ವಂಟಮೂರಿ ಮಹಿಳೆ ವಿವಸ್ತ್ರ ಪ್ರಕರಣ: ಪ್ರಕರಣ ಇತ್ಯರ್ಥಗೊಳಿಸಿದ ಹೈಕೋರ್ಟ್

2 years ago

ಬೆಂಗಳೂರು: ಬೆಳಗಾವಿ ಜಿಲ್ಲೆಯ ಹೊಸ ವಂಟಮುರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಥಳಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಕೈಗೊಂಡ ಕ್ರಮಕ್ಕೆ ತೃಪ್ತಿ ವ್ಯಕ್ತಪಡಿಸಿರುವ ಹೈಕೋರ್ಟ್ ಈ ಕುರಿತು ದಾಖಲು ಮಾಡಿಕೊಂಡಿದ್ದ ಪ್ರಕರಣವನ್ನು ಇತ್ಯರ್ಥಗೊಳಿಸಿದೆ.

ಪ್ರಕರಣದ ಬಗ್ಗೆ ಸುದ್ದಿ ಮಾಧ್ಯಮಗಳಲ್ಲಿ ಬಂದ ವರದಿಯನ್ನು ಆಧರಿಸಿ ಹೈಕೋರ್ಟ್ ಸ್ವಯಂ ಪ್ರೇರಿತವಾಗಿ ಸಾರ್ವಜನಿಕ ಹಿತಾಸಕ್ತಿಯ ಪ್ರಕರಣವನ್ನು ದಾಖಲಿಸಿಕೊಂಡಿತ್ತು. ಸದರಿ ಅರ್ಜಿಯ ವಿಚಾರಣೆ ನಡೆಯುವ ವೇಳೆ ಸರ್ಕಾರದ ಪರ ಹಾಜರಾದ ಅಡ್ವೊಕೇಟ್ ಜನರಲ್ ಹೈಕೋರ್ಟ್ ಮುಂದೆ ಹೇಳಿಕೆ ಸಲ್ಲಿಸಿ, ಘಟನೆಗೆ ಸಂಬಂಧಿಸಿದ ಎಲ್ಲ 12 ಆರೋಪಿಗಳನ್ನು ಬಂಧಿಸಲಾಗಿದೆ. ಅಲ್ಲದೆ ವಿಚಾರಣಾ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ ಎಂದು ಮಾಹಿತಿ ನೀಡಿದರು.

ಪ್ರಕರಣದ ವಿಚಾರಣೆ ಪೂರ್ಣಗೊಳಿಸಲು ವಿಚಾರಣಾ ನ್ಯಾಯಲಯಕ್ಕೆ ಕಾಲಮಿತಿ ನಿಗದಿಪಡಿಸಬೇಕು. ಇದು ಅತಿ ಅಪರೂಪದ ಪ್ರಕರಣವಾಗಿದ್ದು, ಈ ಇಂತಹ ಘಟನೆ ಮರುಕಳಿಸದಂತೆ ಎಚ್ಚರಿಕೆ ಸಂದೇಶ ರವಾನಿಸಬೇಕಿದೆ. ಸಂತ್ರಸ್ತೆ ಆರೋಗ್ಯ ಸ್ಥಿತಿಗತಿ ಮೇಲೆ ನಿಗಾ ಇಡಲಾಗುವುದು. ಅವರ ಮಾನಸಿಕ ಆರೋಗ್ಯ ಪರಿಗಣಿಸಿ ಒಂದು ವರ್ಷದ ಅವಧಿಯವರೆಗೆ ಎರಡು ತಿಂಗಳಿಗೆ ಒಮ್ಮೆಯಂತೆ ತಜ್ಞರ ಜೊತೆಗೆ ಸಮಾಲೋಚನೆಗೆ ಒಳಪಡಿಸಲು ಅವಕಾಶ ನೀಡಬೇಕು ಎಂದು ಮನವಿ ಮಾಡಿದರು.

ಮನವಿ ಕುರಿತು ಪ್ರತಿಕ್ರಿಯಿಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ವಿಭಾಗೀಯ ನ್ಯಾಯಪೀಠ, ಪ್ರಕರಣದ ವರದಿಯನ್ನು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗೆ ಸಲ್ಲಿಸುವಂತೆ ಸೂಚನೆ ನೀಡಿತು. ಅರ್ಜಿಗೆ ಸಂಬಂಧಿಸಿದಂತೆ ಆದೇಶ ಪ್ರಕಟಿಸಲಾಗುವುದು ಎಂದು ಹೇಳಿ ವಿಲೇವಾರಿಗೊಳಿಸಿತು.

Leave a Reply