ಬೆಂಗಳೂರು: ಹೊಸ ವರ್ಷ ಆರಂಭವಾಗುತ್ತಿದ್ದಂತೆ ರಾಜ್ಯ ಬಿಜೆಪಿಯಲ್ಲಿ ನಡೆಯುತ್ತಿರುವ ವಿದ್ಯಮಾನಗಳಿಗೂ ಕೂಡ ಹೊಸ ರಂಗು ಬಂದಿದೆ. ತಮ್ಮ ವಿರುದ್ಧ ಬಂಡಾಯ ಸಾರಿರುವ ನಾಯಕರ ಮೇಲೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವರಿಷ್ಠರಿಗೆ ದೂರು ನೀಡಿದ್ದಾರೆ.
- ಕುಸಿಯುತ್ತಿರುವ ಪ್ರಜಾಪ್ರಭುತ್ವದ ವ್ಯಾಪ್ತಿ ಮತ್ತು ದೀರ್ಘಾವಧಿ ಪ್ರಧಾನಿಯ ಸಾಧನೆಗಳು
- ಜೀರಾ ರೈಸ್, ಘೀ ರೈಸ್ ಮತ್ತು ಲೆಮನ್ ರೈಸ್ ಮಾಡುವ ಸರಳ ವಿಧಾನ
- ಸಮಾಧಾನ್ ಸಮಾರೋಹ್ ಯಶಸ್ವಿಗೊಳಿಸಿ: ಡಾ.ಶಾಲಿನಿ ರಜನೀಶ್
- ರೌಡಿಗಳ ಜೊತೆ ಸೆಲ್ಫಿ, ಡ್ರಗ್ಸ್ ದಂಧೆಗೆ ಬ್ರೇಕ್
- ಅಥಣಿಯಲ್ಲಿ ಭೀಕರ ಅಪಘಾತ: ಟಿಪ್ಪರ್ ಹರಿದು ವೃದ್ಧ ಸ್ಥಳದಲ್ಲೇ ಸಾವು
ಇದರ ಬೆನ್ನಲ್ಲೇ ತಮ್ಮ ಹೋರಾಟ ತೀವ್ರಗೊಳಿಸಿರುವ ವಿಜಯೇಂದ್ರ ವಿರೋಧಿ ಬಣದ ನಾಯಕರು 03.01.2025ರಂದು ಬೆಂಗಳೂರಿನಲ್ಲಿ ಸಭೆ ಸೇರಲು ತೀರ್ಮಾನಿಸಿದ್ದಾರೆ.
ಹೊಸ ವರ್ಷದ ಮೊದಲ ದಿನವೇ ದೆಹಲಿಗೆ ದೌಡಾಯಿಸಿದ ವಿಜಯೇಂದ್ರ ಪಕ್ಷದ ಹಿರಿಯ ನಾಯಕ ಹಾಗೂ ಕೇಂದ್ರ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ರಾಜ್ಯ ಬಿಜೆಪಿಯಲ್ಲಿ ನಡೆದಿರುವ ವಿದ್ಯಮಾನಗಳ ಬಗ್ಗೆ ಸಮಗ್ರ ವರದಿಯೊಂದನ್ನು ನೀಡಿದ್ದಾರೆ.
ಹೈಕಮಾಂಡ್ ಸ್ಪಷ್ಟ ಸೂಚನೆ ಮತ್ತು ನೋಟಿಸ್ ನೀಡಿದ ನಂತರವೂ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ ನೇತೃತ್ವದ ತಂಡ ಭಿನ್ನಮತೀಯ ಚಟುವಟಿಕೆಯಲ್ಲಿ ನಿರತವಾಗಿದೆ. ಪಕ್ಷದ ರಾಜ್ಯ ಘಟಕದ ಅನುಮತಿ ಇಲ್ಲದೆ ವಕ್ಫ್ ವಿರೋಧಿ ಹೋರಾಟ ಕೈಗೊಂಡಿದೆ. ಇದರಿಂದ ಅನಗತ್ಯ ಗೊಂದಲ ಉಂಟಾಗಿದ್ದು ಇದಕ್ಕೆ ಕಡಿವಾಣ ಹಾಕುವಂತೆ ಮನವಿ ಮಾಡಿದ್ದಾರೆ.
