ಕೋಮುವಾದದ ಹೆಸರಿನಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ನಿಲ್ಲಲಿ: ರಾಧಾ ಮೂಡಬಿದ್ರೆ

1 year ago

ಮಂಗಳೂರು: ದೇಶದ ಐಕ್ಯತೆಯನ್ನು ಒಡೆಯಲು ಸಂಚು ರೂಪಿಸುತ್ತಿರುವ ಕೋಮುವಾದಿ ಶಕ್ತಿಗಳು ತನ್ನ ಬೇಳೆ ಬೇಯಿಸಿಕೊಳ್ಳಲು ಮಹಿಳೆಯರನ್ನು ಪ್ರಧಾನ ಅಸ್ತ್ರವನ್ನಾಗಿಸಿದೆ ಮಾತ್ರವಲ್ಲದೆ ಕೋಮುವಾದದ ಪಿಡುಗಿಗೆ ಮೊದಲ ಬಲಿ ಮಹಿಳೆಯೇ ಆಗಿದ್ದಾಳೆ. ಕೋಮುವಾದದ ಹೆಸರಿನಲ್ಲಿ ಮಹಿಳೆಯರ ಮೇಲಾಗುತ್ತಿರುವ ದೌರ್ಜನ್ಯದ ವಿರುದ್ಧ ಮಹಿಳೆಯರು ಸಂಘಟಿತ ಹೋರಾಟ ನಡೆಸಬೇಕೆಂದು ಎಂದು CITU ಕರ್ನಾಟಕ ರಾಜ್ಯ ಉಪಾಧ್ಯಕ್ಷರೂ, ಪುತ್ತಿಗೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರಾಧಾ ಮೂಡಬಿದ್ರೆ ಹೇಳಿದ್ದಾರೆ.

ಮಂಗಳೂರಿನ ಮಿನಿ ವಿಧಾನಸೌಧದ ಎದುರು CITU ಸಂಯೋಜಿತಗೊಂಡಿರುವ ದುಡಿಯುವ ಮಹಿಳೆಯರ ಸಮನ್ವಯ ಸಮಿತಿಯ ಆಶ್ರಯದಲ್ಲಿ ಜರುಗಿದ 117ನೇ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಉದ್ಘಾಟಿಸುತ್ತಾ ಈ ಮಾತುಗಳನ್ನು ಹೇಳಿದರು.

ದುಡಿಯುವ ಮಹಿಳೆಯರ ಸಮನ್ವಯ ಸಮಿತಿಯ ಜಿಲ್ಲಾ ನಾಯಕರಾದ ಜಯಂತಿ ಬಿ ಶೆಟ್ಟಿ ಮಾತನಾಡುತ್ತಾ, ಪ್ರತಿಯೊಂದು ಸಂದರ್ಭದಲ್ಲಿಯೂ ಮಹಿಳೆಯರನ್ನು ಅತ್ಯಂತ ತುಚ್ಛವಾಗಿ ಕಾಣುವ ಈ ಸಮಾಜದಲ್ಲಿ ಮಹಿಳಾ ಸಬಲೀಕರಣದ ಬಗ್ಗೆ ಹೆಚ್ಚೆಚ್ಚು ಚರ್ಚಿಸುವ ಮೂಲಕ ಮಹಿಳಾ ಸಮುದಾಯವನ್ನು ಮುಖ್ಯವಾಹಿನಿಗೆ ತರುವ ಕೆಲಸವನ್ನು ಸಮಾಜದ ಪ್ರತಿಯೊಬ್ಬರೂ ಮಾಡಬೇಕಾಗಿದೆ ಎಂದರು.

CITU ಜಿಲ್ಲಾ ಹಿರಿಯ ನಾಯಕರಾದ ಪದ್ಮಾವತಿ ಶೆಟ್ಟಿಯವರು ಮಾತನಾಡುತ್ತಾ, ಜಾಗತೀಕರಣದ ಕಪಿಮುಷ್ಠಿಯಲ್ಲಿ ನಲುಗುತ್ತಿರುವ ಭಾರತದಲ್ಲಿ ಮಹಿಳೆಯರ ದುಡಿಮೆಯನ್ನು ಅತ್ಯಂತ ಕೀಳಾಗಿ ಕಾಣಲಾಗುತ್ತದೆ.ಕಡಿಮೆ ಕೂಲಿಗೆ ಗರಿಷ್ಠ ಅವಧಿಯಲ್ಲಿ ಮಹಿಳೆಯರನ್ನು ದುಡಿಸುವ ಮೂಲಕ ಮತ್ತೆ ಮಹಿಳೆಯರನ್ನು ಗುಲಾಮರನ್ನಾಗಿಸುವ ವ್ಯವಸ್ಥೆಯನ್ನು ಸ್ಪಷ್ಟಸಲಾಗುತ್ತದೆ ಎಂದರು.

