ಲೋಕಸಭೆ ಪ್ರವೇಶಿಸಿದ ರಾಜ್ಯದ ಮೂವರು ಮಾಜಿ ಮುಖ್ಯಮಂತ್ರಿಗಳು

2 years ago

ಬೆಂಗಳೂರು: ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದ ಮೂವರು ಮುಖ್ಯಮಂತ್ರಿಗಳು ಗೆಲುವು ಸಾಧಿಸಿದ್ದಾರೆ. ಮಂಡ್ಯದಿಂದ ಕಣಕ್ಕಿಳಿದಿದ್ದ ಎಚ್.ಡಿ.ಕುಮಾರಸ್ವಾಮಿ, ಬೆಳಗಾವಿಯಲ್ಲಿ ಸ್ಪರ್ಧಿಸಿದ್ದ ಜಗದೀಶ್ ಶೆಟ್ಟರ್ ಮತ್ತು ಹಾವೇರಿಯಿಂದ ಕಣಕ್ಕಿಳಿದಿದ್ದ ಬಸವರಾಜ ಬೊಮ್ಮಾಯಿ ಜಯಿಸಿದ್ದಾರೆ. ಇದರಲ್ಲಿ ಕುಮಾರಸ್ವಾಮಿ ಮೂರನೇ ಬಾರಿಗೆ ಲೋಕಸಭೆ ಪ್ರವೇಶಿಸುತ್ತಿದ್ದರೆ ಜಗದೀಶ್ ಶೆಟ್ಟರ್ ಮತ್ತು ಬೊಮ್ಮಾಯಿ ಮೊದಲ ಬಾರಿಗೆ ಸಂಸತ್ ಪ್ರವೇಶಿಸುತ್ತಿದ್ದಾರೆ.

ಉಪಚುನಾವಣೆ: ಈ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಶಾಸಕರಾದ ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ ಮತ್ತು ಈ ತುಕಾರಾಂ ಸಂಸದರಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಈ ಮೂರು ಸ್ಥಾನಗಳಿಗೆ ಉಪಚುನಾವಣೆ ನಡೆಯಲಿದೆ.

ಅದೇ ರೀತಿ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ ಆಯ್ಕೆಯಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ಸಂಸದರಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ಉಪಚುನಾವಣೆ ನಡೆಯಲಿದೆ.

25 ವರ್ಷಗಳ ನಂತರ ಗೆಲುವು: ಕುತೂಹಲ ಕೆರಳಿಸಿದ್ದ ಈ ಚುನಾವಣೆಯಲ್ಲಿ ಕಾಂಗ್ರೆಸ್ ಹೊಸ ದಾಖಲೆ ಮಾಡಿದೆ ಸುಮಾರು 25 ವರ್ಷಗಳ ನಂತರ ಹಾಸನ ಮತ್ತು ದಾವಣಗೆರೆ ಲೋಕಸಭೆ ಕ್ಷೇತ್ರಗಳನ್ನು ಕೈವಶ ಮಾಡಿಕೊಳ್ಳುವಲ್ಲಿ ಕಾಂಗ್ರೆಸ್ ಯಶಸ್ಸು ಸಾಧಿಸಿದೆ.

25 ವರ್ಷಗಳ ಹಿಂದೆ ಹಾಸನದಲ್ಲಿ ಮಾಜಿ ಪ್ರಧಾನಿ ದೇವೇಗೌಡ ಅವರನ್ನು ಸೋಲಿಸಿದ ಜಿ ಪುಟ್ಟಸ್ವಾಮಿಗೌಡ ಅವರು ಕಾಂಗ್ರೆಸ್ಸಿನಿಂದ ಆಯ್ಕೆಯಾಗಿದ್ದು ಬಿಟ್ಟರೆ ಇಲ್ಲಿಯವರೆಗೆ ಕಾಂಗ್ರೆಸ್ ಇಲ್ಲಿಂದ ಗೆದ್ದಿರಲಿಲ್ಲ. ಇದೀಗ ಪುಟ್ಟಸ್ವಾಮಿಗೌಡ ಅವರ ಮೊಮ್ಮಗ ಶ್ರೇಯಸ್ ಪಟೇಲ್ ಅವರು 25 ವರ್ಷಗಳ ನಂತರ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಮೊಮ್ಮಗ ಪ್ರಜ್ವಲ್ ರೇವಣ್ಣ ಅವರನ್ನು ಸೋಲಿಸಿ ಲೋಕಸಭೆ ಪ್ರವೇಶಿಸುವಲ್ಲಿ ಯಶಸ್ವಿಯಾಗಿದ್ದಾರೆ.

ದಾವಣಗೆರೆ ಲೋಕಸಭೆ ಕ್ಷೇತ್ರದಲ್ಲಿ 25 ವರ್ಷಗಳ ಹಿಂದೆ ಹಾಲಿ ಶಾಸಕ ಶಾಮನೂರು ಶಿವಶಂಕರಪ್ಪ ಅವರು ಮಲ್ಲಿಕಾರ್ಜುನಪ್ಪ ಅವರನ್ನು ಸೋಲಿಸಿ ಲೋಕಸಭೆಗೆ ಆಯ್ಕೆಯಾಗಿದ್ದು ಬಿಟ್ಟರೆ ಇಲ್ಲಿಯವರೆಗೆ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿರಲಿಲ್ಲ. ಇದೀಗ ಶಾಮನೂರು ಶಿವಶಂಕರಪ್ಪ ಅವರ ಸೊಸೆ ಡಾ.ಪ್ರಭಾವತಿ ಮಲ್ಲಿಕಾರ್ಜುನ್ ಅವರು ಮಲ್ಲಿಕಾರ್ಜುನಪ್ಪ ಅವರ ಸೊಸೆ ಗಾಯತ್ರಿ ಸಿದ್ದೇಶ್ವರ ಅವರನ್ನು ಸೋಲಿಸಿ ಲೋಕಸಭೆ ಪ್ರವೇಶಿಸುವ ಮೂಲಕ ಕಾಂಗ್ರೆಸ್ ಗೆ ಗೆಲುವು ತಂದುಕೊಟ್ಟಿದ್ದಾರೆ.

Leave a Reply