ವಿಜಯೇಂದ್ರ ಪದಚ್ಯುತಿಗೊಳಿಸುವವರೆಗೆ ಹೋರಾಟ ನಿಲ್ಲುವುದಿಲ್ಲ: ಯತ್ನಾಳ್

1 year ago

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಬೆಂಬಲಕ್ಕೆ ಧಾವಿಸಿರುವ ಹಿರಿಯ ನಾಯಕ ಬಸವನಗೌಡ ಪಾಟೀಲ್ ಯತ್ನಾಳ್, ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಅವರನ್ನು ಪದಚ್ಯುತಿಗೊಳಿಸುವವರೆಗೆ ತಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಘೋಷಿಸಿದ್ದಾರೆ.

ಯಾವುದೇ ಕಾರಣಕ್ಕೂ ನಾವು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ವಿಜಯೇಂದ್ರ ನಾಯಕತ್ವವನ್ನು ಒಪ್ಪಿಕೊಳ್ಳುವುದಿಲ್ಲ. ಪಕ್ಷದ ವಿಚಾರ ಬಂದಾಗ ನಾನು ಯಾವಾಗಲೂ ಪಕ್ಷಕ್ಕೆ ನಿಷ್ಠನಾಗಿರುತ್ತೇನೆ. ಆದರೆ ನಾಯಕತ್ವ ವಿಚಾರ ಬಂದಾಗ ವಿಜಯೇಂದ್ರ ಅವರನ್ನು ಒಪ್ಪಿಕೊಳ್ಳಲು ಸಾಧ್ಯವೇ ಇಲ್ಲ. ಮೊದಲು ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬೇರೆಯವರ ಬಗ್ಗೆ ಮಾತನಾಡಲಿ ಎಂದು ತಾಕೀತು ಮಾಡಿದರು.

ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜೀನಾಮೆ ಕೇಳುವ ವಿಜಯೇಂದ್ರ ಮೊದಲು ರಾಜ್ಯಾಧ್ಯಕ್ಷ ಸ್ಥಾನ ಬಿಟ್ಟುಕೊಡಬೇಕು. ಯಾವುದೇ ಕಾರಣಕ್ಕೂ ಅವರ ನಾಯಕತ್ವವನ್ನು ನಾವು ಒಪ್ಪಿಕೊಳ್ಳುವುದಿಲ್ಲ. ನಮ್ಮ ನಿಲುವನ್ನು ನಾವು ಈಗಾಗಲೇ ವರಿಷ್ಠರ ಬಳಿ ಸ್ಪಷ್ಟಪಡಿಸಿದ್ದೇವೆ ಎಂದರು.

ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಅವರ ನಕಲಿ ಸಹಿಗಳನ್ನು ಹಾಕುತ್ತಿದ್ದುದೆ ವಿಜಯೇಂದ್ರ. ಹೀಗಾಗಿಯೇ ಯಡಿಯೂರಪ್ಪರು ಜೈಲಿಗೆ ಹೋಗಬೇಕಾಯಿತು. ಇಂಥ ಗುಣಗಳನ್ನು ಹೊಂದಿರುವ ವಿಜಯೇಂದ್ರನನ್ನು ನಾವು ಅಧ್ಯಕ್ಷ ಎಂದು ಒಪ್ಪಿಕೊಳ್ಳಲು ಸಾಧ್ಯವೇ ಎಂದು ಪ್ರಶ್ನಿಸಿದರು.

ಯಡಿಯೂರಪ್ಪನವರಿಗೆ ಅವರ ಮನೆಯಲ್ಲೇ ಕಿಮ್ಮತ್ತಿಲ್ಲ, ವಿಜಯೇಂದ್ರ ಹೊರಗಡೆ ಪೂಜ್ಯ ತಂದೆ, ಮನೆಯಲ್ಲಿ ಮುದಿಯಾ ಎಂದು ಕರೆಯುತ್ತಾನೆ. ಯಡಿಯೂರಪ್ಪ ಮೊದಲು ಮಗನ ವ್ಯಾಮೋಹ ಬಿಡಲಿ. ಯಡಿಯೂರಪ್ಪ ಕೂಡ ಎಷ್ಟು ಜನರಿಗೆ ಮೋಸ ಮಾಡಿಲ್ಲ. ಮಾಜಿ ರಾಜ್ಯಾಧ್ಯಕ್ಷ ಬಿ.ಬಿ.ಶಿವಪ್ಪ, ಮಲ್ಲಿಕಾರ್ಜುನಯ್ಯ ಅವರಿಗೆ ಅನ್ಯಾಯ ಮಾಡಿದ್ದಾರೆ. ತಮ್ಮ ಸ್ವಾರ್ಥಕ್ಕಾಗಿ ಅನೇಕರನ್ನು ಮಣ್ಣಲ್ಲಿ ಇಟ್ಟಿದ್ದಾರೆ. ಸುಮ್ಮನೇ ಮೊಮ್ಮಕ್ಕಳ ಜೊತೆ ಆಟ ಆಡುತ್ತಾ ಕೂಡಲಿ ಎಂದರು.

ನಮ್ಮ ವಿರುದ್ಧ ಎರಡು ಹಂದಿಗಳು ಬಿಟ್ಟರೆ ಬೇರೆ ಯಾರೂ ಮಾತನಾಡುವುದಿಲ್ಲ. ಆ ಹಂದಿಗಳಿಗೆ ನಾವು ತಲೆಕೆಡಿಸಿಕೊಳ್ಳುವುದಿಲ್ಲ. ವಿಜಯೇಂದ್ರ ಪರ ಹೊಗಳು ಭಟರು ಮಾತ್ರ ಮಾತನಾಡುತ್ತಾರೆ ಎಂದರು.

ನಾನು ಸದಾಕಾಲ ರಮೇಶ್ ಜಾರಕಿಹೊಳಿ ಪರವಾಗಿದ್ದೇನೆ. ವಿಜಯೇಂದ್ರ ರಾಜ್ಯಾಧ್ಯಕ್ಷನಾಗಲು ಲಾಯಕ್ಕಿಲ್ಲ. ಅವನನ್ನು ನಾವ್ಯಾರು ಒಪ್ಪಲ್ಲ, ಅವನು ಕೂಡ ರಾಜೀನಾಮೆ ಕೊಡಬೇಕು. ಇವನಿಂದಲೇ ಸುನೀಲ್ ಕುಮಾರ್ ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ಬಿಡುಗಡೆಗೊಳಿಸುವಂತೆ ಕೋರಿದ್ದಾರೆ. ರಮೇಶ್ ಜಾರಕಿಹೊಳಿ ಅವರು ಮಾತನಾಡಿರುವುದರಲ್ಲಿ ತಪ್ಪೇನಿಲ್ಲ. ನಾವು ಉತ್ತರ ಕರ್ನಾಟಕದ ಜನರು ಹೀಗೇ, ಸತೀಶ್ ಜಾರಕಿಹೊಳಿ ಅವರು ಹೇಳಿದ್ದಾಗ ಕೂಡ ನಾನು ಒಬ್ಬನೆ ಹೋಗಿದ್ದೆ. ನಾವು ಯಾರಿಗೂ ಹೆದರುವುದಿಲ್ಲ ಎಂದರು.

Leave a Reply