ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಗೆಲ್ಲಲು ರಾಜ್ಯ ನಾಯಕರಿಗೆ ಟಾಸ್ಕ್

2 years ago

ಬೆಂಗಳೂರು: ದೇಶದ ವಾಣಿಜ್ಯ ರಾಜಧಾನಿ ಎನಿಸಿರುವ ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಇಂಡಿಯ ಮೈತ್ರಿಕೂಟಕ್ಕೆ ದೊಡ್ಡ ಸವಾಲಾಗಿದೆ. ಈ ಚುನಾವಣೆಯಲ್ಲಿ ಗೆಲುವು ಸಾಧಿಸುವ ಮೂಲಕ ಬಿಜೆಪಿ ನೇತೃತ್ವದ ಎನ್ ಡಿ ಎ ಮೈತ್ರಿಕೂಟಕ್ಕೆ ಎಚ್ಚರಿಕೆ ಸಂದೇಶ ರವಾನಿಸಬೇಕು ಎಂದು ಎಐಸಿಐ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಹೇಳಿದ್ದಾರೆ.


ಮಹಾರಾಷ್ಟ್ರದ ವಿಧಾನಸಭೆ ಚುನಾವಣೆಯಲ್ಲಿ ಅನುಸರಿಸಬೇಕಾದ ರಣತಂತ್ರದ ಕುರಿತು ಅವರು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್ ಅವರೊಂದಿಗೆ ಸುಧೀರ್ಘ ಸಮಾಲೋಚನೆ ನಡೆಸಿ ಕೆಲ ಸಂದೇಶಗಳನ್ನು ರವಾನಿಸಿದ್ದಾರೆ ಎಂದು ವರದಿಯಾಗಿದೆ. 

ಕರ್ನಾಟಕದಲ್ಲಿ ಕಾಂಗ್ರೆಸ್ ನೇತೃತ್ವದ ಆಡಳಿತ ಇರುವುದು ಈ ಚುನಾವಣೆ ಮೇಲೆ ದೊಡ್ಡ ಪರಿಣಾಮ ಬೀರಲಿದೆ. ಹೀಗಾಗಿ ಕರ್ನಾಟಕದ ಎಲ್ಲಾ ಕಾಂಗ್ರೆಸ್ಸಿನ ಪ್ರಮುಖ ನಾಯಕರು ಮಹಾರಾಷ್ಟ್ರ ಚುನಾವಣೆಯಲ್ಲಿ ಹೆಚ್ಚು ಸಕ್ರಿಯವಾಗಿ ತೊಡಗಬೇಕು ಎಂದು ಸೂಚಿಸಿದ್ದಾರೆ.

ಬೆಳಗಾವಿ, ವಿಜಯಪುರ, ಬೀದರ್ ಮತ್ತು ಕಲಬುರ್ಗಿ ಜಿಲ್ಲೆಯ ಪ್ರಮುಖ ನಾಯಕರು ಮಹಾರಾಷ್ಟ್ರದ ಕೆಲವು ಜಿಲ್ಲೆಗಳ ಉಸ್ತುವಾರಿ ವಹಿಸಿಕೊಂಡು, ಅಲ್ಲಿ ಕಾಂಗ್ರೆಸ್ ಹಾಗೂ ಮೈತ್ರಿಕೂಟದ ಇತರೆ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕು. ಆ ನಿಟ್ಟಿನಲ್ಲಿ ಕಾರ್ಯತಂತ್ರ ರೂಪಿಸುವಂತೆ ಉಭಯ ನಾಯಕರಿಗೆ ಸಲಹೆ ಮಾಡಿರುವುದಾಗಿ ಮೂಲಗಳಿಂದ ತಿಳಿದುಬಂದಿದೆ. 

ಸೊಲ್ಲಾಪುರ, ಸಾಂಗ್ಲಿ, ಪುಣೆ, ಸಿಂಧುದುರ್ಗ ಸೇರಿದಂತೆ ಮಹಾರಾಷ್ಟ್ರದ ಕೆಲವು ಪ್ರದೇಶಗಳಲ್ಲಿ ರಾಜ್ಯದ ಕಾಂಗ್ರೆಸ್ ನಾಯಕರು ಪ್ರಭಾವಿಯಾಗಿದ್ದಾರೆ. ಹಾಗೆಯೇ ಇಲ್ಲಿ ಕುರುಬ ಮತ್ತು ಲಿಂಗಾಯತ ಸಮುದಾಯಕ್ಕೆ ಸೇರಿದ ಕನ್ನಡ ಭಾಷಿಕ ಮತದಾರರು ದೊಡ್ಡ ಪ್ರಮಾಣದಲ್ಲಿದ್ದಾರೆ. ಈ ಮತದಾರರನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಚುನಾವಣಾ ಪ್ರಚಾರದಲ್ಲಿ ತೊಡಗುವಂತೆ ಸೂಚಿಸಿದರು ಎಂದು ಮೂಲಗಳಿಂದ ತಿಳಿದುಬಂದಿದೆ. 

ಮಹಾರಾಷ್ಟ್ರದ ಅಭ್ಯರ್ಥಿಗಳ ಆಯ್ಕೆ, ಚುನಾವಣೆಯ ಪ್ರಚಾರ ತಂತ್ರ ಸೇರಿದಂತೆ ಹಲವು ವಿಷಯಗಳಲ್ಲಿ ಹೈಕಮಾಂಡ್ ರಾಜ್ಯ ಕಾಂಗ್ರೆಸ್ ನಿಂದ ಹೆಚ್ಚಿನ ನಿರೀಕ್ಷೆ ಇಟ್ಟುಕೊಂಡಿದೆ. ಹೀಗಾಗಿ ಈ ಎಲ್ಲ ನಾಯಕರು ಸಂಘಟಿತರಾಗಿ ಕೆಲಸ ಮಾಡಬೇಕು ಎಂದು ತಿಳಿಸಿರುವುದಾಗಿ ಪಕ್ಷದ ಉನ್ನತ ಮೂಲಗಳಿಂದ ಗೊತ್ತಾಗಿದೆ.

Leave a Reply