ನಾವು ದೇಶದ ಇತರೆ ರಾಜ್ಯಗಳ ಜೊತೆಗಲ್ಲ ಜಾಗತಿಕ ಮಟ್ಟದಲ್ಲಿ ಸ್ಪರ್ಧಿಸುತ್ತಿದ್ದೇವೆ: ಡಿ.ಕೆ.ಶಿವಕುಮಾರ್

9 months ago

ಬೆಂಗಳೂರು: ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ವಲಸೆ ಬರುವ ಐಟಿ ಕಂಪನಿಗಳನ್ನು ನಾವು ಅತ್ಯಂತ ಮುಕ್ತವಾಗಿ ಸ್ವಾಗತಿಸುತ್ತೇವೆ. ಅಲ್ಲದೆ ಈ ಕಂಪನಿಗಳಿಗೆ ಅಗತ್ಯವಿರುವ ತಂತ್ರಜ್ಞಾನ, ವಿದ್ಯುತ್ ಸೇರಿದಂತೆ ಎಲ್ಲಾ ಮೂಲ ಸೌಲಭ್ಯಗಳನ್ನು ಒದಗಿಸಲು ತಯಾರಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಲ್ಕು ದಿನಗಳ ಹಿಂದೆ ಮಹಾರಾಷ್ಟ್ರದ ಡಿಸಿಎಂ ಪುಣೆಯಿಂದ ಬೆಂಗಳೂರಿಗೆ ಐಟಿ ಕಂಪೆನಿಗಳು ಹೋಗುತ್ತಿವೆ ಎಂದು ಹೇಳಿಕೆ ನೀಡಿದ್ದರು. ಅವರಿಗೆ ನಾನು ಧನ್ಯವಾದಗಳನ್ನು ತಿಳಿಸುತ್ತಿದ್ದೇನೆ ಎಂದರು.

ಮಹಾರಾಷ್ಟ್ರದ ಯಾವುದೇ ಐಟಿ ಕಂಪನಿಗಳಿಗೆ ಕರ್ನಾಟಕಕ್ಕೆ ಬನ್ನಿ ಎಂದು ನಾವು ಆಹ್ವಾನ ನೀಡುತ್ತಿಲ್ಲ. ಅವರಾಗಿಯೇ ಬರುತ್ತಿರುವವರಿಗೆ ತುಂಬು ಹೃದಯದ ಸ್ವಾಗತ ಕೋರುತ್ತಿದ್ದೇವೆ. ನಾವು ದೇಶದ ಇತರೆ ರಾಜ್ಯಗಳ ಜೊತೆ ಸ್ಪರ್ಧಿಸುತ್ತಿಲ್ಲ. ಬದಲಾಗಿ ಜಾಗತಿಕ ಮಟ್ಟದಲ್ಲಿ ಸ್ಪರ್ಧಿಸುತ್ತಿದ್ದೇವೆ ಎಂದರು.

ಮಹಾರಾಷ್ಟ್ರವೂ ಸಹ ಐಟಿ ಕ್ಷೇತ್ರದಲ್ಲಿ ಸಾಕಷ್ಟು ಮುಂದುವರೆದಿರುವ ರಾಜ್ಯ. ಅಲ್ಲಿನ ಐಟಿ ಹಬ್ ಪುಣೆಯ ಹಿಂಜವಾಡಿಯು ಅತ್ಯಂತ ಪ್ರಮುಖ ಐಟಿ ಪ್ರದೇಶ. ಆದರೆ ನಮ್ಮ ರಾಜ್ಯಕ್ಕೆ ಬರುವ ಕಂಪನಿಗಳನ್ನು ನಾವು ಮುಕ್ತವಾಗಿ ಸ್ವಾಗತಿಸಿ ಬೆಂಬಲಿಸುತ್ತೇವೆ ಎಂದರು.

Leave a Reply