ಸ್ಥಳೀಯ ಸಂಸ್ಥೆಗಳ ಚುನಾವಣೆವರೆಗೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಇಲ್ಲ

2 years ago

ಬೆಂಗಳೂರು: ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಇದೀಗ ಸರ್ಕಾರದ ದೈನಂದಿನ ಚಟುವಟಿಕೆಗಳಲ್ಲಿ ಹೆಚ್ಚು ತೊಡಗಬೇಕಿರುವ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾಯಿಸಲು ಹೈಕಮಾಂಡ್ ತೀರ್ಮಾನಿಸಿತ್ತು. ಆದರೆ ಕೊನೆ ಕ್ಷಣದಲ್ಲಿ ಈ ನಿರ್ಧಾರದಿಂದ ಹಿಂದೆ ಸರಿದಿದೆ.

ಮುಂಬರುವ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆ ಮುಗಿಯುವವರೆಗೆ ಪಕ್ಷದ ಅಧ್ಯಕ್ಷ ಸ್ಥಾನ ಬದಲಾವಣೆ ಮಾಡಬಾರದು ಎಂದು ನಿರ್ಧರಿಸಿರುವ ಹೈಕಮಾಂಡ್ ಅಲ್ಲಿಯವರೆಗೆ ಎರಡೂ ಹುದ್ದೆಗಳಲ್ಲಿ ಮುಂದುವರೆಯುವಂತೆ ಶಿವಕುಮಾರ್ ಅವರಿಗೆ ಸೂಚಿಸಿದೆ.

ಶಿವಕುಮಾರ್ ಅವರ ನಾಯಕತ್ವದಲ್ಲಿ ಪಕ್ಷ ಸಂಘಟನಾತ್ಮಕವಾಗಿ ಉತ್ತಮ ಸಾಧನೆ ಮಾಡಿದೆ. ಇದೆ ಸಾಧನೆ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಮುಂದುವರೆಯಬೇಕು. ಹೀಗಾಗಿ ಅಲ್ಲಿಯವರೆಗೆ ಯಾವುದೇ ಬದಲಾವಣೆ ಬೇಡ ಎಂದು ನಿರ್ಧರಿಸಲಾಗಿದ್ದು ಶಿವಕುಮಾರ್ ಅವರಿಗೆ ಕೆಪಿಸಿಸಿ ಸಾರಥ್ಯದಲ್ಲಿ ಮುಂದುವರೆಯಲು ಸೂಚಿಸಿದೆ ಎಂದು ಪಕ್ಷದ ಮೂಲಗಳಿಂದ ತಿಳಿದುಬಂದಿದೆ.

ಈ ಹಿಂದೆ ಆದ ಒಪ್ಪಂದದಂತೆ ಲೋಕಸಭೆ ಚುನಾವಣೆ ಮುಗಿಯುವವರೆಗೆ ಪಕ್ಷದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತೇನೆ ಎಂದು ಹೇಳಿದ ಶಿವಕುಮಾರ್ ಇದೀಗ ಬೇರೆಯವರಿಗೆ ಪಟ್ಟ ಕಟ್ಟಲು ಸಜ್ಜಾಗಿದ್ದರು. ಅದಕ್ಕಾಗಿ ಹೈಕಮಾಂಡ್ ಮುಂದೆ ತಮ್ಮ ಇಂಗಿತ ತೋಡಿಕೊಂಡಿದ್ದರು ಎನ್ನಲಾಗಿದೆ.

ಈ ಕುರಿತು ವರಿಷ್ಠರು ಹಲವು ಮೂಲಗಳಿಂದ ಪಕ್ಷದ ರಾಜ್ಯ ಘಟಕದ ಕುರಿತಂತೆ ವರದಿ ಪಡೆದುಕೊಂಡಿದ್ದಾರೆ. ಅದನ್ನು ಇಟ್ಟುಕೊಂಡು ಹಲವು ಸುತ್ತಿನಲ್ಲಿ ಸಭೆ ನಡೆಸಿದ್ದು, ಇದೀಗ ಶಿವಕುಮಾರ್ ಅವರನ್ನು ಮುಂದುವರಿಸುವ ನಿರ್ಧಾರಕ್ಕೆ ಬಂದಿದ್ದಾರೆ.

Leave a Reply