ವಂದೇ ಭಾರತ್ ಎಕ್ಸ್‍ಪ್ರೆಸ್ ಶಿಕ್ಷಣ, ಅರೋಗ್ಯ, ವ್ಯಾಪಾರ ವಹಿವಾಟಿಗೆ ಅನುಕೂಲ: ಪ್ರಭಾ ಮಲ್ಲಿಕಾರ್ಜುನ್

8 months ago

ದಾವಣಗೆರೆ ಎರಡನೇ ವಂದೇ ಭಾರತ್ ಎಕ್ಸ್‍ಪ್ರೆಸ್‍ಗೆ ಹಸಿರು ನಿಶಾನೆ

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.

ಬೆಂಗಳೂರು ನಿಲ್ದಾಣದಿಂದ ಹೊರಟ ಸ್ವದೇಶಿ ನಿರ್ಮಿತ, ಸೆಮಿ, ಹೈಸ್ಪೀಡ್, ಸ್ವಯಂ ಚಾಲಿತ ರೈಲು ಬೆಂಗಳೂರು-ಬೆಳಗಾವಿ ವಂದೇ ಭಾರತ್ ರೈಲನ್ನು ದಾವಣಗೆರೆ ರೈಲ್ವೆ ನಿಲ್ದಾಣದಲ್ಲಿ ಸ್ವಾಗತಿಸಿ ಬೆಳಗಾವಿಗೆ ಹೊರಟ ರೈಲಿಗೆ ಹಸಿರು ನಿಶಾನೆ ತೋರಿಸಿದರು.

ಹೆಚ್ಚಿನ ವೇಗದ ರೈಲು ಸೇವೆಯಿಂದ ಶಿಕ್ಷಣಕ್ಕಾಗಿ ಇಲ್ಲಿಗೆ ಮತ್ತು ಇಲ್ಲಿಂದ ಬೇರೆ ಕಡೆ ಹೋಗಲು ಮತ್ತು ಆರೋಗ್ಯಕ್ಕೆ ಸಂಬಂಧಿಸಿದಂತೆ ಚಿಕಿತ್ಸೆಗೆ ಬೇರೆ ಕಡೆ ಹೋಗಲು ಮತ್ತು ಆಗಮಿಸಲು ವೇಗದ ಪ್ರಯಾಣ ಸೌಲಭ್ಯದಿಂದ ಜನರಿಗೆ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟಿ ಗರಿಗೆದರಲಿದೆ. ಸಾರ್ವಜನಿಕರು ಸಹ ರೈಲು ಸೇವೆ ಪಡೆದುಕೊಳ್ಳಬಹುದಾಗಿದೆ ಎಂದರು.

ತುಮಕೂರು-ದಾವಣಗೆರೆ ನೇರ ರೈಲು ಆದಷ್ಟು ಬೇಗ ನಿರ್ಮಾಣವಾದಲ್ಲಿ ಇನ್ನೂ ಹೆಚ್ಚು ಅನುಕೂಲವಾಗಲಿದೆ. ರೈಲ್ವೆ ನಿಲ್ದಾಣದಲ್ಲಿ ಗುಣಮಟ್ಟದ ಆಹಾರ ಪ್ರಯಾಣಿಕರಿಗೆ ಸಿಗಬೇಕೆಂದು ಮತ್ತು ಸ್ವಚ್ಚತೆಯನ್ನು ಕಾಪಾಡಿಕೊಳ್ಳಲು ಸಚಿವರೊಂದಿಗೆ ಚರ್ಚಿಸಲಾಗಿದ್ದು ಅಗತ್ಯವಿರುವ ಕಡೆ ರೈಲು ಸೇವೆಯನ್ನು ವಿಸ್ತರಿಸಲೂ ಸಹ ಮನವಿ ಮಾಡಲಾಗಿದೆ ಎಂದರು. 

ಬೆಂಗಳೂರು-ಬೆಳಗಾವಿ ವಂದೇ ಭಾರತ್ ರೈಲು ಪ್ರತಿದಿನ ಬೆಂಗಳೂರಿನಿಂದ ಮಧ್ಯಾಹ್ನ 2.20 ಕ್ಕೆ ಹೊರಟು ಸಂಜೆ 5.48 ಕ್ಕೆ ದಾವಣಗೆರೆಗೆ ಆಗಮಿಸಿ ರಾತ್ರಿ 10.40ಕ್ಕೆ ಬೆಳಗಾವಿ ತಲುಪಲಿದೆ. ಬೆಳಗಾವಿಯಿಂದ ಪ್ರತಿದಿನ ಬೆಳಗ್ಗೆ 5.20ಕ್ಕೆ ಹೊರಟು ದಾವಣಗೆರೆಗೆ ಬೆಳಗ್ಗೆ 9.25ಕ್ಕೆ ತಲುಪಿ ಮಧ್ಯಾಹ್ನ 1.50ಕ್ಕೆ ಬೆಂಗಳೂರಿಗೆ ಈ ವಂದೇ ಭಾರತ್ ಎಕ್ಸ್‍ಪ್ರೆಸ್ ರೈಲು ತಲುಪಲಿದೆ.

ಕಾರ್ಯಕ್ರಮದಲ್ಲಿ ಮಾಜಿ ಸಂಸದ ಜಿ.ಎಂ.ಸಿದ್ದೇಶ್ವರ, ಹರಿಹರ ಶಾಸಕ ಬಿ.ಪಿ.ಹರೀಶ್, ದೂಡಾ ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ, ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ, ಚೇಂಬರ್ಸ್ ಆಫ್ ಕಾಮರ್ಸ್ ಅಧ್ಯಕ್ಷ ಶಂಬಣ್ಣ, ಮೈಸೂರು ರೈಲ್ವೆ ವಿಭಾಗದ ಹೆಚ್ಚುವರಿ ವಿಭಾಗೀಯ ವ್ಯವಸ್ಥಾಪಕ ಶಾಮಿದ್ ಹಮೀದ್ ಹಾಗೂ ಇನ್ನಿತರ ಗಣ್ಯರು ವೇದಿಕೆಯಲ್ಲಿ ಹಾಜರಿದ್ದರು.

Leave a Reply