ಆರ್ ಎಸ್ ಎಸ್ ಚಟುವಟಿಕೆ ನಿಷೇಧ ವಿಚಾರದಲ್ಲಿ ಸಿದ್ದರಾಮಯ್ಯ ಹೇಳಿದ್ದೇನು?

8 months ago

ಬೆಂಗಳೂರು: ನೆರೆಯ ತಮಿಳುನಾಡು ಮಾದರಿಯಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲೆಗಳು ಹಾಗೂ ಸರ್ಕಾರಿ ಸ್ಥಳಗಳಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಚಟುವಟಿಕೆಗಳನ್ನು ನಿಷೇಧಿಸಲು ರಾಜ್ಯ ಸರ್ಕಾರ ಮುಂದಾಗಿದೆ. 

ಈ ಬಗ್ಗೆ ತಮಿಳುನಾಡಿನಲ್ಲಿ ಅನುಸರಿಸಿರುವ ಕ್ರಮಗಳ ಬಗ್ಗೆ ಅಧ್ಯಯನ ನಡೆಸಿ ವರದಿ ನೀಡುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಸೂಚಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸರ್ಕಾರಿ ಸ್ಥಳಗಳಲ್ಲಿ ಆರ್ ಎಸ್ ಎಸ್ ಚಟುವಟಿಕೆ ನಿಷೇಧಿಸುವಂತೆ ಕೋರಿ ಗ್ರಾಮೀಣ ಅಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದಿದ್ದಾರೆ. ಇದನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸಿಎಸ್ ಗೆ ಸೂಚಿಸಿದ್ದೇನೆ. ತಮಿಳುನಾಡಿನಲ್ಲಿ ಯಾವ ರೀತಿ ಕ್ರಮ ಕೈಗೊಂಡಿದ್ದಾರೋ ಅದೇ ರೀತಿ ಕ್ರಮ ಕೈಗೊಳ್ಳಿ ಎಂದು ಸೂಚಿಸಿದ್ದೇನೆ ಎಂದರು.

ಈ ನಡುವೆ ತಮ್ಮ ಮನವಿಯ ಬಗ್ಗೆ ಸಮರ್ಥನೆ ನೀಡಿರುವ ಗ್ರಾಮೀಣ ಅಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ತಾವು ಕೂಡ ಹಿಂದು ಹಾಗೂ ದೇಶಭಕ್ತ. ಆದರೆ ಆರ್ ಎಸ್ ಎಸ್ ಬೆಂಬಲಿಗ ಅಲ್ಲ ಎಂದರು. 

ರಾಜ್ಯದಲ್ಲಿ ತಾವು ಆರ್ ಎಸ್ ಎಸ್ ಅನ್ನು ನಿಷೇಧಿಸಬೇಕು ಎಂದು ಹೇಳಿಲ್ಲ. ಬದಲಾಗಿ ಸರ್ಕಾರಿ ಶಾಲೆಗಳು ಸೇರಿದಂತೆ ಸರ್ಕಾರಿ ಸ್ಥಳಗಳಲ್ಲಿ ಆರ್ ಎಸ್ ಎಸ್ ಚಟುವಟಿಕೆಗಳನ್ನು  ನಿಷೇಧಿಸಬೇಕು ಎಂದು ಮನವಿ ಮಾಡಿರುವುದಾಗಿ ಹೇಳಿದರು.

ಆರ್‌ಎಸ್‌ಎಸ್ ಪ್ರೇರಿತ ಘರ್ಷಣೆಗಳ ಬಲಿಪಶುಗಳು ಹೆಚ್ಚಾಗಿ ಬಡ ಮತ್ತು ಹಿಂದುಳಿದ ವರ್ಗದ ಯುವಕರು. ಬಿಜೆಪಿ ನಾಯಕರ ಮಕ್ಕಳಲ್ಲ ಎಂದು ತಿಳಿಸಿದ್ದಾರೆ.

ಆರ್‌ಎಸ್‌ಎಸ್ ಅನುಭವಿಸುತ್ತಿರುವ ಸವಲತ್ತುಗಳನ್ನು ಪ್ರಶ್ನಿಸಿದ ಅವರು, ಇತರ ಸಂಘಟನೆಗಳು ಕೋಲುಗಳನ್ನು ಹಿಡಿದು ಮೆರವಣಿಗೆಗಳನ್ನು ನಡೆಸಿದರೆ, ಅವರಿಗೆ ಅವಕಾಶ ನೀಡಲಾಗುತ್ತದೆಯೇ? ಆರ್‌ಎಸ್‌ಎಸ್ ಅನ್ನು ಏಕೆ ವಿಭಿನ್ನವಾಗಿ ಪರಿಗಣಿಸಬೇಕು? ಈ ವಿಶೇಷ ಸವಲತ್ತು ಅವರಿಗೆ ಯಾಕೆ ಎಂದು ಪ್ರಶ್ನಿಸಿದ್ದಾರೆ.

Leave a Reply