ಸಿ.ಎಂ.ಇಬ್ರಾಹಿಂ ನೇತೃತ್ವದಲ್ಲಿ ಎನ್.ಸಿ.ಪಿ ಕಟ್ಟುವ ತಂತ್ರಗಾರಿಕೆ

2 years ago

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಸೇರಿದಂತೆ ಹಲವು ಪ್ರಸ್ತಾಪ ಆರೋಪ ಪ್ರಕರಣಗಳನ್ನು ಕೈಗೆತ್ತಿಕೊಂಡಿರುವ ವಿಪಕ್ಷಗಳು ಸರ್ಕಾರದ ವಿರುದ್ಧ ಮುಗಿಬೀಳುತ್ತಿರುವ ಬೆನ್ನಲ್ಲೇ ತೆರೆಮರೆಯಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆಗಳು ನಡೆಯತೊಡಗಿವೆ.

ಲೋಕಸಭೆ ಚುನಾವಣೆ ಸಮಯದಲ್ಲಿ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡ ಜೆಡಿಎಸ್ ನಿರ್ಧಾರ ಪ್ರತಿಭಟಿಸಿ ಆ ಪಕ್ಷದಿಂದ ಹೊರಬಂದು ತಮ್ಮದೇ ನಿಜವಾದ ಜೆಡಿಎಸ್ ಎಂದು ಪ್ರತಿಪಾದಿಸಿ ನ್ಯಾಯಾಂಗ ಹೋರಾಟ ಆರಂಭಿಸಿರುವ ಮಾಜಿ ಸಚಿವ ಸಿಎಂ ಇಬ್ರಾಹಿಂ ಅವರನ್ನು ಮುಂದಿಟ್ಟುಕೊಂಡು ಹೊಸ ರಾಜಕೀಯ ಪ್ರಯೋಗಕ್ಕೆ ಸಿಎಂ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಾಗಿದ್ದಾರೆ. 

ಜೆ ಡಿ ಎಸ್ ನಿಂದ ಹೊರಬಂದಿರುವ ಸಿ.ಎಂ.ಇಬ್ರಾಹಿಂ ಅವರ ನೇತೃತ್ವದಲ್ಲಿ ಕರ್ನಾಟಕದಲ್ಲಿ ಶರದ್ ಪವಾರ್ ನೇತೃತ್ವದ ಎನ್ ಸಿ ಪಿ ಸಂಘಟಿಸುವ ಪ್ರಯತ್ನಕ್ಕೆ ಕೈ ಹಾಕಿದ್ದಾರೆ. ಸಿದ್ದರಾಮಯ್ಯ ಮತ್ತು ಸಿ.ಎಂ.ಇಬ್ರಾಹಿಂ ಅವರು ಈಗಾಗಲೇ ಹಲವು ಸುತ್ತಿನಲ್ಲಿ ಶರದ್ ಪವಾರ್ ಜೊತೆ ಮಾತುಕತೆ ನಡೆಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಸಿ.ಎಂ.ಇಬ್ರಾಹಿಂ ನೇತೃತ್ವದಲ್ಲಿ ಕರ್ನಾಟಕದಲ್ಲಿ ಎನ್ ಸಿ ಪಿ ಘಟಕ ತಲೆ ಎತ್ತಲಿದ್ದು, ಈ ಪಕ್ಷದೊಂದಿಗೆ ಜೆಡಿಎಸ್ ನಲ್ಲಿರುವ ಕೆಲವು ಅತೃಪ್ತ ಶಾಸಕರು ಮತ್ತು ಬಿಜೆಪಿಯಲ್ಲಿರುವ ಕೆಲವು ಶಾಸಕರು ಅಧಿಕೃತವಾಗಿ ಗುರುತಿಸಿಕೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.

ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಹಲವು ಹೊಸ ವಿಚಾರಗಳನ್ನು ಮುಂದಿಟ್ಟುಕೊಂಡು ರಾಜ್ಯ ಸರ್ಕಾರದ ವಿರುದ್ಧ ಸಮರ ಸಾರಿದ್ದಾರೆ‌. ಇವರಿಗೆ ತಿರುಗೇಟು ನೀಡುವ ದೃಷ್ಟಿಯಿಂದ ಈ ರಾಜಕೀಯ ತಂತ್ರಗಾರಿಕೆ ನಡೆಸಲಾಗಿದೆ ಎಂದು ಹೇಳಲಾಗುತ್ತಿದೆ.

ಸದ್ಯ ವಿಧಾನಸಭೆಯಲ್ಲಿ ಜೆಡಿಎಸ್ ನ 19 ಶಾಸಕರಿದ್ದು ಇವರಲ್ಲಿ ಅನೇಕರು ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಪರಿಣಾಮ ಅಸಮಾಧಾನಗೊಂಡಿದ್ದಾರೆ. ಹೀಗಾಗಿ ಇವರನ್ನು ಎನ್ ಸಿ ಪಿ ಗೆ ಸೆಳೆದುಕೊಂಡು ಜೆಡಿಎಸ್ ಬಲ ಕುಗ್ಗಿಸಲು ಪ್ರಯತ್ನ ನಡೆಸಲಾಗುತ್ತಿದೆ ಎಂದು ಸಿ.ಎಂ.ಇಬ್ರಾಹಿಂ ಆಪ್ತ ಮೂಲಗಳಿಂದ ತಿಳಿದುಬಂದಿದೆ.

ಸುಮಾರು 10ಕ್ಕೂ ಹೆಚ್ಚು ಜೆಡಿಎಸ್ ಶಾಸಕರು ನೂತನವಾಗಿ ರಚನೆಯಾಗಲಿರುವ ಎನ್‌ಸಿಪಿ ಜೊತೆ ಗುರುತಿಸಿಕೊಳ್ಳುವ ಸಾಧ್ಯತೆಯಿದ್ದು ಹೀಗೆ ಹೀಗೆ ಮಾಡಿದಲ್ಲಿ ಕುಮಾರಸ್ವಾಮಿ ಅವರ ಆತ್ಮಬಲ ಕುಗ್ಗಲಿದೆ ಎಂಬ ಲೆಕ್ಕಾಚಾರ ಹಾಕಲಾಗಿದೆ.

ಆಷಾಡ ಮಾಸ ಮುಗಿಯುತ್ತಿದ್ದಂತೆ ಕರ್ನಾಟಕದಲ್ಲಿ ಶರದ್ ಪವಾರ್ ನೇತೃತ್ವದಲ್ಲಿ ಪಕ್ಷ ಸಂಘಟಿಸುವ ಯತ್ನಗಳು ಚುರುಕು ಪಡೆಯಲಿವೆ ಎನ್ನಲಾಗಿದೆ.

Leave a Reply