ಸಮಾರೋಪ ಭಾಷಣ ಮಾಡಿದ CITU ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಮಾತನಾಡುತ್ತಾ, ಮಹಿಳೆಯರ ಭಾಗವಹಿಸುವಿಕೆಯಿಲ್ಲದೆ ಸಮಾಜದ ಅಭಿವೃದ್ಧಿ ಯಾವತ್ತೂ ಸಾಧ್ಯವಿಲ್ಲ. ಪ್ರತಿಯೊಂದು ದೇಶದ ಆರ್ಥಿಕತೆಯಲ್ಲಿ ಪ್ರಧಾನ ಪಾತ್ರ ವಹಿಸುವ ಮಹಿಳಾ ವಿಭಾಗದ ಸರ್ವಾಂಗೀಣ ಅಭಿವೃದ್ಧಿಗೆ ಆಳುವ ವರ್ಗಗಳು ವಿಶೇಷ ಗಮನ ನೀಡಬೇಕಾಗಿದೆ* ಎಂದರು.

ಕಾರ್ಯಕ್ರಮವನ್ನುದ್ದೇಶಿಸಿ ದುಡಿಯುವ ಮಹಿಳೆಯರ ಸಮನ್ವಯ ಸಮಿತಿಯ ಮುಖಂಡರಾದ ಈಶ್ವರಿ‌ ಬೆಳ್ತಂಗಡಿ, ನಳಿನಾಕ್ಷಿ ಶೆಟ್ಟಿ,ಭಾರತಿ ಬೋಳಾರ, ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾ ಮುಖಂಡರಾದ ಕಿರಣಪ್ರಭಾ, ಅಸುಂತ ಡಿಸೋಜರವರು ಮಾತನಾಡಿದರು.

ಮಹಿಳಾ ವಿಮೋಚನೆ ಹಾಗೂ ಮಹಿಳೆಯರ ಸಂಕಷ್ಟಗಳ ಬಗ್ಗೆ ಸುಂದರವಾದ ಹಾಡುಗಳನ್ನು ಮಹಿಳಾ ಮುಖಂಡರಾದ ಗಿರಿಜಾ ಮೂಡಬಿದ್ರೆ, ಜಯಶ್ರೀ ಬೆಳ್ತಂಗಡಿ, ವಸಂತಿ ಕುಪ್ಪೆಪದವು ಹಾಡಿದರು.

ಕಾರ್ಯಕ್ರಮದಲ್ಲಿ CITU ಜಿಲ್ಲಾ ನಾಯಕರಾದ ಜೆ ಬಾಲಕೃಷ್ಣ ಶೆಟ್ಟಿ, ವಸಂತ ಆಚಾರಿ ರೈತ ನಾಯಕ ಸದಾಶಿವದಾಸ್, ಯುವಜನ ಮುಖಂಡರಾದ ಸಂತೋಷ್ ಬಜಾಲ್, ರಿಜ್ವಾನ್ ಹರೇಕಳ, ಮಹಿಳಾ ಸಂಘಟನೆಗಳ ಮುಖಂಡರಾದ ಪ್ರಮೀಳಾ ದೇವಾಡಿಗ, ಫ್ಲೇವಿ ಕ್ರಾಸ್ತಾ ಅತ್ತಾವರ, ಗ್ರೆಟ್ಟಾ ಟೀಚರ್, ವಿಲಾಸಿನಿ ತೊಕ್ಕೋಟ್ಟು, ಪ್ರಮೋದಿನಿ, ಜಯಲಕ್ಷ್ಮಿ, ರೋಹಿಣಿ, ಗೀತಾ, ಭವಾನಿ ವಾಮಂಜೂರು, ಲಕ್ಷ್ಮಿ ಮೂಡಬಿದ್ರೆ, ಲೋಲಾಕ್ಷಿ ಬಂಟ್ವಾಳ ಭಾಗವಹಿಸಿದ್ದರು. ಜಿಲ್ಲಾ ಮಹಿಳಾ ಮುಖಂಡರಾದ ಪ್ರಮೀಳಾ ಶಕ್ತಿನಗರರವರು ಪ್ರಸ್ತಾವಿಕ ಮಾತುಗಳನ್ನಾಡಿ ಕಾರ್ಯಕ್ರಮವನ್ನು ನಿರೂಪಿಸಿದರು.

Leave a Reply