ಬೆಂಗಳೂರು: ಲಂಚದ ಆರೋಪ ಮಾಡಿ ತಮ್ಮ ವಿರುದ್ಧ ರಾಜ್ಯಪಾಲರಿಗೆ ಪತ್ರ ಬರೆದ ವಿಷಯ ತಮ್ಮ ವ್ಯಕ್ತಿತ್ವಕ್ಕೆ ಕಪ್ಪು ಚುಕ್ಕೆ ತರುವ ಕೆಲಸವಾಗಿದೆ. ಈ ಷಡ್ಯಂತ್ರದ ಹಿಂದಿರುವವರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಹೋರಾಟ ನಡೆಯಲಿದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಬಗ್ಗೆ ಬಹಳ ದ್ವೇಷ ಹೊಂದಿರುವ ಜನ ಹೇಗಾದರೂ ಸರಿ ನನ್ನ ವ್ಯಕ್ತಿತ್ವಕ್ಕೆ ಕಪ್ಪು ಚುಕ್ಕೆ ತರುವ ಪ್ರಯತ್ನದ ಭಾಗವಾಗಿ ನಕಲಿ ಪತ್ರಗಳನ್ನು ಸೃಷ್ಟಿಸಿ ಸದರಿ ನಕಲಿ ಪತ್ರಗಳ ಆಧಾರದ ಮೇಲೆ ನೌಕರರನ್ನು ನೆಪವಾಗಿಸಿ ಷಡ್ಯಂತ್ರ ರೂಪಿಸುತ್ತಿದ್ದಾರೆ ಎಂದು ದೂರಿದರು.
ನನ್ನನ್ನೇ ಗುರಿಯಾಗಿಸಿಕೊಂಡು ನಡೆಯುತ್ತಿರುವ ಈ ಕುತಂತ್ರದ ಹಿಂದೆ ಯಾರಿರಬಹುದು ಎನ್ನುವ ಬಗ್ಗೆ ಅವರ ಹೆಸರು ಹೇಳುವ ಅವಶ್ಯಕತೆಯಿಲ್ಲ. ಜನರು ರಾಜಕೀಯವಾಗಿ ಪ್ರಬುದ್ಧರಿದ್ದು ನನ್ನ ವಿರುದ್ಧ ಷಡ್ಯಂತ್ರ ರೂಪಿಸುತ್ತಿರುವುದು ಯಾರೆಂದು ಅವರೇ ನಿರ್ಧಾರ ಮಾಡುತ್ತಾರೆ ಎಂದು ಹೇಳಿದರು.
ಸರ್ಕಾರಗಳ ಬದಲಾವಣೆ ಆದಾಗ ಸರ್ಕಾರಿ ನೌಕರರ ವರ್ಗಾವಣೆ ಒಂದು ಸಾಮಾನ್ಯ ಪ್ರಕ್ರಿಯೆ. ಇದು ಎಲ್ಲಾ ಹೊಸ ಸರ್ಕಾರಗಳು ಬಂದಾಗಲೂ ಸಹಜವಾಗಿ ನಡೆದಿವೆ. ಆದರೆ ವೈಯಕ್ತಿಕವಾಗಿ ನಾನು ಮೊದಲಿನಿಂದಲೂ ಈ ಪ್ರಕ್ರಿಯೆಯಲ್ಲಿ ಈ ಬಗ್ಗೆ ಹೆಚ್ಚಿನ ಗಮನ ಕೊಟ್ಟಿಲ್ಲ ಎಂದು ಹೇಳಿದರು.
ಕೃಷಿ ಪ್ರಧಾನ ದೇಶವಾಗಿರುವ ಭಾರತದಲ್ಲಿ ಕೃಷಿಯನ್ನೇ ನಂಬಿ ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಶೇ.70ರಷ್ಟು ಜನ ಜೀವನ ನಡೆಸುತ್ತಿದ್ದಾರೆ. ಇಂತಹ ಮಹತ್ವದ ಕ್ಷೇತ್ರದಲ್ಲಿ ಒಂದಷ್ಟು ಸೇವೆ ಮಾಡುವ ಅವಕಾಶ ನನಗೆ ರಾಜಕೀಯವಾಗಿ ನನಗೆ ದೊರೆತಿದೆ. ನಾನೂ ಸಹ ಕೃಷಿಕ ಕುಟುಂಬದಿಂದಲೇ ಬಂದವನಾಗಿದ್ದು ನನಗೆ ಲಭಿಸಿರುವ ಉತ್ತಮ ಅವಕಾಶವನ್ನು ಬಳಸಿಕೊಂಡು ಕರ್ನಾಟಕದ ರೈತರಿಗೆ ಕೃಷಿ ಮಂತ್ರಿಯಾಗಿ ಏನೆಲ್ಲೆ ಸೇವೆ ಮಾಡಲು ಸಾಧ್ಯವಿದೆಯೋ ಆ ಎಲ್ಲಾ ಸೇವೆ ಸಲ್ಲಿಸಲು ನಾನು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ ಎಂದು ವಿವರಿಸಿದರು.
ಕೃಷಿ ಖಾತೆಯ ಸಚಿವನಾಗಿ ರಾಜ್ಯದಲ್ಲಿ ಮಾಡಬಹುದಾದ ಬಹಳಷ್ಟು ಕೆಲಸವಿದ್ದು ಆ ಬಗ್ಗೆ ನನಗೆ ನನ್ನದೇ ಆದ ಕನಸುಗಳಿವೆ. ನನ್ನ ಖಾತೆಯ ಇತಿಮಿತಿಯೊಳಗೆ ನಾನು ರೈತರಿಗೆ ನೆರವಾಗಬಹುದಾದ ಅನೇಕ ಕಾರ್ಯಕ್ರಮಗಳನ್ನು ಮಾಡಲು ಯೋಜಿಸಲಾಗಿದೆ. ಇಂತಹ ಸಂದರ್ಭದಲ್ಲಿ ನನಗೆ ಮತ್ತಷ್ಟು ಹೆಸರು ಬರುವುದೆಂಬ ಭಯ ಮತ್ತು ಹತಾಶೆಯಿಂದ ಕೆಲವರು ಈ ಷಡ್ಯಂತ್ರದ ರಾಜಕಾರಣ ನಡೆಸುತ್ತಿದ್ದಾರೆ. ಸತ್ಯಕ್ಕೆ ದೂರವಾಗಿರುವ ಅವರ ಈ ಯಾವ ಕುತಂತ್ರಗಳು ಫಲ ನೀಡುವುದಿಲ್ಲ ಎಂದು ತಿಳಿಸಿದರು.



