ಅಧಿಕಾರಿಗಳಿಗೆ ಸೂಚನೆ ನೀಡಿದ ಲತಾ ಕುಮಾರಿ
ಹಾಸನ: ಜಿಲ್ಲೆಯಲ್ಲಿ ವನ್ಯ ಜೀವಿಗಳ ದಾಳಿಯಿಂದ ಗಾಯಗೊಂಡವರಿಗೆ ಕೂಡಲೇ 24 ಗಂಟೆಯೊಳಗೆ ಪರಿಹಾರ ನೀಡಲು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಲತಾ ಕುಮಾರಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಾನವ ಮತ್ತು ಪ್ರಾಣಿಗಳ ಸಂಘರ್ಷ ಕುರಿತು ನಡೆದ ಸಭೆಯಲ್ಲಿ ಮಾತನಾಡಿದ ಅವರು, 2025ರ ಜನವರಿಯಿಂದ ಇದುವರೆಗೆ ಸಂಭವಿಸಿರುವ ಅವಘಡಗಳು, ಸಾವು, ಗಾಯಗೊಂಡವರ ಪಟ್ಟಿಯನ್ನು ತಾಲ್ಲೂಕುವಾರು ಸಿದ್ದಪಡಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಗಾಯಗೊಂಡವರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಹಾಗೂ ಸರ್ಕಾರದಲ್ಲಿ ಎಪೆನಾಲ್ ಆಗಿರುವ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ನೀಡಲು ಒಂದು ಸುತ್ತೋಲೆ ಹೊರಡಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ತಾಲ್ಲೂಕು ಆರೋಗ್ಯ ಅಧಿಕಾರಿಗಳು ವಿಳಂಬ ಮಾಡದೆ ಗಾಯಾಳುಗಳ ಆರೋಗ್ಯದ ಮೇಲೆ ಉಂಟಾಗಿರುವ ತೀವ್ರತೆಯನ್ನು ಅರಿತು ತಕ್ಷಣ ಪ್ರಮಾಣ ಪತ್ರವನ್ನು ನೀಡಿ ಪರಿಹಾರ ನೀಡಲು ಸಹಾಯವಾಗುತ್ತದೆ ಎಂದರು.
ಪರಿಹಾರಕ್ಕೆ ಜನರು ಅಲೆದಾಟ ಮಾಡದಂತೆ ಎಚ್ಚರಿಕೆವಹಿಸಿ ಪರಿಹಾರ ಒದಗಿಸಲು ಅಧಿಕಾರಿಗಳಿಗೆ ತಿಳಿಸಿದರು. ಶಾಶ್ವತ ಅಂಗವಿಕಲತೆಗೆ 10 ಲಕ್ಷ, ಭಾಗಶಃ ಅಂಗವಿಕಲತೆಗೆ 5 ಲಕ್ಷ ಪರಿಹಾರ ನೀಡಲು ಅಧಿಕಾರಿಗಳು ನಿಗಾವಹಿಸಲು ನಿರ್ದೇಶನ ನೀಡಿದರು.
ಬೆಳೆ, ಪೈಪ್ ಲೈನ್, ಗೇಟ್, ಕಾಂಪೌಂಡ್, ಶೇಡ್ ಮೇಲೆ ಪ್ರಾಣಿಗಳು ದಾಳಿ ಮಾಡಿ ನಷ್ಟ ಉಂಟು ಮಾಡಿದಾಗ ಪರಿಹಾರ ನೀಡಲು ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ತೆಂಗು, ಅಡಿಕೆ,ಕಾಫಿ, ಮೆಣಸು ಮತ್ತಿತರ ತೋಟಗಾರಿಕೆ ಬೆಳೆಗಳನ್ನು ವನ್ಯ ಪ್ರಾಣಿಗಳು ದಾಳಿ ಮಾಡಿ ನಷ್ಟ ಉಂಟು ಮಾಡಿದಾಗ ಸೂಕ್ತ ಪರಿಹಾರ ದೊರಕಿಸುವ ನಿಟ್ಟಿನಲ್ಲಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವುದಕ್ಕೆ ನೆರವಾಗುವಂತೆ ಒಂದು ಸಮಿತಿ ರಚಿಸಿ ವರದಿ ತಯಾರಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬಿಕ್ಕೋಡು, ಅರೆಹಳ್ಳಿ ವ್ಯಾಪ್ತಿಯಲ್ಲಿ ಆನೆಗಳು ಓಡಾಡುವುದರಿಂದ ಸಾರ್ವಜನಿಕರು ಕತ್ತಲೆ ಸಮಯದಲ್ಲಿ ಎಚ್ಚರವಹಿಸಲು ಸಹಕಾರಿಯಾಗುವಂತೆ ರಸ್ತೆಯ ತಿರುವಿನಲ್ಲಿ ಹಾಗೂ ಎರಡು ಬದಿಗಳಲ್ಲಿ ವಿದ್ಯುತ್ ದೀಪ ಅಳವಡಿಳಸಲು ಕ್ರಮ ವಹಿಸುವಂತೆ ಜಿಲ್ಲಾ ಪಂಚಾಯಿತಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಲೆನಾಡು ಪ್ರದೇಶದಲ್ಲಿ ನೆಟ್ ವರ್ಕ್ ಸಿಗದಿರುವ ಗ್ರಾಮಗಳು ಮತ್ತು ಸ್ಥಳಗಳನ್ನು ಗುರುತಿಸಿ, ಅರೆಹಳ್ಳಿಯಲ್ಲಿ ಸುಸ್ಸಜ್ಜಿತ ಅಂಬುಲೆನ್ಸ್ 24×7 ಲಭ್ಯವಿರುವಂತೆ ನೋಡಿಕೊಳ್ಳಿ ಎಂದು ಸೂಚಿಸಿದರು.
ಈ ವ್ಯಾಪ್ತಿಯಲ್ಲಿ ಎಷ್ಟು ಶಾಲೆಗಳಿವೆ ಎಷ್ಟು ಮಕ್ಕಳಿದ್ದಾರೆ. ನಿಗದಿತ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಬಸ್ ಸೌಲಭ್ಯ ಕಲ್ಪಿಸಲು ಚಿಂತನೆ ನಡೆಸಬೇಕು. ನ.27 ರಂದು ನಡೆಯುವ ಸಭೆಯಲ್ಲಿ ತೆಗೆದುಕೊಂಡ ಕ್ರಮಗಳ ಬಗ್ಗೆ ವರದಿ ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶಿಸಿದರು.
ಜೊತೆಗ ಕಾಡುಕೋಣ, ಕರಡಿ, ಚಿರತೆ ಮತ್ತಿತರ ವನ್ಯ ಪ್ರಾಣಿಗಳ ದಾಳಿಯಿಂದ ಉಂಟಾಗುವ ನಷ್ಟದ ಬಗ್ಗೆ ಎಲ್ಲಾ ತಹಸೀಲ್ದಾರ್ ಗಳು ಗಮನಹರಿಸಿ ಎಂದರು.
ಅಪರ ಜಿಲ್ಲಾಧಿಕಾರಿ ಮಂಜುನಾಥ್,ಉಪ ಅರಣ್ಯ ಸಂರಕ್ಷಣಾಧಿಕಾರಿ ಸೌರಬ್ ಕುಮಾರ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಾಬು,ಭೂ ದಾಖಲೆಗಳ ಇಲಾಖೆಯ ಉಪ ನಿರ್ದೇಶಕರಾದ ಹೇಮಲತಾ ಮತ್ತಿತರ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.




