11 ವಿಧಾನ ಪರಿಷತ್ ಸ್ಥಾನಗಳಿಗೆ ಅವಿರೋಧ ಆಯ್ಕೆ: ಘೋಷಣೆ ಬಾಕಿ

2 years ago

ಬೆಂಗಳೂರು: ವಿಧಾನಸಭೆಯಿಂದ ವಿಧಾನಪರಿಷತ್ ನ 11 ಸ್ಥಾನಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಆಯ್ಕೆ ಬಯಸಿ ನಾಮಪತ್ರ ಸಲ್ಲಿಸಿರುವ ಸಚಿವ ಬೋಸರಾಜು, ಮಾಜಿ ಸಚಿವ ಸಿ.ಟಿ.ರವಿ ಸೇರಿದಂತೆ ಎಲ್ಲರೂ ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆಯಿದೆ.

ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ನಿಂದ ಹನ್ನೊಂದು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿತ್ತು.

ತಮ್ಮ ಪಕ್ಷದ ಮುಖಂಡರೊಂದಿಗೆ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿಗಳು ಪ್ರತ್ಯೇಕವಾಗಿ ನಾಮಪತ್ರ ಸಲ್ಲಿಸಿದರು. ಕಾಂಗ್ರೆಸ್ ಅಭ್ಯರ್ಥಿಗಳು ಪ್ರತ್ಯೇಕವಾಗಿ ಉಮೇದುವಾರಿಕೆ ಸಲ್ಲಿಸಿದರೆ, ಬಿಜೆಪಿ-ಜೆಡಿಎಸ್ ಎನ್ಡಿಎ ಮೈತ್ರಿಕೂಟ ಅಭ್ಯರ್ಥಿಗಳು ಜೊತೆಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು.

ಮಂಗಳವಾರ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಗುರುವಾರ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.

ಮೊದಲು ಕಾಂಗ್ರೆಸ್ನ 7 ಅಭ್ಯರ್ಥಿಗಳಾದ ಎನ್.ಎಸ್. ಬೋಸರಾಜು, ವಸಂತ್ಕುಮಾರ್, ಡಾ.ಯತೀಂದ್ರ ಸಿದ್ದರಾಮಯ್ಯ, ಕೆ.ಗೋವಿಂದರಾಜ್, ಐವನ್ ಡಿಸೋಜಾ, ಬಿಲ್ಕಿಸ್ ಬಾನೋ, ಜಗದೇವ್ ಗುತ್ತೇದಾರ್ ಚುನಾವಣಾಧಿಕಾರಿಯೂ ಆಗಿರುವ ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಅವರಿಗೆ ನಾಮಪತ್ರ ಸಲ್ಲಿಸಿದರು. ಈ ವೇಳೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರು, ಶಾಸಕರು ಹಾಗೂ ಪಕ್ಷದ ಮುಖಂಡರು ಹಾಜರಿದ್ದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಸಿಎಂಗಳಾದ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮಾಯಿ, ಡಿ.ವಿ.ಸದಾನಂದಗೌಡ, ವಿಧಾನಸಭೆಯ ವಿಪಕ್ಷದ ನಾಯಕ ಆರ್.ಅಶೋಕ್, ಮಾಜಿ ಸಿಎಂ ಎ.ಡಿ.ಕುಮಾರಸ್ವಾಮಿ ಸೇರಿದಂತೆ ಇತರೆ ನಾಯಕರೊಂದಿಗೆ ಆಗಮಿಸಿದ ಬಿಜೆಪಿಯ ಸಿ.ಟಿ.ರವಿ, ಎನ್.ರವಿಕುಮಾರ್ ಹಾಗೂ ಎಂ.ಜಿ.ಮುಳೆ, ಜೆಡಿಎಸ್ನ ಹಿರಿಯ ಮುಖಂಡ ಜವರಾಯಗೌಡ ನಾಮಪತ್ರ ಸಲ್ಲಿಸಿದರು.

ವಿಧಾನಸಭೆಯಲ್ಲಿ ಹೊಂದಿರುವ ಶಾಸಕರ ಸಂಖ್ಯೆಯ ಆಧಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ 7, ಪ್ರತಿಪಕ್ಷ ಬಿಜೆಪಿ 3 ಹಾಗೂ ಜೆಡಿಎಸ್ 1 ಸ್ಥಾನಗಳನ್ನು ಸುಲಭವಾಗಿ ಗೆಲ್ಲಲಿದೆ. ವಿಧಾನಸಭೆಯಿಂದ ವಿಧಾನಪರಿಷತ್ಗೆ ನಡೆಯುವ ದ್ವೈವಾರ್ಷಿಕ ಚುನಾವಣೆಯಲ್ಲಿ ಒಬ್ಬ ಅಭ್ಯರ್ಥಿಯ ಗೆಲುವಿಗೆ 19 ಮತಗಳ ಅಗತ್ಯವಿದೆ.

ಅರವಿಂದ್ಕುಮಾರ್ ಅರಳಿ, ಎನ್.ಎಸ್.ಬೋಸರಾಜು, ಕೆ.ಗೋವಿಂದರಾಜ್, ಡಾ. ತೇಜಸ್ವಿನಿ ಗೌಡ, ಮುನಿರಾಜು ಗೌಡ ಪಿ.ಎಂ, ಕೆ.ಪಿ.ನಂಜುಂಡಿ ವಿಶ್ವಕರ್ಮ ಬಿ.ಎಂ.ಫಾರೂಕ್, ರಘುನಾಥ ರಾವ್ ಮಲ್ಕಾಪುರೆ, ಎನ್. ರವಿ ಕುಮಾರ್, ಎಸ್.ರುದ್ರೇಗೌಡ, ಕೆ.ಹರೀಶ್ಕುಮಾರ್ ಅವರ ಅಧಿಕಾರಾವಧಿ ಮುಕ್ತಾಯವಾಗಲಿದ್ದು, ತೆರವಾಗಲಿರುವ ಈ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದೆ. ಇದರಲ್ಲಿ ಎನ್.ಎಸ್.ಬೋಸರಾಜ್, ಗೋವಿಂದರಾಜ್, ಎನ್.ರವಿಕುಮಾರ್ ಪುನರಾಯ್ಕೆಯಾಗಲಿದ್ದಾರೆ.

Leave a Reply