ವಿದ್ಯಾರ್ಥಿಗಳು ರ್ಯಾಗಿಂಗ್ ಮರೆತು ವಿದ್ಯಾಭ್ಯಾಸದ ಕಡೆ ಗಮನಕೊಡಿ

2 years ago

ನ್ಯಾಯಾಧೀಶ ಮಹಾವೀರ ಮ.ಕರೆಣ್ಣವರ ಕರೆ

ದಾವಣಗೆರೆ: ವಿದ್ಯಾರ್ಥಿ ಜೀವನದಲ್ಲಿ ರ್ಯಾಗಿಂಗ್ ಎಂಬುವುದು ಪೆಡಂಭೂತ, ಇದು ಸಮಾಜಘಾತುಕ, ಸಾಮಾಜಿಕ, ಬೌದ್ಧಿಕ ಮತ್ತು ಧಾರ್ಮಿಕ ಚಟುವಟಿಕೆಗಳಿಗೆ ವಿರೋಧವಾಗಿರುವ ರ್ಯಾಗಿಂಗ್ನ್ನುಕ ಎಲ್ಲಾ ಹಂತದಿಂದಲೂ ದೂರವಿಡಬೇಕೆಂದು ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ್ ಮಾ.ಕರೆಣ್ಣವರ್ ಕರೆನೀಡಿದರು.

ನಗರದ ಡಿ.ಆರ್.ಎಂ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದ್ದ ರ್ಯಾಗಿಂಗ್ ವಿರೋಧಿ ದಿನದ ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ಜೀವನ ಅಂದರೆ ಹೇಗೆ ಇರಬೇಕು, ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕಾಗಿ ಪಾಲಕ, ಪೋಷಕರು, ಶಿಕ್ಷಕರು, ಶಿಕ್ಷಣ ಸಂಸ್ಥೆಗಳು ಮತ್ತು ಸರ್ಕಾರಗಳು ಏನೆಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತಾರೆ ಎನ್ನುವ ಬಗ್ಗೆ ವಿವರವಾಗಿ ವಿದ್ಯಾರ್ಥಿಗಳಿಗೆ ವಿವರಿಸಿದರು.

ರ್ಯಾಗಿಂಗ್ ನಂತಹ ಕೃತ್ಯಗಳಲ್ಲಿ ಭಾಗಿಯಾಗಿ ಪೋಲೀಸ್ ಠಾಣೆಯ ಮಟ್ಟಿಲೇರಿದರೆ  ನಿಮ್ಮ ಭವಿಷ್ಯಕ್ಕೆ ನೀವೆ ತೊಂದರೆ ಮಾಡಿಕೊಂಡ ಹಾಗೆ ಎಂದು ವಿದ್ಯಾರ್ಥಿಗಳಿಗೆ  ಕಿವಿ ಮಾತು ಹೇಳಿದರು.

ಡಿ.ಆರ್.ಎಂ ಕಾಲೇಜಿನ ಪ್ರಾಂಶುಪಾಲರಾದ ರೂಪಶ್ರೀ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಒಳ್ಳೆಯ ಸಂಸ್ಕಾರ ಬೆಳೆಸಿಕೊಂಡು ತಂದೆ ತಾಯಿಯರಿಗೆ ಮತ್ತು ಕಾಲೇಜಿಗೆ ಒಳ್ಳೆಯ ಹೆಸರು ತರಬೇಕು. ಕಾಲೇಜಿನಲ್ಲಿ ರ್ಯಾಗಿಂಗ್ ನಿಷೇಧ ಕುರಿತು ಸಮಿತಿಯನ್ನು ರಚಿಸಲಾಗಿದ್ದು, ಈ ಮೂಲಕ ಯಾವುದೇ ರ್ಯಾಗಿಂಗ್ ಚಟುವಟಿಕೆಗಳು ಕಂಡುಬಂದಲ್ಲಿ ಅಂತವರ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.

ಕಾರ್ಯಕ್ರದಲ್ಲಿ ವಕೀಲರಾದ ಸಿ.ಪಿ.ಅನಿತಾ, ಎ.ವಿ.ಕೆ. ಕಮಲಮ್ಮ ಕಾಲೇಜಿನ ಪ್ರಾಂಶುಪಾಲರಾದ ಕಮಲಮ್ಮ ಸೊಪ್ಪಿನ ಹಾಗೂ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಹಾಜರಿದ್ದರು.

Leave a Reply