ಹೊರ ರಾಜ್ಯದವರ ಅಪರಾಧ ಚಟುವಟಿಕೆ ಕಡಿವಾಣಕ್ಕೆ ಮಾರ್ಗ ಹುಡುಕಲಾಗುತ್ತಿದೆ: ಪರಮೇಶ್ವರ್

1 year ago

ಬೆಂಗಳೂರು: ಉದ್ಯೋಗ ಸೇರಿದಂತೆ ಹಲವು ಕಾರಣಗಳಿಂದ ರಾಜ್ಯಕ್ಕೆ ಬರುತ್ತಿರುವ ಹೊರ ರಾಜ್ಯದ ಪ್ರಜೆಗಳು ಬೆಂಗಳೂರು ಸೇರಿದಂತೆ ಇತರೆ ಪ್ರಮುಖ ನಗರಗಳಲ್ಲಿ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕಲು ಪ್ರತ್ಯೇಕ ಮಾರ್ಗಗಳನ್ನು ಹುಡುಕಲಾಗುತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊರರಾಜ್ಯದ ಜನರಿಂದ ಆಗುತ್ತಿರುವ ಇಂತಹ ಚಟುವಟಿಕೆಗಳನ್ನು ತಡೆಯುವ ನಿಟ್ಟಿನಲ್ಲಿ ಹಿರಿಯ ಅಧಿಕಾರಿಗಳ ಪ್ರತ್ಯೇಕ ಸಭೆ ನಡೆಸಲಾಗುವುದು ಎಂದರು.

ಕರ್ನಾಟಕದಲ್ಲಿ ವಲಸೆ ಕಾರ್ಮಿಕರಿಂದ ಅಪರಾಧಗಳು ಹೆಚ್ಚಾಗುತ್ತಿರುವುದು ಸರ್ಕಾರದ ಗಮನದಲ್ಲಿದೆ. ವಲಸಿಗರಿಗೆ ಇಲ್ಲಿನ ಸಂಸ್ಕೃತಿ ಹಾಗೂ ಇಲ್ಲಿನ ಭಾವನೆಗಳು ಅರ್ಥವಾಗುವುದಿಲ್ಲವೇನೋ ಎನ್ನಿಸುತ್ತದೆ ಎಂದರು.

ಕಟ್ಟಡ ನಿರ್ಮಾಣ ಕಾರ್ಮಿಕರು ಹಾಗೂ ಇತರರು ಇಂತಹ ಕೃತ್ಯಗಳಲ್ಲಿ ಭಾಗಿಯಾಗುತ್ತಿರುವುದನ್ನು ತಡೆಯಲು ಕಾರ್ಮಿಕ ಇಲಾಖೆಯೊಂದಿಗೆ ಪ್ರತ್ಯೇಕ ಸಭೆ ನಡೆಸಿ ಯಾವ ರೀತಿಯ ಕ್ರಮ ಕೈಗೊಳ್ಳಲು ಸಾಧ್ಯ ಎಂಬುದನ್ನು ಪರಿಶೀಲಿಸುತ್ತೇವೆ ಎಂದರು.

ಹುಬ್ಬಳ್ಳಿಯಲ್ಲಿ ಬಿಹಾರ ಮೂಲದ ವ್ಯಕ್ತಿ 5 ವರ್ಷದ ಬಾಲಕಿಯನ್ನು ಕರೆದುಕೊಂಡು ಹೋಗಿ ಕೊಲೆ ಮಾಡಿದ್ದಾನೆ. ಕೆಲವೇ ಸಮಯದಲ್ಲಿ ಆತನನ್ನು ಬಂಧಿಸಲಾಗಿದೆ. ಸ್ಥಳ ಮಹಜರಿಗೆ ಆರೋಪಿಯನ್ನು ಕರೆದುಕೊಂಡು ಹೋಗುವಾಗ ಆತ ಪೊಲೀಸರ ಮೇಲೆ ದಾಳಿ ನಡೆಸಿದ್ದಾನೆ. ಆಗ ಪೊಲೀಸರು ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದ್ದಾರೆ. ಆರಂಭದಲ್ಲಿ ಕಾಲಿಗೆ ಗುಂಡು ಹಾರಿಸಲು ಯತ್ನಿಸಿದ್ದಾರೆ. ಅದು ಬೆನ್ನಿಗೆ ಬಿದ್ದಿದೆ. ತಕ್ಷಣವೇ ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿಗೆ ಹೋಗುವ ವೇಳೆಗೆ ಆತ ಸಾವನ್ನಪ್ಪಿದ್ದಾನೆ ಎಂದರು.

ಈ ಘಟನೆ ಬಗ್ಗೆ ತಕ್ಷಣವೇ ತನಿಖೆಗೆ ಆದೇಶಿಸಲಾಗಿದ್ದು, ಹಿರಿಯ ಅಧಿಕಾರಿಯೊಬ್ಬರನ್ನು ನಿಯೋಜಿಸಲಾಗಿದೆ. ತನಿಖೆಯ ಬಳಿಕ ವಾಸ್ತವ ಮಾಹಿತಿ ತಿಳಿದು ಬರಲಿದೆ ಎಂದರು.

Leave a Reply