USIBC ದುಂಡುಮೇಜಿನ ಸಭೆ ನಾವೀನ್ಯತೆ ಮತ್ತು ತಂತ್ರಜ್ಞಾನದ ಬೆಳವಣಿಗೆಗೆ ಪ್ರಮುಖ ರಹದಾರಿ: ಪ್ರಿಯಾಂಕ್ ಖರ್ಗೆ

2 years ago

ಬೆಂಗಳೂರು: ಯು.ಎಸ್.-ಇಂಡಿಯಾ ಬ್ಯುಸಿನೆಸ್ ಕೌನ್ಸಿಲ್ (USIBC) ಜಾಗತಿಕ ನಿರ್ದೇಶಕ ಮಂಡಳಿಯ ಯೋಜನೆಯ ಉನ್ನತ ಮಟ್ಟದ ದುಂಡುಮೇಜಿನ ಸಭೆಯಲ್ಲಿ ಜಾಗತಿಕ ಆರ್ಥಿಕತೆಯಲ್ಲಿ ಕರ್ನಾಟಕದ ನಾಯಕತ್ವವನ್ನು ಮುನ್ನಡೆಸುವ ಕುರಿತು ಫಲಪ್ರದ ಚರ್ಚೆಗಳನ್ನು ನಡೆಸಲಾಯಿತು. ಈ ಮೂಲಕ ಯುಎಸ್ ಮತ್ತು ಭಾರತೀಯ ವ್ಯವಹಾರಗಳ ನಡುವೆ ಬಲವಾದ ಬಾಂಧವ್ಯ ಬೆಳೆಸಲು ಈ ಸಭೆಯು ವೇದಿಕೆಯಾಗಿದ್ದು, ನಾವೀನ್ಯತೆ ಮತ್ತು ತಂತ್ರಜ್ಞಾನದ ಬೆಳವಣಿಗೆಗೆ ಪ್ರಮುಖ ರಹದಾರಿಯಾಗಲಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ Siddaramaiah  ಅವರ ಸಮ್ಮುಖದಲ್ಲಿ ನಡೆದ ಯು.ಎಸ್.-ಇಂಡಿಯಾ ಬ್ಯುಸಿನೆಸ್ ಕೌನ್ಸಿಲ್ (USIBC) ಜಾಗತಿಕ ನಿರ್ದೇಶಕ ಮಂಡಳಿಯ ಯೋಜನೆಯ ಉನ್ನತ ಮಟ್ಟದ ದುಂಡುಮೇಜಿನ ಸಭೆಯಲ್ಲಿ ಭಾಗವಹಿಸಿ ಹಲವು ವಿಷಯಗಳ ಕುರಿತು ಚರ್ಚಿಸಿದರು. 

ಕರ್ನಾಟಕ ವೈವಿಧ್ಯಮಯ ಸಂಪನ್ಮೂಲಗಳ ನಾಡು. ಕೌಶಲ್ಯಭರಿತ ಕಾರ್ಯಪಡೆಯಿಂದ ಹಿಡಿದು ನೈಸರ್ಗಿಕ ಸಂಪತ್ತಿನವರೆಗೆ, ಸ್ಟಾರ್ಟ್ ಅಪ್ ಸಂಸ್ಕೃತಿಯಿಂದ ಹಿಡಿದು ಸದೃಢ ಉತ್ಪಾದನಾ ತಳಪಾಯ ಇಲ್ಲಿದೆ. ರಾಜ್ಯವು ಜಗತ್ತಿನ ಮುಂಚೂಣಿಯಲ್ಲಿರುವ ಐ.ಟಿ ಕಂಪನಿಗಳಿಗೆ, ಬಯೋ ಟೆಕ್ನಾಲಜಿ ಉದ್ಯಮಗಳಿಗೆ ಮತ್ತು ಸ್ಟಾರ್ಟ್ ಅಪ್ ಗಳಿಗೆ  ತವರೂರಾಗಿದೆ. ನಾವೀನ್ಯತೆ, ಈಸ್ ಆಫ್ ಡೂಯಿಂಗ್ ಬ್ಯುಸಿನೆಸ್ ಹಾಗೂ ಸುಸ್ಥಿರ ಅಭಿವೃದ್ಧಿಗೆ ಪೂರಕವಾಗಿ ನಮ್ಮ ನೀತಿಗಳನ್ನು ರೂಪಿಸಲಾಗಿದೆ ಎಂದರು.

ಸಭೆಯಲ್ಲಿ ರಾಜ್ಯದ ವಿವಿಧ  ಇಲಾಖೆಗಳೊಂದಿಗೆ US ಮತ್ತು ಕರ್ನಾಟಕದ ನಡುವಿನ ಸಹಯೋಗದ ಪ್ರಮುಖ ಕ್ಷೇತ್ರಗಳ ಕುರಿತು ಸಮಗ್ರ ಸಂವಾದವನ್ನು ನಡೆಸಲಾಯಿತು. ನಮ್ಮ ಸರ್ಕಾರ, ಉದ್ಯಮಶೀಲತೆ ಹಾಗೂ ಸುಸ್ಥಿರ ಅಭಿವೃದ್ಧಿಯನ್ನು ಪೋಷಿಸುವ ವಾತಾವರಣವನ್ನು ಕಲ್ಪಿಸಲು ಬದ್ಧವಾಗಿದ್ದು, ಕರ್ನಾಟಕ ಅಪಾರ ಅವಕಾಶಗಳನ್ನು ಒದಗಿಸುವ  ರಾಜ್ಯವಾಗಿದೆ. ನಮ್ಮ ಜನ ಹಾಗೂ ಜಾಗತಿಕ ಸಮುದಾಯದ ಭವಿಷ್ಯಕ್ಕಾಗಿ ಇವುಗಳನ್ನು  ಬಳಸಿಕೊಳ್ಳಲು ನಮ್ಮ ಸರ್ಕಾರ ಕಾರ್ಯೋನ್ಮುಖವಾಗಿರಲಿದೆ ಎಂದರು.

ಇಲ್ಲಿ ಕೈಗೊಂಡ ಸಹಯೋಗ ಹಾಗೂ ಸಂಪರ್ಕಗಳು ಕರ್ನಾಟಕ ಮತ್ತು ಯುನೈಟೆಡ್ ಸ್ಟೇಟ್ಸ್ ನಡುವೆ ಪರಸ್ಪರ ಲಾಭದಾಯಕ ಫಲಿತಾಂಶಗಳಿಗೆ ಎಡೆಮಾಡಿಕೊಡಲಿವೆ. ಸಮೃದ್ಧಿ, ಪಾಲುದಾರಿಕೆ ಮತ್ತು ಪ್ರಗತಿಯ ಭವಿಷ್ಯದತ್ತ ಒಟ್ಟಾಗಿ ಹೆಜ್ಜೆ ಇಡುವುದಕ್ಕೆ ಈ ದುಂಡುಮೇಜಿನ ಸಭೆಯು ಇನ್ನಷ್ಟು ಸಹಕಾರಿಯಾಗಲಿದೆ ಎಂದರು.

Leave a Reply