ತಪ್ಪು ಮಾಡಿದ್ದರೆ ಡಿ.ಕೆ.ಸುರೇಶ್ ವಿರುದ್ಧ ಕ್ರಮ ಕೈಗೊಳ್ಳಿ: ಕೇಂದ್ರ ಚುನಾವಣಾ ಆಯೋಗ

2 years ago

ಬೆಂಗಳೂರು: ಲೋಕಸಭೆ ಚುನಾವಣೆ ಕಾವು ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಸೋದರ ಹಾಗೂ ಸಂಸದ ಡಿ.ಕೆ.ಸುರೇಶ್ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಮರು ಆಯ್ಕೆ ಬಯಸಿರುವ ಡಿ.ಕೆ.ಸುರೇಶ್ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಆರೋಪ ಕೇಳಿಬಂದಿದ್ದು, ಈ ತಕ್ಷಣವೇ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಕೇಂದ್ರ ಚುನಾವಣಾ ಆಯೋಗ ರಾಜ್ಯದ ಮುಖ್ಯ ಚುನಾವಣಾ ಆಯುಕ್ತರಿಗೆ ಸೂಚಿಸಿದೆ.

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಸಂಸದ ಡಿ.ಕೆ.ಸುರೇಶ್ ಅವರು ಮತದಾರರಿಗೆ ಉಚಿತ ಉಡುಗೊರೆಗಳನ್ನು ಹಂಚುತ್ತಿದ್ದಾರೆ. ಕ್ಷೇತ್ರದಲ್ಲಿ ನೀತಿ ಸಂಹಿತೆಯನ್ನು ಗಾಳಿಗೆ ತೂರಲಾಗಿದೆ. ಅಕ್ರಮ ಎಸಗಲು ಆಡಳಿತ ಯಂತ್ರ ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ಮಾಜಿ ಪ್ರಧಾನಿ ದೇವೇಗೌಡ ಕೇಂದ್ರ ಚುನಾವಣಾ ಆಯುಕ್ತರಿಗೆ ಪತ್ರ ಬರೆದಿದ್ದಾರೆ.

ಸಂಸದ ಡಿ.ಕೆ.ಸುರೇಶ್ ಅವರ ಅಕ್ರಮದ ಬಗ್ಗೆ ಕ್ರಮ ಕೈಗೊಳ್ಳುವಂತೆ ರಾಜ್ಯದ ಮುಖ್ಯ ಚುನಾವಣೆ ಆಯುಕ್ತರಿಗೆ ದೂರು ನೀಡಲಾಗಿತ್ತು. ಆದರೆ, ಈ ಬಗ್ಗೆ ರಾಜ್ಯ ಚುನಾವಣಾ ಅಧಿಕಾರಿಗಳು ಕ್ರಮ ಕೈಗೊಳ್ಳಲು ವಿಫಲರಾಗಿದ್ದಾರೆ ಎಂದು ತಮ್ಮ ಪತ್ರದಲ್ಲಿ ಆರೋಪಿಸಿದ್ದರು.

ಈ ಪತ್ರವನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಚುನಾವಣಾ ಆಯೋಗ ಚುನಾವಣಾ ಮಾದರಿ ನೀತಿ ಸಂಹಿತೆಯನ್ನು ಡಿ.ಕೆ.ಸುರೇಶ್ ಉಲ್ಲಂಘಿಸಿದ್ದರೆ ಅವರ ಮೇಲೆ ಸೂಕ್ತ ಕಾನೂನು ಕ್ರಮ ತಕ್ಷಣದಿಂದಲೇ ಕೈಗೊಳ್ಳುವಂತೆ ಸೂಚಿಸಿದೆ.

Leave a Reply