ಈ ವಿದ್ಯಮಾನದ ಬಗ್ಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ಬಸನಗೌಡ ಪಾಟೀಲ್ ಯತ್ನಾಳ್, ನಾವು ಯಾವುದೇ ರೀತಿಯ ಪಕ್ಷ ವಿರೋಧಿ ಚಟುವಟಿಕೆ ನಡೆಸುತ್ತಿಲ್ಲ. ಹೀಗಿರುವಾಗ ಯಾವ ಕಾರಣಕ್ಕೆ ನಮ್ಮ ವಿರುದ್ಧ ಹೈಕಮಾಂಡ್ ಕ್ರಮ ಜರುಗಿಸಲಿದೆ ಎಂದು ಪ್ರಶ್ನಿಸಿದರು.
ವಕ್ಫ್ ಅನ್ಯಾಯದ ವಿರುದ್ಧ ನಾವು ಆರಂಭಿಸಿರುವ ಹೋರಾಟವನ್ನು ನಿಲ್ಲಿಸುವ ಪ್ರಶ್ನೆ ಇಲ್ಲ. ಹೀಗಾಗಿ ಮತ್ತೊಂದು ಸುತ್ತಿನ ಹೋರಾಟಕ್ಕೆ ಸಿದ್ಧತೆ ನಡೆಸುತ್ತಿದ್ದು, ಈ ಕುರಿತಂತೆ ಸಭೆ ನಡೆಸಿ ರೂಪುರೇಷೆ ನಿರ್ಧರಿಸುವುದಾಗಿ ತಿಳಿಸಿದರು.
ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ಹೊಂದಾಣಿಕೆ ರಾಜಕಾರಣ ಮಾಡುತ್ತಿದ್ದಾರೆ. ಹೀಗಾಗಿ ಅವರು ಆಗಿಂದಾಗ್ಗೆ ದೆಹಲಿಗೆ ಹೋಗಿ ತಮ್ಮ ಬಗ್ಗೆ ಸ್ಪಷ್ಟನೆ ನೀಡಬೇಕಾಗಿ ಬರುತ್ತದೆ. ಅದಕ್ಕಾಗಿ ಹೈಕಮಾಂಡ್ ನಾಯಕರ ಭೇಟಿಗೆ ಸಮಯ ನಿಗದಿ ಮಾಡಿಕೊಂಡು ಹೋಗಿ ಭೇಟಿಯಾಗಿ ಬರುತ್ತಾರೆ. ಆದರೆ ನಾವು ಅಂತ ರಾಜಕಾರಣ ಮಾಡುವುದಿಲ್ಲ ಹಾಗೂ ಅದಕ್ಕಾಗಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವುದು ಇಲ್ಲ ಎಂದು ಸ್ಪಷ್ಟಪಡಿಸಿದರು.
ನಮ್ಮದು ಜನಪರವಾದ ಆಂದೋಲನವಾಗಿದೆ. ಈ ಮೂಲಕ ಪಕ್ಷವನ್ನು ಸಂಘಟಿಸುವ ಕೆಲಸದಲ್ಲಿ ನಿರತರಾಗಿದ್ದೇವೆ. ಇದು ಹೈಕಮಾಂಡ್ ಗಮನದಲ್ಲಿ ಇದೆ. ಹೀಗಾಗಿ ನಮ್ಮ ವಿರುದ್ಧ ಕ್ರಮ ಕೈಗೊಳ್ಳುವಂತೆ ಯಾರೇ ದೂರು ನೀಡಿದರು ಅವರು ಏನನ್ನು ಮಾಡುವುದಿಲ್ಲ ಎಂದರು.


