ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರ ನೇಮಕ ಹಾಗೂ ವಿಪಕ್ಷ ನಾಯಕನ ಆಯ್ಕೆ ನಂತರ ಪಕ್ಷದೊಳಗೆ ಉಂಟಾಗಿರುವ ಅಸಮಾಧಾನ ಹೋಗಲಾಡಿಸಲು ಮುಂದಾಗಿರುವ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಮತ್ತು ಪ್ರತಿಪಕ್ಷ ನಾಯಕ ಆರ್.ಅಶೋಕ್ ಇದಕ್ಕಾಗಿ ವರಿಷ್ಠರ ಮಾರ್ಗದರ್ಶನ ಪಡೆಯಲು ಮುಂದಾಗಿದ್ದಾರೆ.
ಇಬ್ಬರೂ ಒಟ್ಟಾಗಿ, ಡಿಸೆಂಬರ್ 1ರಂದು ದೆಹಲಿಗೆ ತೆರಳಲಿದ್ದಾರೆ. ಪಂಚರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ತೊಡಗಿದ್ದ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಮತ್ತಿತರರು ದೆಹಲಿಗೆ ವಾಪಸ್ಸಾಗುತ್ತಿದ್ದು, ಅವರನ್ನು ಭೇಟಿಯಾಗಲಿದ್ದಾರೆ.
ಇಬ್ಬರ ಆಯ್ಕೆ ಬಗ್ಗೆ ವ್ಯಕ್ತವಾಗುತ್ತಿರುವ ಅಸಮಾಧಾನ ಹಾಗೂ ಬೆಳಗಾವಿ ವಿಧಾನ ಮಂಡಲದ ಅಧಿವೇಶನದಲ್ಲಿ ಪ್ರಮುಖವಾಗಿ ಪ್ರಸ್ತಾಪಿಸಬೇಕಿರುವ ವಿಷಯಗಳು ಮಿತ್ರ ಪಕ್ಷ ಜೆಡಿಎಸ್ ಜೊತೆಗೆ ಸದನದಲ್ಲಿ ಹೊಂದಾಣಿಕೆ ಕುರಿತಂತೆ ಚರ್ಚೆ ನಡೆಯಲಿದೆ. ಇದನ್ನು ಹೊರತುಪಡಿಸಿ ಪಕ್ಷದ ಅಸಮಾಧಾನ ಶಮನ ಮಾಡುವ ದೃಷ್ಟಿಯಿಂದ ಕೈಗೊಳ್ಳಬೇಕಾದ ನಿರ್ಧಾರಗಳ ಬಗ್ಗೆ ವರಿಷ್ಠರಿಂದ ಸಲಹೆ ಪಡೆಯಲಿದ್ದಾರೆ.
ಜೊತೆಗೆ ಬಿಜೆಪಿಯ ಅಸಮಾಧಾನಗೊಂಡ ನಾಯಕರಾದ ಸೋಮಣ್ಣ ಮತ್ತು ಯತ್ನಾಳ್ ನೇತೃತ್ವದ ಬಣ ದೆಹಲಿಗೆ ತೆರಳಿ ಕೆಲವು ಬಿಜೆಪಿ ನಾಯಕರ ವಿರುದ್ಧ ದೂರು ನೀಡಲು ಮುಂದಾಗಿರುವ ಬೆನ್ನಲ್ಲೇ ಅದಕ್ಕೂ ಮುನ್ನವೇ ವಿಜಯೇಂದ್ರ ಮತ್ತು ಅಶೋಕ್ ವರಿಷ್ಠರನ್ನು ಭೇಟಿ ಮಾಡುತ್ತಿರುವುದು ಕುತೂಹಲ ಮೂಡಿಸಿದೆ.




