ರಾಜ್ಯದ ಯಾವುದೇ ಜಿಲ್ಲೆಯಲ್ಲಿಯೂ ಬಿತ್ತನೆ ಬೀಜ, ರಸಗೊಬ್ಬರದ ಕೊರತೆ ಇಲ್ಲ: ಚಲುವರಾಯಸ್ವಾಮಿ

2 years ago

ಬೆಂಗಳೂರು: ರಾಜ್ಯದ ಯಾವುದೇ ಜಿಲ್ಲೆಯಲ್ಲಿಯೂ ಬಿತ್ತನೆ ಬೀಜ, ರಸಗೊಬ್ಬರದ ಕೊರತೆ ಇಲ್ಲ. ಅಧಿಕಾರಿಗಳು ರೈತರಿಗೆ ಸೂಕ್ತ ಮಾಹಿತಿ ಮಾರ್ಗದರ್ಶನ ನೀಡಬೇಕು. ಅನಗತ್ಯ ಗೊಂದಲ ಸೃಷ್ಟಿ ಮಾಡಿದರೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಘೋಷಣೆಯಾಗಿರುವ ಕೃಷಿ ಇಲಾಖೆಯ ಹೊಸ ಯೋಜನೆಗಳ ಅನುಷ್ಠಾನ ಕುರಿತು ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ರಾಜ್ಯ ಸರ್ಕಾರ ಬಜೆಟ್ ನಲ್ಲಿ ಘೋಷಿಸಿರುವ ಹೊಸ ಕೃಷಿ ಯೋಜನೆಗಳನ್ನು ಜೂನ್ 20ರೊಳಗೆ ಅನುಷ್ಠಾನಕ್ಕೆ ತರುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಪ್ರಸಕ್ತ ಸಾಲಿನ ಆಯವ್ಯಯಲ್ಲಿ ಘೋಷಣೆಯಾದ 19 ಯೋಜನೆಗಳಲ್ಲಿ 12 ಯೋಜನೆಗಳಿಗೆ ಸರ್ಕಾರಿ ಆದೇಶ ಹೊರಡಿಸಿದ್ದು, ಬಾಕಿ ಉಳಿದ 7 ಘೋಷಣೆಗಳಿಗೆ ವಾರದೊಳಗೆ ಸರ್ಕಾರಿ ಆದೇಶ ಹೊರಡಿಸಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿ ಎಂದು ಸೂಚಿಸಿದರು.

ಸರ್ಕಾರದಲ್ಲಿ ಅನುದಾನಕ್ಕೆ ಕೊರತೆ ಇಲ್ಲ. ಕೃಷಿ ಕ್ಷೇತ್ರವನ್ನು ಸುಸ್ಥಿರ ಹಾಗೂ ಲಾಭದಾಯಕಗೊಳಿಸಲು ರೈತ ಸಮೃದ್ದಿ ಯೋಜನೆ ರೂಪಿಸಿದ್ದು ಇದು ಸಮರ್ಪಕವಾಗಿ ತಲುಪಬೇಕು ಇದು ರಾಜ್ಯ ಸರ್ಕಾರದ ಆಶಯ ಕೃಷಿ, ತೋಟಗಾರಿಕೆ, ಪಶು ಸಂಗೋಪನೆ ಒಳಗೊಂಡಂತೆ ವಿವಿಧ ಇಲಾಖೆಗಳ ಯೋಜನೆಗಳ ಸಂಯೋಜನೆ ಮೂಲಕ ಕಾರ್ಯಕ್ರಮ ಅನುಷ್ಠಾನ ಮಾಡಬೇಕು ಎಂದರು.

ಯೋಜನೆಗಳ ಅನುಷ್ಠಾನದ ಸಂದರ್ಭದಲ್ಲಿ ಉಂಟಾಗಬಹುದಾದ ಸಮಸ್ಯೆಗಳ ಬಗ್ಗೆ ಪೂರ್ವಾವಲೋಕನ ಆಗಬೇಕಿದೆ. ಈ ಬಗ್ಗೆ ಅಧಿಕಾರಿಗಳು ಚರ್ಚಿಸಿ ಅಭಿಪ್ರಾಯ ತಿಳಿಸಿ ಎಂದರು.

ಪ್ರತ್ಯೇಕ ಆಹಾರ ಸಂಸ್ಕೃರಣೆ ಮತ್ತು ರಪ್ತು ಉತ್ತೇಜನ ಆಯುಕ್ತಾಲಯ ಸ್ಥಾಪನೆ ಮತ್ತು ಕೆಲ ಸಂಸ್ಥೆಗಳನ್ನು ಅದರ ವ್ಯಾಪ್ತಿಗೆ ತರುವ ಬಗ್ಗೆ ಸಾಧಕ ಬಾಧಕಗಳ ಬಗ್ಗೆ ಪರಿಶೀಲಿಸಿ ಪ್ರಸ್ತಾವನೆ ಸಿದ್ದಪಡಿಸಿ, ಕರ್ನಾಟಕ ರೈತ ಸಮೃದ್ದಿ ಯೋಜನೆ, ಕೃಷಿ ಅಭಿವೃದ್ಧಿ ಪ್ರಾಧಿಕಾರ, ಕೃಷಿ ಭಾಗ್ಯ ಯೋಜನೆ, ಸಮುದಾಯದ ಬೀಜ ಬ್ಯಾಂಕ್ ಸ್ಥಾಪನೆ, ನಮ್ಮ ಮಿಲೆಟ್ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಆಗಬೇಕು ವ್ಯವಸ್ಥಿತ ಚಾಲನೆ ನೀಡಬೇಕು ಎಂದರು.

ಮಿಷಿನ್ ಲರ್ನಿಂಗ್ ನಂತಹ ಅತ್ಯಾಧುನಿಕ ತಂತ್ರಜ್ಞಾನ ಬಳಸಿ ಬೆಳೆ ಉತ್ಪಾದಕತೆ ಮುನ್ಸೂಚಿಸಲು ದತ್ತಾಂಶ ಅಭಿವೃದ್ಧಿಪಡಿಸಿ, ರೈತ ಉತ್ಪಾಕತೆ ಸಂಸ್ಥೆಗಳಿಗೆ ಬೆಂಬಲ ನೀಡಲು ಅಗ್ರಿ ಅ್ಯಕ್ಸಿಲೇಟರ್ ಪ್ಲ್ಯಾಟ್ ಫಾರ್ಮ್ ಮೂಲಕ ಕೃಷಿ ವಲಯದ ಸ್ಟಾರ್ಟಪ್ ಗಳನ್ನು ಉತ್ತೇಜಿಸುವ ಅನುಷ್ಠಾನ ಚುರುಕುಗೊಳಿಸಿ ಎಂದರು.

ಇಲಾಖೆ ಯಲ್ಲಿ ಬಾಕಿ ಉಳಿದ ಕಡತಗಳನ್ನು ಪೂರ್ಣಗೊಳಿಸಿ ವಿಲೇವಾರಿಯಾಗುವಂತೆ ನಿಗಾವಹಿಸಿ ಎಂದು ಸೂಚಿಸಿದರು.

Leave a Reply