ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಮತಿಸಿದರೆ ತಾವು ಮುಖ್ಯಮಂತ್ರಿಯಾಗಲು ಸಿದ್ದ ಎಂದು ಮಾಜಿ ಮಂತ್ರಿ ಆರ್ ವಿ ದೇಶಪಾಂಡೆ ನೀಡಿರುವ ಹೇಳಿಕೆ ಕಾಂಗ್ರೆಸ್ ನಲ್ಲಿ ಸಾಕಷ್ಟು ವ್ಯಾಖ್ಯಾನ ಕುತೂಹಲ ಮತ್ತು ಚರ್ಚೆಗೆ ಗ್ರಾಸವಾಗಿದೆ.
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
ಹಿರಿಯರಾದ ದೇಶಪಾಂಡೆ ಅವರು ಮುಖ್ಯಮಂತ್ರಿ ಆಗಲು ಆಸೆ ಪಟ್ಟಿರುವುದರಲ್ಲಿ ತಪ್ಪೇನೂ ಇಲ್ಲ. ಆದರೆ ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿರಿಯರಾದ ದೇಶಪಾಂಡೆ ಅವರು ಆಸೆ ಪಡುವುದು ತಪ್ಪಲ್ಲ. ಆದರೆ ಮಾಧ್ಯಮಗಳ ಮುಂದೆ ಮಾತನಾಡಬಾರದಿತ್ತು. ಹಿರಿಯರಾದ ಅವರಿಗೆ ಏನು ಗೌರವ ನೀಡಲಾಗುವುದೋ ಅದನ್ನು ನೀಡೋಣ ಎಂದರು.
ಈ ಬಗ್ಗೆ ಬೃಹತ್ ಕೈಗಾರಿಕೆ ಸಚಿವ ಎಂ ಬಿ ಪಾಟೀಲ್ ಪ್ರತಿಕ್ರಿಯೆ ನೀಡಿ, ಆರ್.ವಿ.ದೇಶಪಾಂಡೆ ಸೇರಿದಂತೆ ಹಲವು ಮಂದಿ ಮುಖ್ಯಮಂತ್ರಿಯಾಗುವ ಕುರಿತು ಹೇಳಿಕೆ ನೀಡಿರುವುದು ಸಾಂದರ್ಭಿಕ ಅಷ್ಟೇ. ನಾನು ಕೂಡ ಈ ಮೊದಲು ಇಂತಹ ಹೇಳಿಕೆ ನೀಡಿದ್ದೇನೆ. ಆದರೆ ನಮಲ್ಲಿ ಯಾವುದೇ ಗೊಂದಲಗಳಿಲ್ಲ. ಪರಸ್ಪರ ಭೇಟಿಯಾಗುತ್ತಿರುತ್ತೇವೆ ಎಂದರು.
ಪಕ್ಷದ ವಿಚಾರ, ಇಲಾಖೆ ಮತ್ತು ಕ್ಷೇತ್ರಕ್ಕೆ ಸಂಬಂಧಪಟ್ಟ ಚರ್ಚೆಗಳಾಗುತ್ತವೆ. ರಾಜಕೀಯದ ಬಗ್ಗೆಯೂ ಮಾತನಾಡುತ್ತೇವೆ. ಅದರಲ್ಲಿ ತಪ್ಪೇನೂ ಇಲ್ಲ ಎಂದು ಸಮರ್ಥಿಸಿಕೊಂಡರು. ಮುಖ್ಯಮಂತ್ರಿ ಬದಲಾವಣೆ ಎಂಬುದು ಹಗಲು ಕನಸು. ಅದು ಸಾಧ್ಯವಿಲ್ಲ ಎಂದರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸುದೀರ್ಘ ರಾಜಕೀಯ ಅನುಭವ ಹೊಂದಿದ್ದು, ರಾಜ್ಯ ರಾಜಕಾರಣಕ್ಕೆ ಮರಳಲಿದ್ದಾರೆ ಎಂಬುದು ಆಧಾರರಹಿತ ಎಂದರು.
ಮೀನುಗಾರಿಕೆ ಮತ್ತು ಬಂದರು ಸಚಿವ ಮಂಗಳ ವೈದ್ಯ ಪ್ರತಿಕ್ರಿಯೆ ನೀಡಿ, ಹಿರಿಯರಾದ ದೇಶಪಾಂಡೆ ಮುಖ್ಯಮಂತ್ರಿ ಆಗಲು ಅರ್ಹರಿದ್ದಾರೆ ಹಾಗೂ ಅನುಭವಿಗಳು ಆಗಿದ್ದಾರೆ. ಆದರೆ ಸದ್ಯಕ್ಕೆ ಹುದ್ದೆ ಖಾಲಿ ಇಲ್ಲ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ದೇಶಪಾಂಡೆಯವರು ಉತ್ತಮ ಸ್ನೇಹಿತರು. ಇಬ್ಬರ ನಡುವೆ ಒಳ್ಳೆಯ ಬಾಂಧವ್ಯ ಮತ್ತು ಸ್ನೇಹ ಇದೆ. ಈ ಹಿನ್ನೆಲೆಯಲ್ಲಿ ಅವರು ಈ ಮಾತು ಹೇಳಿರಬಹುದು. ಅದಕ್ಕೆ ವಿಶೇಷ ವ್ಯಾಖ್ಯಾನ ನೀಡುವ ಅಗತ್ಯವಿಲ್ಲ ಎಂದರು.




