ಇಂದಿರಾ ಕ್ಯಾಂಟೀನ್, ಮಧ್ಯಾಹ್ನದ ಬಿಸಿಯೂಟದಲ್ಲಿ ಸಿರಿಧಾನ್ಯ ಬಳಕೆ: ಸಿದ್ದರಾಮಯ್ಯ

2 years ago

ಬೆಂಗಳೂರು: ಸಿರಿಧಾನ್ಯಗಳ ಬಳಕೆಯಿಂದ ಜನರ ಆರೋಗ್ಯದ ಮೇಲೆ ಸಾಕಷ್ಟು ಉತ್ತಮ ಪರಿಣಾಮ ಬೀರಲಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಇಂದಿರಾ ಕ್ಯಾಂಟೀನ್ ಮತ್ತು ಶಾಲಾ‌ ಮಕ್ಕಳ ಮಧ್ಯಾಹ್ನದ ಊಟದಲ್ಲಿ ಸಿರಿಧಾನ್ಯ ಬಳಕೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಕೃಷಿ ಇಲಾಖೆ ಆಯೋಜಿಸಿದ್ದ ಸಿರಿಧಾನ್ಯ ಮತ್ತು ಸಾವಯವ ಅಂತಾರಾಷ್ಟ್ರೀಯ ವಾಣಿಜ್ಯ ಮೇಳ 2024 ಮತ್ತು ಸಿರಿಧಾನ್ಯ ತಿನಿಸುಗಳ ಪ್ರದರ್ಶನ ಮತ್ತು ಮಾರಾಟ ಮಳಿಗೆಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ರಾಜ್ಯದ ಜನರು ಮತ್ತು ಶಾಲಾ ಮಕ್ಕಳು ಇನ್ನಷ್ಟು ಸದೃಢವಾಗಿ, ಆರೋಗ್ಯವಂತರಾಗಲು ಇಂದಿರಾ ಕ್ಯಾಂಟೀನ್ ಮತ್ತು ಶಾಲಾ ಊಟದಲ್ಲಿ ಸಿರಿ ಧಾನ್ಯ ಬಳಸುವ ಸಂಬಂಧ ಸದ್ಯದಲ್ಲೇ ಸಂಬಂಧಪಟ್ಟ ಇಲಾಖೆಗಳ ಸಭೆ ಕರೆದು ಚರ್ಚಿಸಿ ತೀರ್ಮಾನಿಸಲಾಗುವುದು ಎಂದರು.

ಹಾಗೆಯೇ ಉತ್ತಮ ಗುಣಮಟ್ಟದ ಸಿರಿಧಾನ್ಯ ಬೀಜ ಉತ್ಪಾದನೆ, ಹೊಸ ತಳಿ ಅಭಿವೃದ್ಧಿ ಹಾಗೂ ಸಿರಿಧಾನ್ಯ ರಫ್ತಿಗೆ ಅನುಕೂಲ ಆಗುವಂತೆ ಸಿರಿಧಾನ್ಯ ಬೆಳೆಗೆ ಪ್ರೋತ್ಸಾಹದಾಯಕವಾಗಿ ಅಗತ್ಯ ಕೇಂದ್ರವನ್ನು ರಾಜ್ಯ ಸರ್ಕಾರ ಸ್ಥಾಪಿಸಲಿದೆ ಎಂದು ಭರವಸೆ ನೀಡಿದರು.

ಎಲ್ಲಿ ಮಳೆ ಕಡಿಮೆ ಬೀಳುತ್ತದೆಯೋ, ಭೂಮಿಯ ಫಲವತ್ತತೆ ಕಡಿಮೆ ಇರುವ ಪ್ರದೇಶಗಳಲ್ಲೂ ಬೆಳೆಯಬಹುದಾದ ಸಿರಿಧಾನ್ಯ ಉತ್ತಮ ಆರೋಗ್ಯಕ್ಕೆ ಬಹಳ ಸಹಕಾರಿ. ಇದಕ್ಕಾಗಿ ರಾಜ್ಯ ಸರ್ಕಾರ ನಿರಂತರವಾಗಿ ಸಿರಿಧಾನ್ಯ ಮೇಳವನ್ನು ನಿರಂತರವಾಗಿ ಆಯೋಜಿಸುತ್ತಿದೆ ಎಂದರು.

ಸಾರಜನಕ, ಲವಣ, ವಿಟಮಿನ್ ಮತ್ತು ನಾರಿನ ಅಂಶಗಳು ಸಿರಿಧಾನ್ಯಗಳಲ್ಲಿ ಹೆಚ್ಚಾಗಿವೆ. ಇವತ್ತಿನ ಹಲವು ಕಾಯಿಲೆಗಳಿಗೆ ರಸಾಯನಿಕ ಮಿಶ್ರಿತ ಆಹಾರ ಪದಾರ್ಥ ಸೇವನೆ ಕೂಡ ಒಂದು ಪ್ರಮುಖ ಕಾರಣವಾಗಿದೆ ಎಂದು ಅಧ್ಯಯನಗಳು ಹೇಳುತ್ತಿವೆ. ಇದಕ್ಕೆ ಸಾವಯವ ಸಿರಿಧಾನ್ಯ ಸೇವನೆ ಉತ್ತಮ ಪರಿಹಾರ ಆಗುತ್ತಿದೆ ಎಂದರು.

2004ರಲ್ಲಿ ಸಾವಯವ ಕೃಷಿ ನೀತಿ, 2014ರಲ್ಲಿ ಪರಿಷ್ಕೃತ ಸಾವಯವ ಕೃಷಿ ನೀತಿಯನ್ನು ರಾಜ್ಯದಲ್ಲಿ ಜಾರಿಗೊಳಿಸಲಾಗಿದೆ. ಆ ಮೂಲಕ ಸಾವಯವ ಮತ್ತು ಸಿರಿಧಾನ್ಯ ಬೆಳೆ ಬೆಳೆಯಲು ನಮ್ಮ ಸರ್ಕಾರ ನಿರಂತರವಾಗಿ ಉತ್ತೇಜನ ನೀಡುತ್ತಿದೆ. ಇದರಿಂದ ಜನರ ಆರೋಗ್ಯಕ್ಕೂ ಬಹಳ ಸಹಕಾರಿಯಾಗುತ್ತಿದೆ ಎಂದರು.

ಇತ್ತೀಚಿನ ವರ್ಷಗಳಲ್ಲಿ ಸಾವಯವ ಮತ್ತು ಸಿರಿಧಾನ್ಯ ಹೆಚ್ಚು ಜನಪ್ರಿಯ ಆಗುತ್ತಿದೆ. ಭಾರತ ಕೃಷಿ ಪ್ರಧಾನ ದೇಶವಾದ್ದರಿಂದ ಆಹಾರ ಸ್ವಾವಲಂಬನೆ ಸಾಧಿಸಲು ಇಂದಿರಾಗಾಂಧಿ ಅವರ ಅವಧಿಯಲ್ಲಿ ಹಸಿರು ಕ್ರಾಂತಿ ನಡೆಸಲಾಯಿತು. ಪ್ರತಿಯೊಬ್ಬರಿಗೂ ಆಹಾರ ಒದಗಿಸಲು ಹಸಿರು ಕ್ರಾಂತಿ ನೆರವಾಯಿತು ಎಂದರು.

Leave a Reply