ರಾಜ್ಯ ಕಾಂಗ್ರೆಸ್ ನಲ್ಲಿ ಅಧಿಕಾರಕ್ಕಾಗಿ ಹಗ್ಗಜಗ್ಗಾಟ ಆರಂಭವಾಗಿದೆ: ವಿಜಯೇಂದ್ರ

1 year ago

ರಾಜ್ಯ ಕಾಂಗ್ರೆಸ್ ನಲ್ಲಿ ಅಧಿಕಾರಕ್ಕಾಗಿ ಹಗ್ಗಜಗ್ಗಾಟ ಆರಂಭವಾಗಿದೆ: ವಿಜಯೇಂದ್ರ

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಅಧಿಕಾರಕ್ಕಾಗಿ ಹಗ್ಗಜಗ್ಗಾಟ ಆರಂಭವಾಗಿದೆ. ಸಿಎಂ ಸಿದ್ದರಾಮಯ್ಯ ತಮ್ಮ ಕುರ್ಚಿ ಭದ್ರಪಡಿಸಿಕೊಳ್ಳಲು ಜಾತಿ, ಜಾತಿ ಮತ್ತು ಧರ್ಮ, ಧರ್ಮಗಳ ನಡುವೆ ಬಿರುಕು ಮೂಡಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ.

ಜಾತಿ ಮತ್ತು ಧರ್ಮಗಳ ನಡುವೆ ಒಳ ಜಗಳ ತಂದಿಡುವ ಕೆಲಸವನ್ನು ಇನ್ನಾದರೂ ಕೈ ಬಿಡಿ. ಇಲ್ಲವಾದರೆ  ರಾಜ್ಯದ ಜನತೆಯೇ ದಂಗೆ ಎದ್ದು ನಿಮಗೆ ಬುದ್ದಿ ಕಲಿಸುವ ಕಾಲ ದೂರವಿಲ್ಲ ಎಂಬುದನ್ನು ನೀವು ಮರೆಯದಿರಿ ಎಂದಿದ್ದಾರೆ.

ಈ ಕುರಿತು ಸಾಮಾಜಿಕ ಜಾಲ ತಾಣ ಎಕ್ಸ್ ನಲ್ಲಿ ಸುದೀರ್ಘ ಪೋಸ್ಟ್ ಮಾಡಿರುವ ಅವರು, ಕರ್ನಾಟಕ ರಾಜ್ಯದ ಒಟ್ಟು ಜನ ಕಲ್ಯಾಣದ ಬಗ್ಗೆ ಚಿಂತಿಸುವ ಬದಲು ಮತ ಬ್ಯಾಂಕನ್ನು ಕೇಂದ್ರೀಕರಿಸಿ, ಅಲುಗಾಡುತ್ತಿರುವ ನಿಮ್ಮ ಕುರ್ಚಿ ಉಳಿಸಿಕೊಳ್ಳಲು ಜಾತಿಗಣತಿಯ ಹೆಸರಿನಲ್ಲಿ ಗೊಂದಲಗಳನ್ನು ಸೃಷ್ಟಿಸಿ ಸಮಾಜವನ್ನು ಛಿದ್ರ ಮಾಡಲು ಹೊರಟಿರುವ ನಿಮಗೆ, ಪ್ರಧಾನಿಗಳನ್ನು ಕುರಿತು ಟೀಕಿಸುವ ಯಾವುದೇ ನೈತಿಕ ಹಕ್ಕು ಇಲ್ಲ ಎಂದಿದ್ದಾರೆ.

ಕರ್ನಾಟಕದಲ್ಲಿ ಮುಸ್ಲಿಂ ಮೀಸಲಾತಿಯ ಹೆಸರಿನಲ್ಲಿ ಪರಿಶಿಷ್ಟರೂ ಸೇರಿದಂತೆ ಇತರ ಶೋಷಿತರು ಹಾಗೂ ಬಡವರ ಹಕ್ಕು ಕಸಿಯಲಾಗುತ್ತಿದೆ ಎಂದು ಪ್ರಧಾನಿಗಳು ಹೇಳಿದ್ದಾರೆ. ಮೀಸಲಾತಿ ಪ್ರಮಾಣವನ್ನು ಪರಿಶಿಷ್ಟರಿಗೆ ಶೇ.15 ರಿಂದ ಶೇ.17 ಕ್ಕೆ, ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಶೇ.3 ರಿಂದ ಶೇ.7 ಕ್ಕೆ ಹೆಚ್ಚಿಸಿದ್ದು ನಮ್ಮ ಬಿಜೆಪಿ ಸರ್ಕಾರದ ಆಡಳಿತ ಅವಧಿಯಲ್ಲಿಯೇ ಹೊರತು. ನಿಮ್ಮ ಆಡಳಿತ ಅವಧಿಯಲ್ಲಿ ಅಲ್ಲ ಎನ್ನುವುದು ನಿಮಗೆ ನೆನಪಿರಲಿ ಎಂದಿದ್ದಾರೆ.

ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡಲು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿರುವ ಸಂವಿಧಾನದಲ್ಲಿ ಅವಕಾಶವಿಲ್ಲ. ಕರ್ನಾಟಕದಲ್ಲಿ ಮುಸ್ಲಿಂಮರ ಕಲ್ಯಾಣಕ್ಕಿಂತ ಅವರ ಮತಬ್ಯಾಂಕ್ ಕೇಂದ್ರೀಕರಿಸಿ ನೀವು ರೂಪಿಸುತ್ತಿರುವ ನಿಯಮ ಹಾಗೂ ಯೋಜನೆಗಳನ್ನು ಪ್ರಧಾನಿಗಳು ಟೀಕಿಸಿದ್ದಾರೆ. ವಾಸ್ತವದಲ್ಲಿ ರಾಜ್ಯದಲ್ಲಿ ಧರ್ಮಗಳ ನಡುವೆ ಬಿರುಕು ಮೂಡಿಸಿ ದ್ವೇಷ ಬಿತ್ತುವ ಕೆಲಸಕ್ಕೆ ಮುಂದಾಗಿದ್ದೀರಿ ಎಂದಿದ್ದಾರೆ.

ರಾಷ್ಟ್ರಕವಿ ಕುವೆಂಪು ಅವರ ಕಲ್ಪನೆಯ ಸರ್ವ ಜನಾಂಗದ ಶಾಂತಿಯ ತೋಟಕ್ಕೆ ಬೆಂಕಿ ಹೆಚ್ಚುತ್ತಿದ್ದೀರಿ. ಇದನ್ನೇ ಪ್ರಧಾನಮಂತ್ರಿಗಳು ಹೇಳಿದ್ದಾರೆ. ನೀವೊಬ್ಬ ವಕೀಲರೂ ಹೌದು ಸಂವಿಧಾನವನ್ನು ನೀವು ಓದಿಕೊಂಡಿರಬಹುದು ಎಂದು ನಾವು ಭಾವಿಸಿದ್ದೆವು. ಆದರೆ ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡುವ ಕುರಿತು ನೀವು ಹೇಳಿರುವ ಮಾತುಗಳು ಆಶ್ಚರ್ಯವೆನಿಸಿದೆ ಎಂದಿದ್ದಾರೆ.

Leave a Reply