ಬಿಜೆಪಿ, ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಲಿದ್ದಾರೆ ವಿವಿಧ ನಾಯಕರು

2 years ago

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಕನಿಷ್ಠ 20 ಸ್ಥಾನ ಗಳಿಸಲು ರಣತಂತ್ರ ರೂಪಿಸುತ್ತಿರುವ ಕಾಂಗ್ರೆಸ್ ಇದೀಗ ಬಿಜೆಪಿ ಮತ್ತು ಜೆಡಿಎಸ್ ನ ಪ್ರಭಾವಿ ನಾಯಕರಿಗೆ ಗಾಳ ಹಾಕಿದ್ದು ಹಲವು ಮಾಜಿ ಸಚಿವರು ಮತ್ತು ಶಾಸಕರು ಕಾಂಗ್ರೆಸ್ ಪಕ್ಷ ಸೇರುವ ಸಾಧ್ಯತೆ ಇದೆ.

ಜೂನ್ ನಲ್ಲಿ ವಿಧಾನ ಪರಿಷತ್ ಸದಸ್ಯತ್ವ  ಅಂತ್ಯವಾಗುತ್ತಿರುವ ತೇಜಸ್ವಿನಿ ಗೌಡ ಅವರು ಸದ್ಯದಲ್ಲೇ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುತ್ತಿದ್ದು, ಬೆಂಗಳೂರಿನ ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆ ಇದೆ.

ಬಿಜೆಪಿಯಿಂದ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಟಿಕೆಟ್ ಬಯಸಿದ್ದ ಮಾಜಿ ಸಚಿವ ಡಿ. ಸುಧಾಕರ್ ಅವರು ಅಲ್ಲಿ ಟಿಕೆಟ್ ಸಿಗುವ ಸಾಧ್ಯತೆ ಕಡಿಮೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕದ ತಟ್ಟಿದ್ದಾರೆ ಎಂದು ಗೊತ್ತಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಉತ್ತಮ ಒಡನಾಟ ಹೊಂದಿರುವ ಡಿ ಸುಧಾಕರ್ ಅವರು ಕಾಂಗ್ರೆಸ್ ಗೆ ಮರಳುವ ಕುರಿತಂತೆ ಪಕ್ಷದ ಹಿರಿಯ ನಾಯಕರೊಂದಿಗೆ ಸಮಾಲೋಚನೆ ನಡೆಸಿದ್ದು, ಒಂದೆರಡು ದಿನಗಳಲ್ಲಿ ವಿದ್ಯುಕ್ತವಾಗಿ ಪಕ್ಷ ಸೇರಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ

ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಿರುವ ಸುಧಾಕರ್ ಅವರು ಬೆಂಗಳೂರಿನ ಉತ್ತರ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎಂದು ಗೊತ್ತಾಗಿದೆ.

ಇವರೊಂದಿಗೆ ಜೆಡಿಎಸ್ ಮುಖಂಡರಾದ ವಿಧಾನ ಪರಿಷತ್ತಿನ ಮಾಜಿ ಸದಸ್ಯ ಅಪ್ಪಾಜಿ ಗೌಡ ಮತ್ತು ಮಾಜಿ ಶಾಸಕ ಹಾಗೂ ಮಂಡ್ಯ ಜಿಲ್ಲೆಯ ಪ್ರಭಾವಿ ಮುಖಂಡ ಎಂ ಶ್ರೀನಿವಾಸ್ ಅವರು ಜೆಡಿಎಸ್ ಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದು ಗೊತ್ತಾಗಿದೆ.

ಹಾಲಿ ಶಾಸಕರಾದ ಎಸ್ ಟಿ ಸೋಮಶೇಖರ್ ಮತ್ತು ಶಿವರಾಮ್ ಹೆಬ್ಬಾರ್ ಈಗಾಗಲೇ ಬಿಜೆಪಿಯಿಂದ ಒಂದು ಹೆಜ್ಜೆ ಹೊರಗಿಟ್ಟಿದ್ದು, ಲೋಕಸಭೆ ಚುನಾವಣೆ ಘೋಷಣೆಯಾದ ನಂತರ ತಮ್ಮ ನಿರ್ಧಾರ ಪ್ರಕಟಿಸಲಿದ್ದಾರೆ ಎಂದು ತಿಳಿದುಬಂದಿದೆ.

Leave a Reply