ವಾಟರ್ ಮ್ಯಾನ್ ಗಳ ಸೇವೆ ಖಾಯಂಗೊಳಿಸಲು ಕಾನೂನಿನಲ್ಲಿ ಅವಕಾಶವಿಲ್ಲ‌: ಬೈರತಿ ಸುರೇಶ್

1 year ago

ಬೆಂಗಳೂರು: ರಾಜ್ಯದ ಎಲ್ಲಾ ಮಹಾನಗರ ವ್ಯಾಪ್ತಿಯ ಜಲಮಂಡಳಿಗಳಲ್ಲಿ 13 ಸಾವಿರ ವಾಟರ್ ಮ್ಯಾನ್ ಗಳು ಕಾರ್ಯನಿರ್ವಹಿಸುತ್ತಿದ್ದಾರೆ. ಆದರೆ ಇವರು ಸರ್ಕಾರಿ ನೌಕರರು ಎಂದು ಘೋಷಿಸಿ ಆ ರೀತಿಯ ಸೌಲಭ್ಯಗಳನ್ನು ನೀಡಲು ಸಾಧ್ಯವಿಲ್ಲ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ವಿಧಾನಪರಿಷತ್ ನಲ್ಲಿ ತಿಳಿಸಿದ್ದಾರೆ.

ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿಯ ಡಿ ಎಸ್ ಅರುಣ್  ಅವರ ಪ್ರಶ್ನೆಗೆ ಉತ್ತರಿಸಿದ ಸುರೇಶ್, ಇವರುಗಳನ್ನು ಸರ್ಕಾರಿ ನೌಕರರು ಎಂದು ಘೋಷಿಸಲು ಇತಿಮಿತಿಗಳಿವೆ ಎಂದರು.

ಬಹುತೇಕ ಈ ಎಲ್ಲಾ ನೌಕರರು ಹೊರಗುತ್ತಿಗೆ ಆಧಾರದ ಮೇರೆಗೆ ಕಾರ್ಯನಿರ್ವಹಿಸುತ್ತಿದ್ದಾರೆ. ನೀರು ಸರಬರಾಜು ಕಾರ್ಯದಲ್ಲಿ ತೊಡಗಿರುವ ಈ ನೌಕರರ ಸೇವೆಯನ್ನು ಖಾಯಂಗೊಳಿಸಲು ಕಾನೂನಿನಲ್ಲಿ ಅವಕಾಶವಿಲ್ಲ‌ ಎಂದರು.

ಇಂತಹ ಸೇವೆಗಾಗಿ ಕಾರ್ಮಿಕ ಇಲಾಖೆ ನಿಗದಿಪಡಿಸಿದ ಕನಿಷ್ಠ ವೇತನ ನೀಡಲಾಗುತ್ತಿದೆ. ಅದೇ ರೀತಿ ಬಿಬಿಎಂಪಿ ಸೇರಿದಂತೆ ರಾಜ್ಯದಲ್ಲಿ 35 ಸಾವಿರ ಪೌರ ಕಾರ್ಮಿಕರಿದ್ದಾರೆ. ಅವರನ್ನು ಸರ್ಕಾರಿ ನೌಕರರಂತೆಯೇ ಪರಿಗಣಿಸಿ ಅದಕ್ಕೆ ಅನುಗುಣವಾಗಿ ವೇತನ ಮತ್ತಿತರ ಸೌಲಭ್ಯಗಳನ್ನು ನೀಡಲಾಗುತ್ತಿದೆ ಎಂದರು.

ಬಿಬಿಎಂಪಿ ಹೊರತುಪಡಿಸಿ ಜಲಮಂಡಳಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ಆಧಾರದ ಮೇರೆಗೆ ಕರ್ತವ್ಯ ನಿರ್ವಹಿಸುತ್ತಿರುವ 1504 ವಾಟರ್ ಮ್ಯಾನ್ ಗಳಿದ್ದು ಇವರ ಕೆಲಸ ಖಾಯಂ ಕೋರಿ ಪೌರಾಡಳಿತ ನಿರ್ದೇಶನಾಲಯ ಪ್ರಸ್ತಾವನೆ ಸಲ್ಲಿಸಿತ್ತು. ಆದರೆ ಆರ್ಥಿಕ ಇಲಾಖೆಯು ಹೊರಗುತ್ತಿಗೆ ನೌಕರರನ್ನ  ಯಥಾಸ್ಥಿತಿಯಂತೆ ಮುಂದುವರೆಸಬೇಕು‌ ಎಂದು ಸಲಹೆ ಮಾಡಿದೆ ಎಂದರು.

ಅಲ್ಲದೆ ಈ ಎಲ್ಲಾ ನೌಕರರಿಗೂ ಕನಿಷ್ಠ ವೇತನ ಕಾಯ್ದೆಯಂತೆ ವೇತನ ಪಾವತಿಸಬೇಕೆಂದು ಹೇಳಿದೆ. ಹೀಗಾಗಿ ಮಹಾನಗರ ಪಾಲಿಕೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನೌಕರರನ್ನ ಖಾಯಂ ನೌಕರರನ್ನಾಗಿ ಪರಿಗಣಿಸಲು ಸಾಧ್ಯವಿಲ್ಲ ಎಂದರು.

Leave a Reply