ವಿಧಾನ ಪರಿಷತ್ ಗೆ ಅವಿರೋಧ ಆಯ್ಕೆ: ಪದವೀಧರ, ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆ ಹಿನ್ನಡೆ

2 years ago

ಬೆಂಗಳೂರು: ರಾಜ ವಿಧಾನಸಭೆಯಿಂದ ವಿಧಾನಪರಿಷತ್ತಿನ ಹನ್ನೊಂದು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬಿಜೆಪಿ ಮತ್ತು ಜೆಡಿಎಸ್ ನ ಎಲ್ಲಾ11 ಮಂದಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಣ್ಣ ನೀರಾವರಿ ಸಚಿವ ಬೋಸರಾಜು, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ, ಕಾಂಗ್ರೆಸ್ ಹಿರಿಯ ನಾಯಕ ಐವಾನ್ ಡಿಸೋಜಾ, ವಸಂತ್ ಕುಮಾರ್, ಬಿಲ್ಕೀಸ್ ಬಾನು, ಜಗದೇವ್ ಗುತ್ತೇದಾರ್ ಅವಿರೋಧವಾಗಿ ಆಯ್ಕೆಯಾದರೆ, ಬಿಜೆಪಿಯಿಂದ ಮಾಜಿ ಸಚಿವ ಸಿ ಟಿ ರವಿ ಮತ್ತು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಜೆಡಿಎಸ್ ನಿಂದ ಜವರಾಯಿ ಗೌಡ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

ಇನ್ನು ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದಿಂದ ನಡೆದ ಆರು ಸ್ಥಾನಗಳ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪ್ರಾಬಲ್ಯ ಮೆರೆದಿದೆ. ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಕಣಕ್ಕೆ ಇಳಿದಿದ್ದ ಮಾಜಿ ಶಾಸಕಿ ಪೂರ್ಣಿಮಾ ಅವರ ಪತಿ, ಡಿ ಟಿ ಶ್ರೀನಿವಾಸ್ ಮೊದಲ ಸುತ್ತಿನ ಮತ ಎಣಿಕೆಯಲ್ಲಿ ದೊಡ್ಡ ಪ್ರಮಾಣದ ಮುನ್ನಡೆ ಸಾಧಿಸಿದ್ದು ಹಾಲಿ ಸದಸ್ಯ ಬಿಜೆಪಿಯ ನಾರಾಯಣಸ್ವಾಮಿ ಅವರು ಸೋಲುವುದು ಬಹುತೇಕ ಖಚಿತವಾಗಿದೆ.

ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್ನ ಕೆ.ವಿವೇಕಾನಂದ ಗೆಲುವು ಸಾಧಿಸಿದ್ದಾರೆ. ಇತ್ತೀಚೆಗೆ ಜೆಡಿಎಸ್ ತೊರೆದು, ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಮರಿತಿಬ್ಬೇಗೌಡ 4,658 ಮತಗಳನ್ನು ಪಡೆಯುವ ಮೂಲಕ ಸೋಲು ಅನುಭವಿಸಿದರು.

ಈಶಾನ್ಯ ಕರ್ನಾಟಕ ಪದವೀಧರ ಕ್ಷೇತ್ರದಲ್ಲಿ ಮತ ಎಣಿಕೆ ಪ್ರಗತಿಯಲ್ಲಿದ್ದು, ಬಿಜೆಪಿಯ ಅಮರನಾಥ ಪಾಟೀಲ ಮುನ್ನಡೆ ಸಾಧಿಸಿದ್ದಾರೆ. ನೈಋತ್ಯ ಶಿಕ್ಷಕರ ಕ್ಷೇತ್ರದಲ್ಲಿ ಹಾಲಿ ಸದಸ್ಯ ಜೆಡಿಎಸ್ ನ ಎಸ್.ಎಲ್. ಭೋಜೇಗೌಡ ಗೆಲುವು ಸಾಧಿಸಿದ್ದಾರೆ.

Leave a Reply