ಇನ್ನೂ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ

2 years ago

ಬೆಂಗಳೂರು: ವರುಣನ ಆರ್ಭಟದಿಂದ ನಲುಗಿರುವ ಬೆಳಗಾವಿ, ಉಡುಪಿ, ಕಾರವಾರ, ಬಾಗಲಕೋಟೆ ಸೇರಿದಂತೆ ರಾಜ್ಯದ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಇನ್ನೂ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಗಳಿರುವ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. 

ದಕ್ಷಿಣ ಗುಜರಾತ್ ನಿಂದ ಕೇರಳ ರಾಜ್ಯದ ಕರಾವಳಿಯ ಅರಬ್ಬೀ ಸಮುದ್ರ ಮಟ್ಟದಲ್ಲಿ ಉಂಟಾದ ಮೇಲುಬ್ಬರದ ಪರಿಣಾಮ ರಾಜ್ಯದ ಕರಾವಳಿ ಮತ್ತು ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಇಂದು ಬಿರುಗಾಳಿಯಿಂದ ಕೂಡಿದ ಸಿಡಿಲುಸಹಿತ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಕೆಲವೆಡೆ ಅತ್ಯಧಿಕ ಮಳೆಯಾಗುವ ಸಾಧ್ಯತೆ ಇರುವುದರಿಂದ ರೆಡ್ಅಲರ್ಟ್ ನೀಡಲಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ.

ಇಂದಿನಿಂದ ಆಗಸ್ಟ್ 2 ರವರೆಗೆ ಕರಾವಳಿ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಆರೆಂಜ್ ಅಲರ್ಟ್ ನೀಡಲಾಗಿದೆ. ಅನಂತರದ ಮೂರು ದಿನಗಳಲ್ಲೂ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಲಾಗಿದೆ.

ಉತ್ತರ ಒಳನಾಡು ಜಿಲ್ಲೆಗಳಲ್ಲಿ,  ಭಾರಿ ಮಳೆಯಾಗುವ ಸಾಧ್ಯತೆಯಿದೆ. ಎಡಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಮಲೆನಾಡಿನ ಹಲವು ರಸ್ತೆಗಳಲ್ಲಿ ಗುಡ್ಡ ಕುಸಿದು ಬಿದ್ದಿದ್ದು ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ. ಮುಂಜಾಗ್ರತೆ ದೃಷ್ಟಿಯಿಂದ ಆಗುಂಬೆ ಘಾಟ್ ಶಿರಾಡಿ ಘಾಟ್ ಮತ್ತು ಚಾರ್ಮಾಡಿ ಘಾಟಿಯಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ.

ಈ ಮೂರು ರಸ್ತೆಗಳಲ್ಲಿ ರಾತ್ರಿ ವೇಳೆ ಎಲ್ಲ ರೀತಿಯ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಿರುವ ಪರಿಣಾಮ ಉಡುಪಿ, ಮಂಗಳೂರು ಸೇರಿದಂತೆ ಹಲವು ಪ್ರದೇಶಗಳಿಗೆ ತಲುಪಲು ಜನ ಪರದಾಡುತ್ತಿದ್ದಾರೆ.

Leave a Reply