ಬೆಂಗಳೂರು: ಸೇವೆ ಖಾಯಂ ಸೇರಿದಂತೆ ಹಲವು ಬೇಡಿಕೆ ಈಡೇರಿಸಲು ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಕಾನೂನಿನ ಚೌಕಟ್ಟಿನಡಿ ಬಗೆಹರಿಸಲು ಸರ್ಕಾರ ಪ್ರಾಮಾಣಿಕ ಪ್ರಯತ್ನ ನಡೆಸುತ್ತಿದೆ. ಮುಷ್ಕರ ನಿರತರು ಹೋರಾಟ ಕೈಬಿಡಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಮನವಿ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅತಿಥಿ ಉಪನ್ಯಾಸಕರ ಸಮಸ್ಯೆಗಳು ಇಂದು, ನೆನ್ನೆಯದಲ್ಲ. ಸುಮಾರು ವರ್ಷಗಳಿಂದಲೂ ನನೆಗುದಿಯಲ್ಲಿದೆ. ತಾವು ಈ ಬಗ್ಗೆ ಪ್ರಾಮಾಣಿಕ ಪ್ರಯತ್ನ ನಡೆಸುತ್ತಿದ್ದೇನೆ. ಇದನ್ನು ಮನಗಂಡು ಅವರು ಮುಷ್ಕರ ಕೈಬಿಡಬೇಕು. ಇಲ್ಲದೇ ಹೋದರೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕಠಿಣ ನಿರ್ಧಾರ ತೆಗೆದುಕೊಳ್ಳುವುದು ಅನಿವಾರ್ಯವಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಮುಷ್ಕರ ನಿರತರ ಬೇಡಿಕೆ ಈಡೇರಿಸುವ ಸಂಬಂಧ ಸರ್ಕಾರ ತಾತ್ಕಾಲಿಕವಾಗಿ ನಿರ್ಧಾರ ತೆಗೆದುಕೊಂಡು ಸಮಸ್ಯೆ ಬಗೆಹರಿಸಬಹುದು. ಆದರೆ ಅದನ್ನು ಯಾರಾದರೂ ನ್ಯಾಯಾಲಯದಲ್ಲಿ ಪ್ರಶ್ನೆ ಮಾಡಿದರೆ ಕಾನೂನಾತ್ಮಕವಾಗಿ ತೊಂದರೆಯಾಗಲಿದೆ. ಅಭ್ಯರ್ಥಿಗಳ ಭವಿಷ್ಯವೇ ತ್ರಿಶಂಕು ಸ್ಥಿತಿಗೆ ಸಿಲುಕಲಿದೆ. ಹೀಗಾಗಿ ತರಾತುರಿಯಲ್ಲಿ ಇಂತಿಷ್ಟೇ ಸಮಯದಲ್ಲಿ ನಿರ್ಧಾರ ತೆಗೆದುಕೊಳ್ಳಿ ಎಂದು ಒತ್ತಡ ಹೇರುವುದು ಸರಿಯಲ್ಲ ಎಂದರು.
ಹಿಂದಿನ ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಖಾಯಂ ಮಾಡಲು ಸಾಧ್ಯವೇ ಇಲ್ಲ ಎಂದು ಸ್ಪಷ್ಟ ಉತ್ತರ ನೀಡಿತ್ತು. ನಾವು ಚುನಾವಣೆ ಪ್ರಣಾಳಿಕೆಯಲ್ಲಿ ಅತಿಥಿ ಉಪನ್ಯಾಸಕರ ಪರವಾಗಿ ಇರುವುದಾಗಿ ಭರವಸೆ ನೀಡಿದ್ದೆವು. ಅದಕ್ಕೆ ತಕ್ಕ ಹಾಗೆ ಕಾನೂನಾತ್ಮಕವಾಗಿ ಯಾವ ರೀತಿ ಅವಕಾಶ ಕಲ್ಪಿಸಬಹುದು ಎಂಬ ಪರಿಶೀಲನೆ ನಡೆಸುತ್ತಿದ್ದೇವೆ ಎಂದರು.
ಪಾಠ ಪ್ರವಚನಗಳನ್ನು ಸ್ಥಗಿತಗೊಳಿಸಿ ಮುಷ್ಕರ ನಡೆಸುತ್ತಿರುವುದು ಸರಿಯಲ್ಲ. ಕೆಲ ಸಂಘಟನೆಗಳು ಮುಷ್ಕರದಿಂದ ಹಿಂದೆ ಸರಿಯುವುದಾಗಿ ತಮ್ಮೊಂದಿಗೆ ಹೇಳಿವೆ. ಆದರೆ ಅದಿನ್ನೂ ಜಾರಿಯಾಗಿಲ್ಲ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಾವು ಯೋಚಿಸಬೇಕಿದೆ. ಒಂದು ತಿಂಗಳಿನಿಂದಲೂ ಪ್ರತಿಭಟನೆಗಳು ನಡೆಯುತ್ತಿವೆ. ಸರ್ಕಾರ ನಿಮ್ಮ ಬೇಡಿಕೆಗಳನ್ನು ಸಹಾನುಭೂತಿಯಿಂದ ಪರಿಶೀಲಿಸುತ್ತಿದೆ. ಆಡಳಿತಾತ್ಮಕ ಹಾಗೂ ಕಾನೂನಾತ್ಮಕವಾಗಿ ಚರ್ಚೆಗಳಾಗುತ್ತಿವೆ. ಈಗಲೂ ನೀವು ಮುಷ್ಕರ ಕೈಬಿಡದೇ ಇದ್ದರೆ ನಾವು ಬೇರೆ ರೀತಿಯ ನಿರ್ಧಾರ ತೆಗೆದುಕೊಳ್ಳಬೇಕಾಗಬಹುದು ಎಂದರು.




