ನ್ಯಾ.ವಿ.ಶ್ರೀಶಾನಂದ ವಿರುದ್ಧದ ಪ್ರಕರಣವನ್ನು ಕೈಬಿಟ್ಟ ಸುಪ್ರೀಂ ಕೋರ್ಟ್ 

2 years ago

ದೆಹಲಿ: ಮುಕ್ತ ನ್ಯಾಯಾಲಯದಲ್ಲಿ ಹೈಕೋರ್ಟ್ ನ್ಯಾಯಮೂರ್ತಿ ವಿ ಶ್ರೀಶಾನಂದ ಅವರು ವ್ಯಕ್ತಪಡಿಸಿದ ಅಭಿಪ್ರಾಯಗಳಿಗೆ ಕ್ಷಮೆ ಯಾಚನೆ ಮಾಡಿದ್ದಾರೆ. ಈ ಹಿನ್ನಲೆಯಲ್ಲಿ ಅವರ ವಿರುದ್ಧದ ಪ್ರಕರಣವನ್ನು ಸುಪ್ರೀಂ ಕೋರ್ಟ್ ಕೈಬಿಟ್ಟಿದೆ.

ಮುಖ್ಯನಾಯಮೂರ್ತಿ ಡಿ ವೈ ಚಂದ್ರಚೂಡ ನೇತೃತ್ಚದ ಐವರು ನ್ಯಾಯಮೂರ್ತಿಗಳ ಪೀಠ ನ್ಯಾಯಮೂರ್ತಿ ಶ್ರೀಶಾನಂದ ಅವರು ಮುಕ್ತ ನ್ಯಾಯಾಲಯದಲ್ಲಿ ವ್ಯಕ್ತಪಡಿಸಿದ ಆಕ್ಷೇಪಾರ್ಹ ಅಭಿಪ್ರಾಯಗಳಿಗೆ ವಿಷಯಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿತು.

ನ್ಯಾಯಮೂರ್ತಿ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ನ್ಯಾಯಪೀಠ, ವಕೀಲರು ಹಾಗೂ ನ್ಯಾಯಮೂರ್ತಿಗಳು ತಮ್ಮ ವೈಯಕ್ತಿಕ ಪೂರ್ವಾಗ್ರಹಗಳನ್ನು ವಿಚಾರಣೆ ಸಂದರ್ಭದಲ್ಲಿ ತೋರ್ಪಡಿಸಬಾರದು. ಸಾಮಾಜಿಕ ಜಾಲತಾಣದ ಈ ಯುಗದಲ್ಲಿ ಇಂತಹ ಹೇಳಿಕೆಗಳು ವೇಗವಾಗಿ ಹರಡುತ್ತವೆ ಎಂದಿತು.

ಈ ವೇಳೆ ಸುಪ್ರೀಂ ಕೋರ್ಟ್ ರಿಜಿಸ್ಟ್ರಾರ್ ಅವರು ನ್ಯಾಯಮೂರ್ತಿ ಶ್ರೀಶಾನಂದ ಅವರು ತಮ್ಮ ಅಭಿಪ್ರಾಯಗಳಿಗೆ ವಿಷಾದ ವ್ಯಕ್ತಪಡಿಸಿ ಕ್ಷಮೆ ಯಾಚಿಸಿದ್ದಾರೆ ಎಂಬ ಆಂಶವನ್ನು ಗಮನಕ್ಕೆ ತಂದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ಅವರ ವಿರುದ್ಧ ಪ್ರಕರಣವನ್ನು ಕೈಬಿಟ್ಟಿರುವುದಾಗಿ ತಿಳಿಸಿತು.

ನ್ಯಾಯಮೂರ್ತಿ ಶ್ರೀಶಾನಂದ ಅವರು ಪ್ರಕರಣಗಳ ವಿಚಾರಣೆ ಸಂದರ್ಭದಲ್ಲಿ, ‘ಬೆಂಗಳೂರಿನ ಗೋರಿಪಾಳ್ಯ ಪಾಕಿಸ್ತಾನ ದಂತಿದೆ’ ಎಂದು ಬಣ್ಣಿಸಿದ್ದರು. ವಕೀಲೆಯೊಬ್ಬರಿಗೆ, ‘ನಿಮ್ಮ ಪ್ರತಿವಾದಿ ಯಾವ ಬಣ್ಣದ ಒಳ ಉಡುಪು ಧರಿಸಿದ್ದಾರೆ ಎಂಬುದನ್ನೂ ನೀವು ಹೇಳಬಲ್ಲಷ್ಟು ಅವರನ್ನು ಅರಿತಿದ್ದೀರಿ’ ಎಂದು ಹೇಳಿದ್ದರು. 

ಈ ಮೌಖಿಕ ಹೇಳಿಕೆಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದವು. ಇದರ ವಿಡಿಯೊ ತುಣುಕನ್ನು ತಮ್ಮ ‘ಎಕ್ಸ್’ ಖಾತೆಯಲ್ಲಿ ಹಂಚಿಕೊಂಡಿದ್ದ ಸುಪ್ರೀಂ ಕೋರ್ಟ್ನ ಹಿರಿಯ ವಕೀಲೆ ಇಂದಿರಾ ಜೈಸಿಂಗ್, ‘ಈ ನ್ಯಾಯಮೂರ್ತಿಗೆ ಲಿಂಗ ಸಂವೇದನಾ ತರಬೇತಿ ನೀಡುವ ಅಗತ್ಯವಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು. ಇವರೊಂದಿಗೆ ಇನ್ನೂ ಅನೇಕರು ಆಕ್ಷೇಪ ವ್ಯಕ್ತಪಡಿಸಿದ್ದರು.

Leave a Reply