ಕೈದಿಗಳಿಗೆ ವಸ್ತುಗಳನ್ನು ಪೂರೈಸುವ ಕುರಿತು ಮಾರ್ಗಸೂಚಿ ರೂಪಿಸಲು ಕಾಲ ಕೂಡಿ ಬಂದಿದೆ: ಹೈಕೋರ್ಟ್

3 months ago

ಬೆಂಗಳೂರು: ವಿವಿಧ ಆರೋಪಗಳಡಿ ಜೈಲಿನಲ್ಲಿರುವ ಕೈದಿಗಳಿಗೆ ಮನೆ ಊಟ ಹಾಗೂ ಇತರ ಅಗತ್ಯ ವಸ್ತುಗಳನ್ನು ಪೂರೈಸುವ ಕುರಿತು ಮಾರ್ಗಸೂಚಿಗಳನ್ನು ರೂಪಿಸಲು ಕಾಲ ಕೂಡಿ ಬಂದಿದೆ ಎಂದು ಹೈಕೋರ್ಟ್ ತಿಳಿಸಿದೆ.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಜೈಲಿನಲ್ಲಿರುವ ಮೊದಲನೇ ಆರೋಪಿ ಪವಿತ್ರಾ ಗೌಡ, 10ನೇ ಆರೋಪಿ ನಾಗರಾಜ್ ಮತ್ತು 11ನೇ ಆರೋಪಿ ಲಕ್ಷ್ಮಣ್ ವಾರಕೊಮ್ಮೆ ಮನೆಯಿಂದ ಊಟ ತರಿಸಿಕೊಳ್ಳಲು ಅನುಮತಿಸುವಂತೆ ಪರಪ್ಪನ ಅಗ್ರಹಾರ ಜೈಲು ಅಧಿಕಾರಿಗಳಿಗೆ ನಿರ್ದೇಶಿಸಿದ್ದ ವಿಚಾರಣಾ ನ್ಯಾಯಾಲಯದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಏಕ ಸದಸ್ಯ ಪೀಠ, ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ದರ್ಶನ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಾಡಿರುವ ಆದೇಶವನ್ನು ತೋರಿಸುವ ಮೂಲಕ ಜೈಲು ಅಧಿಕಾರಿಗಳು ಅಕ್ಷರಶಃ ಇತರ ಆರೋಪಿಗಳಿಗೆ ಬೆದರಿಕೆಯೊಡ್ಡುತ್ತಿದ್ದಾರೆ. ದರ್ಶನ್ ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನುವ ಕಾರಣಕ್ಕಾಗಿ, ಅವರನ್ನು ಅಮಾನುಷ ರೀತಿಯಲ್ಲಿ ನಡೆಸಿಕೊಳ್ಳಬಾರದು ಎಂದು ವಿಚಾರಣಾಧೀನ ನ್ಯಾಯಾಲಯ ಹೇಳಿದೆ. ಈ ಅಭಿಪ್ರಾಯದಲ್ಲಿ ಯಾವುದೇ ದೋಷಗಳಿಲ್ಲ ಎಂದು ತಿಳಿಸಿದರು.

ಇದಕ್ಕೆ ಪೀಠ, ಯಾವೆಲ್ಲಾ ಕೈದಿಗಳಿಗೆ ವಿಶೇಷ ಸೌಲಭ್ಯ ಕಲ್ಪಿಸಲಾಗಿದೆ ಎಂಬ ಮಾಹಿತಿಯನ್ನು ಪ್ರಾಸಿಕ್ಯೂಷನ್ ಒದಗಿಸಬೇಕು. ಸುಪ್ರೀಂ ಕೋರ್ಟ್ ಆದೇಶಕ್ಕೆ ವಿರುದ್ಧವಾಗಿ ಯಾರಿಗೂ ವಿಶೇಷ ಸೌಲಭ್ಯ ಕಲ್ಪಿಸಲಾಗದು. ಜೈಲು ಕೈಪಿಡಿಯನ್ನು ಪಾಲಿಸಲೇಬೇಕು. ಆಹಾರ ಅಥವಾ ಬೆಡ್ ಅಥವಾ ಇನ್ನಾವುದೇ ವಿಚಾರವಿರಲಿ ಜೈಲಿನಲ್ಲಿ ಸೌಲಭ್ಯ ಕಲ್ಪಿಸುವುದಕ್ಕೆ ಕಾನೂನು ರೂಪಿಸೋಣ. ಕೊಡಲೇಬಾರದು ಎಂದು ಹೇಳುತ್ತಿಲ್ಲ. ವೈದ್ಯರ ಸರ್ಟಿಫಿಕೇಟ್ ಇರಬೇಕಾಗುತ್ತದೆ. ಮಾರ್ಗಸೂಚಿ ರೂಪಿಸಲು ಕಾಲ ಕೂಡಿ ಬಂದಿದೆ ಎಂದು ಅಭಿಪ್ರಾಯಪಟ್ಟಿತು.

ಪೊಲೀಸ್ ಅಧಿಕಾರಿಗಳ ಪರ ವಕೀಲರು, ಸುಪ್ರೀಂ ಕೋರ್ಟ್ ತೀರ್ಪು ಮತ್ತು ಜೈಲು ಕೈಪಿಡಿಯ ಪ್ರಕಾರ ನಡೆಯಲೇಬೇಕು. ಮಾರ್ಗಸೂಚಿ ರೂಪಿಸುವ ಸಂಬಂಧ ಪೀಠಕ್ಕೆ ಎಲ್ಲಾ ದಾಖಲೆಗಳನ್ನು ಒದಗಿಸಲಾಗುವುದು ಎಂದು ತಿಳಿಸಿದರು.

ವಾದ ಆಲಿಸಿದ ಪೀಠ, ನಟ ದರ್ಶನ್ ತಮಗೆ ಮನೆ ಊಟಕ್ಕೆ ಅವಕಾಶ ನೀಡಬೇಕು ಎಂದು ಕೋರಿ 2024ರ ಸೆಪ್ಟೆಂಬರ್​ನಲ್ಲಿ ಅರ್ಜಿ ಸಲ್ಲಿಸಿದ್ದರು. ಆಗಲೇ ಮಾರ್ಗಸೂಚಿ ರೂಪಿಸಬೇಕಿತ್ತು. ಆಗ ದರ್ಶನ್ ಪ್ರತಿನಿಧಿಸಿದ್ದ ಹಿರಿಯ ವಕೀಲ ಪ್ರಭುಲಿಂಗ ನಾವದಗಿ ಅರ್ಜಿ ಹಿಂಪಡೆದಿದ್ದರು. ಈಗ, ಜೈಲು ಕೈಪಿಡಿ, ಅಂದಿನ ಅರ್ಜಿ ಸೇರಿದಂತೆ ಎಲ್ಲಾ ದಾಖಲೆಗಳನ್ನು ಸಲ್ಲಿಸಿದರೆ ಈ ವಿಚಾರದ ಕುರಿತು ಮಾರ್ಗಸೂಚಿ ರೂಪಿಸಲಾಗುವುದು ಎಂದು ಹೇಳಿ ವಿಚಾರಣೆಯನ್ನು ಫೆಬ್ರವರಿ 2ಕ್ಕೆ ವಿಚಾರಣೆ ಮುಂದೂಡಿಕೆ ಮಾಡಿತು.

Leave a Reply