ನೀರಿದ್ದರೆ ನಾಳೆ ಯೋಜನೆಗೆ ವಸಿಷ್ಟ ಸಿಂಹ ರಾಯಭಾರಿ

6 months ago

ನೀರಿದ್ದರೆ ನಾಳೆ ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು: ಎನ್‌ ಎಸ್‌ ಭೋಸರಾಜು

ಬೆಂಗಳೂರು: ರಾಜ್ಯದ 15 ಜಿಲ್ಲೆಗಳ, 27 ತಾಲ್ಲೂಕಗಳಲ್ಲಿನ ಅಂತರ್ಜಲ ಅತಿಬಳಕೆಯ ಪಟ್ಟಿಯಲ್ಲಿರುವ 252 ಗ್ರಾಮ ಪಂಚಾಯ್ತಿಗಳಲ್ಲಿ “ನೀರಿದ್ದರೆ ನಾಳೆ” ಯೋಜನೆಯನ್ನು ಮೊದಲ ಹಂತದಲ್ಲಿ ಅನುಷ್ಠಾನಗೊಳಿಸಲಾಗುವುದು ಎಂದು ಸಣ್ಣ ನೀರಾವರಿ ಸಚಿವ ಎನ್‌ ಎಸ್‌ ಭೋಸರಾಜು ತಿಳಿಸಿದ್ದಾರೆ.

ಯೋಜನೆ ಕುರಿತು ಪತ್ರಿಕಾಗೋಷ್ಠಿಯಲ್ಲಿ ಈ ಮಾಹಿತಿಗಳನ್ನು ಹಂಚಿಕೊಂಡ ಅವರು,ಪ್ರಕೃತಿಯಿಂದ ವರದಾನವಾಗಿ ಬಂದಿರುವ ನೈಸರ್ಗಿಕ ಹಾಗೂ ನಮ್ಮ ಪೂರ್ವಜರು ನಿರ್ಮಿಸಿದ ಜಲಮೂಲಗಳನ್ನು ಸಂರಕ್ಷಿಸುವ ಮೂಲಕ ಅಂತರ್ಜಲ ಮಟ್ಟ ವೃದ್ಧಿಸಿ ಸಮೃದ್ಧ ಕರ್ನಾಟಕ ನಿರ್ಮಾಣಕ್ಕೆ ಭದ್ರ ಅಡಿಪಾಯ ಹಾಕುವ ಉದ್ದೇಶದಿಂದ ನೀರಿದ್ದರೆ ನಾಳೆ ಎನ್ನುವ ವಿನೂತನ ಕಾರ್ಯಕ್ರಮವನ್ನು ರೂಪಿಸಲಾಗಿದೆ ಎಂದರು.

“ನೀರಿದ್ದರೆ ನಾಳೆ” ಎನ್ನುವ ವಿಶೇಷ ಪರಿಕಲ್ಪನೆಯ ಕಾರ್ಯಕ್ರಮದ ಮೂಲಕ ನೀರಿನ ಮಹತ್ವವನ್ನು ತಿಳಿಸುವುದು, ರಾಜ್ಯದ ಜಲ ಮೂಲಗಳ ಸಂರಕ್ಷಣೆಗೆ ಯೋಜನೆ ರೂಪಿಸುವುದು, ನಾಗರಿಕರನ್ನು ನೀರಿನ ಸಂರಕ್ಷಣೆಯ ಅಭಿಯಾನದಲ್ಲಿ ಪಾಲುದಾರರನ್ನಾಗಿ ಮಾಡುವುದು ಮುಖ್ಯ ಉದ್ದೇಶವಾಗಿದೆ ಎಂದರು.

ಮೊದಲ ಹಂತದಲ್ಲಿ ರಾಜ್ಯದ 16 ಜಿಲ್ಲೆಗಳ 27 ತಾಲ್ಲೂಕುಗಳ 525 ಅಂತರ್ಜಲ ಅತಿಬಳಕೆ ಗ್ರಾಮ ಪಂಚಾಯತಿಗಳಲ್ಲಿ ಈ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ಈ ಪೈಕಿ ಕಲ್ಯಾಣ ಕರ್ನಾಟಕ ಭಾಗದ 100ಕ್ಕೂ ಹೆಚ್ಚು ಅಂತರ್ಜಲ ಅತಿಬಳಕೆ ಗ್ರಾಮ ಪಂಚಾಯತಿಗಳಿವೆ ಎಂದರು.

ಕನ್ನಡ ಚಿತ್ರರಂಗದ ಖ್ಯಾತ ನಟರಾದ ವಸಿಷ್ಟ ಸಿಂಹ ಅವರನ್ನು ಯೋಜನೆಯ ರಾಯಭಾರಿಯನ್ನಾಗಿ ನೇಮಿಸಲಾಗಿದೆ. ನಾಳೆ ವಿಧಾನಸೌಧದ ಬ್ವಾಂಕ್ವೆಟ್‌ ಹಾಲ್‌ ನಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ರಾಜ್ಯದಲ್ಲಿ ಅಂತರ್ಜಲ ಸಾಕ್ಷರತೆಗೆ ಒತ್ತು ನೀಡುವ ಗುರಿಯನ್ನು ಹೊಂದಲಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಸಣ್ಣ ನೀರಾವರಿ, ಅಂತರ್ಜಲ ಅಭಿವೃದ್ದಿ ಇಲಾಖೆ ಕಾರ್ಯದರ್ಶಿಗಳಾದ ಬಿ.ಕೆ ಪವಿತ್ರ ಹಾಜರಿದ್ದರು.

Leave a Reply