಿಗೆ ರಜೆ

2 years ago

ಬೆಂಗಳೂರು: ರಾಜ್ಯ ಹೈಕೋರ್ಟ್ಗೆ ಏಪ್ರಿಲ್ 29 ರಿಂದ ಮೇ 25ರವರೆಗೆ ಬೇಸಿಗೆ ರಜೆ ಇರಲಿದ್ದು, ತುರ್ತು ಪ್ರಕರಣಗಳ ವಿಚಾರಣೆ ನಡೆಸಲು ಬೆಂಗಳೂರಿನ ಪ್ರಧಾನ ಪೀಠ, ಧಾರವಾಡ ಹಾಗೂ ಕಲಬುರ್ಗಿಯಲ್ಲಿ ವಿಭಾಗೀಯ ಮತ್ತು ಏಕಸದಸ್ಯ ನ್ಯಾಯಮೂರ್ತಿಗಳನ್ನು ಒಳಗೊಂಡ ರಜಾಕಾಲೀನ ಪೀಠಗಳನ್ನು ರಚಿಸಲಾಗಿದೆ.

ಬೆಂಗಳೂರಿನ ಪ್ರಧಾನ ಪೀಠ, ಕಲಬುರಗಿ ಮತ್ತು ಧಾರವಾಡ ಪೀಠದಲ್ಲಿ ರಜಾಕಾಲದ ಪೀಠಗಳು ಕಾರ್ಯನಿರ್ವಹಣೆ ಮಾಡಲಿವೆ. ಈ ವೇಳೆ, ತಡೆಯಾಜ್ಞೆ, ಮಧ್ಯಂತರ ನಿರ್ದೇಶನ ಮತ್ತು ತಾತ್ಕಾಲಿಕ ಪ್ರತಿಬಂಧಕಾದೇಶ ಇತ್ಯಾದಿ ಪ್ರಕರಣಗಳ ವಿಚಾರಣೆಯನ್ನು ಮಾತ್ರ ರಜಾಕಾಲೀನ ಅವಧಿಯಲ್ಲಿ ನಡೆಸಲಾಗುತ್ತದೆ.

ಮೇಲ್ಮನವಿ, ಕ್ರಿಮಿನಲ್ ಮೇಲ್ಮನವಿ, ಕ್ರಿಮಿನಲ್ ಅರ್ಜಿ, ಸಿವಿಲ್ ರೂಪದ ಅರ್ಜಿಗಳ ವಿಚಾರಣೆ ಇರುವುದಿಲ್ಲ. ಇ-ಫೈಲಿಂಗ್ ಪೋರ್ಟಲ್ ಮೂಲಕ ಇ-ಫೈಲಿಂಗ್ ಮಾಡಬಹುದಾಗಿದೆ ಎಂದು ರಿಜಿಸ್ಟ್ರಾರ್ (ಜುಡಿಷಿಯಲ್) ಎಂ.ಚಂದ್ರಶೇಖರ್ ರೆಡ್ಡಿ ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.

ನ್ಯಾಯಾಧೀಶರ ವರ್ಗಾವಣೆ: ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ಸೇವೆ ಸಲ್ಲಿಸುತ್ತಿರುವ 388 ನ್ಯಾಯಾಧೀಶರನ್ನು ವರ್ಗಾವಣೆ ಮಾಡಲಾಗಿದೆ. ಮುಖ್ಯ ನ್ಯಾಯಮೂರ್ತಿಗಳ ನಿರ್ದೇಶನದಂತೆ ಈ ವರ್ಗಾವಣೆ ಆದೇಶ ಹೊರಡಿಸಲಾಗಿದೆ. ಈ ವರ್ಗಾವಣೆಗಳು ಮೇ 27ರಿಂದ ಜಾರಿಗೆ ಬರಲಿವೆ ಎಂದು ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಕೆ.ಎಸ್.ಭರತ್ ಕುಮಾರ್ ತಿಳಿಸಿದ್ದಾರೆ.

ವರ್ಗಾವಣೆ ಪಟ್ಟಿಯನ್ನು ಹೈಕೋರ್ಟ್ನ ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿದೆ. 6 ಜಿಲ್ಲಾ ನ್ಯಾಯಾಧೀಶರು ಮತ್ತು ಹಿರಿಯ ಸಿವಿಲ್ ನ್ಯಾಯಾಧೀಶರನ್ನು ಬೇರೆ ಬೇರೆ ರಿಜಿಸ್ಟ್ರಾರ್ಗಳ ಹುದ್ದೆಗಳಿಗೆ ವರ್ಗಾವಣೆ ಮಾಡಲಾಗಿದೆ. ಅಂತೆಯೇ 62 ಜಿಲ್ಲಾ ನ್ಯಾಯಾಧೀಶರನ್ನು ವರ್ಗಾವಣೆ ಮಾಡಿದ್ದು, 16 ಹಿರಿಯ ಸಿವಿಲ್ ನ್ಯಾಯಾಧೀಶರಿಗೆ ಪದೋನ್ನತಿ ನೀಡಿ ವರ್ಗಾವಣೆ ಮಾಡಲಾಗಿದೆ. ಜೊತೆಗೆ 166 ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ 138 ಸಿವಿಲ್ ನ್ಯಾಯಾಧೀಶರನ್ನು ಬೇರೆ ಬೇರೆ ಸ್ಥಳಗಳಿಗೆ ನಿಯೋಜನೆ ಮಾಡಿ ಆದೇಶ ಹೊರಡಿಸಿದೆ.

Leave a Reply