ಬೆಳಗಾವಿ: ಬಿಜೆಪಿ ಪಕ್ಷದಲ್ಲಿ ಪ್ರಜಾಪ್ರಭುತ್ವವೇ ಇಲ್ಲ. ಯಡಿಯೂರಪ್ಪ ಅವರು ಶಾಸಕರ ಬೆಂಬಲದ ಮೇಲೆ ಮುಖ್ಯಮಂತ್ರಿಯಾದವರು, ಅವರನ್ನು ಇದ್ದಕ್ಕಿದ್ದಂತೆ ಕಿತ್ತು ಹಾಕಿದ್ದಾರೆ, ಮುಂದಿನ ಮುಖ್ಯಮಂತ್ರಿ ಆಯ್ಕೆಯ ಹಕ್ಕು ಕೂಡ ಶಾಸಕರಿಗಿಲ್ಲ. ಬಿಜೆಪಿ ಶಾಸಕರಿಗೆ ಅಭಿವ್ಯಕ್ತಿ ಸ್ವಾತಂತ್ರ್ಯ ಎಲ್ಲಿದೆ? ಹೈಕಮಾಂಡ್ ಮಾತಿಗೆ ಸುಮ್ಮನೆ ತಲೆಯಾಡಿಸಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು.
ಮಲಪ್ರಭಾ ನದಿ ನೀರು ಊರೊಳಗೆ ನುಗ್ಗಿದ ಪರಿಣಾಮ ಬೆಳಗಾವಿ ಜಿಲ್ಲೆಯ ದುರ್ಗಾನಗರ ಮತ್ತು ಮಾರುತಿ ನಗರ ಗ್ರಾಮಗಳು ಸಂಪೂರ್ಣ ಜಲಾವೃತಗೊಂಡಿವೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.
ಅತಿವೃಷ್ಟಿ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲಾ ಪ್ರವಾಸದಲ್ಲಿರುವ ಅವರು, ಖಾನಾಪುರ ಊರಿನ ಜನರನ್ನು ಪುನರ್ವಸತಿ ಕೇಂದ್ರಗಳಿಗೆ ಸ್ಥಳಾಂತರ ಮಾಡಲಾಗಿದೆಯಾದರೂ ಅಲ್ಲಿ ಅಗತ್ಯ ಸೌಲಭ್ಯ ನೀಡಿಲ್ಲ. ಹಾಗಾಗಿ ಇಂದು ