5, 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳ  ಪರೀಕ್ಷೆ ಫಲಿತಾಂಶ ಯಾವಾಗ?

2 years ago

ಬೆಂಗಳೂರು: ರಾಜ್ಯದಲ್ಲಿ ಲೋಕಸಭೆ ಚುನಾವಣೆ ಕಾವು ತೀವ್ರಗೊಂಡಿದ್ದು ಎಲ್ಲರೂ ಸೋಲು-ಗೆಲುವಿನ ಲೆಕ್ಕಾಚಾರದಲ್ಲಿ ನಿರತರಾಗಿದ್ದರೆ. 5, 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳ ಪೋಷಕರು ಮಾತ್ರ ತಮ್ಮ ಮಕ್ಕಳ ಪರೀಕ್ಷೆ ಫಲಿತಾಂಶ ಯಾವಾಗ ಎಂದು ತಲೆಕೆಡಿಸಿಕೊಂಡಿದ್ದಾರೆ.

ರಾಜ್ಯ ಪಠ್ಯಕ್ರಮದ 5, 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳ ಪರೀಕ್ಷೆ ಕುರಿತಾಗಿ ಬಿಕ್ಕಟ್ಟು ಸುಪ್ರೀಂಕೋರ್ಟ್ ತನಕ ಹೋಗಿದ್ದು ಇದೀಗ ಈ ವಿದ್ಯಾರ್ಥಿಗಳ ಫಲಿತಾಂಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಹೀಗಾಗಿ ಈ ಮಕ್ಕಳ ಪರೀಕ್ಷೆಯ ಫಲಿತಾಂಶ ಯಾವಾಗ ಪ್ರಕಟವಾಗಲಿದೆ ಎಂಬ ಬಗ್ಗೆ ಯಾರಲ್ಲೂ ಸ್ಪಷ್ಟತೆ ಇಲ್ಲ.

ಫಲಿತಾಂಶದ ಬಗ್ಗೆ ಸ್ಪಷ್ಟತೆ ಇಲ್ಲದ ಕಾರಣ ತಮ್ಮ ಮಕ್ಕಳಿಗೆ ಹೊಸ ಪಠ್ಯ ಪುಸ್ತಕ ಕಲಿಕಾ ಸಾಮಗ್ರಿ ಕೊಡಿಸಲು ಪೋಷಕರಿಗೆ ಸಾಧ್ಯವಾಗುತ್ತಿಲ್ಲ. ಇನ್ನೇನು ಕೆಲವೇ ದಿನಗಳಲ್ಲಿ ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷ ಆರಂಭವಾಗುತ್ತಿದ್ದು ತಮ್ಮ ಮಕ್ಕಳ ಭವಿಷ್ಯ ಹೇಗೆ ಎಂದು ಪೋಷಕರು ಆತಂಕದಲ್ಲಿ ಸಿಲುಕಿದ್ದಾರೆ.

ಈ ನಡುವೆ,ಕೇಂದ್ರ ಪಠ್ಯಕ್ರಮದ ನವೋದಯ ವಸತಿ ಶಾಲೆ ಸೇರಿದ್ದಂತೆ ಮೂರಾರ್ಜಿ, ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ಇತರೆ ವಸತಿ ಶಾಲೆಗಳ ಆಯ್ಕೆಗೆ ಈಗಾಗಲೇ ಪ್ರವೇಶ ಪರೀಕ್ಷೆಗಳು ನಡೆದಿವೆ. ಆದರೆ ರಾಜ್ಯ ಪಠ್ಯಕ್ರಮದ 5,8 ಮತ್ತು,9ನೇ ತರಗತಿಯ ಮಕ್ಕಳ ಶಾಲಾ ಫಲಿತಾಂಶ ಪ್ರಕಟವಾಗದ ಹಿನ್ನೆಲೆಯಲ್ಲಿ ಆಯ್ಕೆ ಪಟ್ಟಿ ಪ್ರಕಟಿಸಲು ವಸತಿ ಶಾಲೆಗಳಿಗೆ ಸಾಧ್ಯವಾಗುತ್ತಿಲ್ಲ.

ನ್ಯಾಯಾಲಯದ ತಡೆಯಾಜ್ಞೆ ಇರುವ ಕಾರಣ ಶಾಲಾ ಶಿಕ್ಷಣ ಇಲಾಖೆ ಅಧಿಕಾರಿಗಳು ಈ ಬಗ್ಗೆ ಯಾವುದೇ ತೀರ್ಮಾನ ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ. ಕೋರ್ಟಿಗೆ ಮನವಿ ಸಲ್ಲಿಸಿ ಆದಷ್ಟು ಶೀಘ್ರ ಫಲಿತಾಂಶ ಪ್ರಕಟಿಸಲು ಅವಕಾಶ ಕಲ್ಪಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ನಿರ್ದೇಶನ ನೀಡಬೇಕಾದ ಮಂತ್ರಿ ಚುನಾವಣೆ ಪ್ರಚಾರದಲ್ಲಿ ನಿರತರಾಗಿದ್ದಾರೆ.

ಹಿರಿಯ ಅಧಿಕಾರಿಗಳನ್ನು ಹಲವೆಡೆ ಚುನಾವಣಾ ಕೆಲಸಕ್ಕೆ ನಿಯೋಜಿಸಲಾಗಿದ್ದು ಮಕ್ಕಳ ಪರೀಕ್ಷೆಯ ಫಲಿತಾಂಶದ ಬಗ್ಗೆ ತೀರ್ಮಾನ ತೆಗೆದುಕೊಳ್ಳುವವರೆ ಇಲ್ಲದಂತಾಗಿದೆ.

ಫಲಿತಾಂಶ ಇಲ್ಲದ ಕಾರಣಕ್ಕೆ ಅನೇಕ ವಿದ್ಯಾರ್ಥಿಗಳಿಗೆ ಬೇರೆ ಶಾಲೆಗಳಿಗೆ ವರ್ಗಾವಣೆ ಸಾಧ್ಯವಾಗುತ್ತಿಲ್ಲ. ಜೊತೆಗೆ ಕೇಂದ್ರ ಪಠ್ಯಕ್ಕೆ ದಾಖಲಾತಿ ಪಡೆಯಲು ಕಷ್ಟವಾಗುತ್ತಿದೆ.

ಹೀಗಾಗಿ ಈ ಮಕ್ಕಳ ಪೋಷಕರು ಪರೀಕ್ಷೆಯ ಫಲಿತಾಂಶಕ್ಕಾಗಿ ಮಕ್ಕಳ ಹಕ್ಕುಗಳ ಆಯೋಗದ ಮೊರೆ ಹೋಗಿದ್ದಾರೆ. ಮಕ್ಕಳ ಹಕ್ಕುಗಳ ಆಯೋಗ ಮದ್ಯ ಪ್ರವೇಶ ಮಾಡಿದ್ದು, ಕೂಡಲೆ ಫಲಿತಾಂಶ ಪ್ರಕಟಿಸುವಂತೆ ಶಿಕ್ಷಣ ಇಲಾಖೆಗೆ ಸೂಚಿಸುವಂತೆ ನ್ಯಾಯಾಲಯದಲ್ಲಿ ಮನವಿ ಮಾಡಿದೆ.

Leave a Reply