ರಾಜ್ಯ ಬಿಜೆಪಿಯಲ್ಲಿ ಕೆಲವು ಭಿನ್ನಾಭಿಪ್ರಾಯಗಳಿವೆ: ವಿಜಯೇಂದ್ರ

10 months ago

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಕೆಲವು ಭಿನ್ನಾಭಿಪ್ರಾಯಗಳಿವೆ. ರಾಜ್ಯ ಮತ್ತು ಪಕ್ಷದ ಹಿತ ದೃಷ್ಟಿಯಿಂದ ಅವುಗಳನ್ನು ಮರೆತು ಮುಂದುವರೆಯುವಂತೆ ಹೈಕಮಾಂಡ್ ಸಲಹೆ ಮಾಡಿದ್ದು ಅದರಂತೆ ಹೆಜ್ಜೆ ಇಡುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ.

ಕೇಂದ್ರ ಗೃಹ ಸಚಿವ ಅವರ ಭೇಟಿ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿಯ ಜವಾಬ್ದಾರಿ ಹೆಚ್ಚಾಗಿದೆ. ಭ್ರಷ್ಟ ಕಾಂಗ್ರೆಸ್‌‍ ಸರ್ಕಾರವನ್ನು ಅಧಿಕಾರದಿಂದ ಇಳಿಸಬೇಕಾದರೆ ನಮಲ್ಲಿರುವ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಲೇಬೇಕು. ಎಲ್ಲರೂ ಒಗ್ಗಟ್ಟಿನಿಂದ ಹೋರಾಟ ನಡೆಸಬೇಕಾದ ಅಗತ್ಯವಿದೆ ಎಂದರು.

ಕೆಲವರಿಗೆ ಅತೃಪ್ತಿ ಇರುವುದು ನಿಜ. ಅದನ್ನು ಸರಿಪಡಿಸುವ ಕೆಲಸವನ್ನು ವರಿಷ್ಠರು ಮಾಡಲಿದ್ದಾರೆ. ಸ್ಥಳೀಯವಾಗಿ ಸಣ್ಣಪುಟ್ಟ ಗೊಂದಲ ಇರುವುದನ್ನು ನಾನು ಅಲ್ಲಗೆಳೆಯುವುದಿಲ್ಲ. ಕೇಂದ್ರ ಸಚಿವರಾದ ಪ್ರಹ್ಲಾದ್‌ ಜೋಷಿ, ಶಾಸಕ ಸಿ.ಟಿ.ರವಿ ಸೇರಿದಂತೆ ಮತ್ತಿತರರು ಚರ್ಚೆ ಮಾಡಿ ಸಮಸ್ಯೆಯನ್ನು ಇತ್ಯರ್ಥಪಡಿಸುತ್ತೇವೆ. ಶೀಘ್ರದಲ್ಲೇ ಎಲ್ಲವೂ ಇತ್ಯರ್ಥವಾಗಲಿದೆ ಎಂದರು.

ಪಕ್ಷದ ನಾಯಕರಾದ ಪ್ರಹ್ಲಾದ ಜೋಶಿ, ಬಸವರಾಜ ಬೊಮ್ಮಾಯಿ, ಆರ್ ಅಶೋಕ್, ಪಿ ಸಿ ಮೋಹನ್ ಸೇರಿದಂತೆ ಹಲವರು ಅಮಿತ್ ಶಾ ಅವರನ್ನು ಭೇಟಿ ಮಾಡಿ ಅನೇಕ ವಿಚಾರಗಳ ಬಗ್ಗೆ ಚರ್ಚೆ ಮಾಡಿದ್ದೇವೆ. ಅವರಿಂದ ಸಲಹೆ ಸೂಚನೆಗಳನ್ನು ಪಡೆದುಕೊಂಡಿದ್ದೇವೆ ಎಂದರು.

ವರಿಷ್ಠರು ಭ್ರಷ್ಟ ಕಾಂಗ್ರೆಸ್‌‍ ವಿರುದ್ದ ಹೋರಾಟ ನಡೆಸಲು ಹಲವು ಸಲಹೆಗಳನ್ನು ಕೊಟ್ಟಿದ್ದಾರೆ. ಪಕ್ಷ ಸಂಘಟನೆ ಕುರಿತು ಚರ್ಚೆ ನಡೆಸಿದ್ದೇವೆ ಎಂದರು.

ಭ್ರಷ್ಟ ಕಾಂಗ್ರೆಸ್‌‍ ಸರ್ಕಾರ ಅಲ್ಪಸಂಖ್ಯಾತರ ಓಲೈಕೆಗೆ ಅನೇಕ ತೀರ್ಮಾನ ಮಾಡುತ್ತಿದೆ. ವಸತಿ ಯೋಜನೆಯಲ್ಲಿ ಮೀಸಲಾತಿ ಹೆಚ್ಚಳ ಮಾಡಿದ್ದಾರೆ. ಸರ್ಕಾರದಲ್ಲಿ ದೊಡ್ಡ ಮಟ್ಟದ ಕಮಿಷನ್ ದಂಧೆ ನಡೆಯುತ್ತಿದೆ. ಇದರ ವಿರುದ್ಧ ಸಂಘಟನಾತ್ಮಕವಾಗಿ ಹೋರಾಟ ನಡೆಸುವಂತೆ ಸಲಹೆ ಮಾಡಿದ್ದಾರೆ ಎಂದರು.

Leave a Reply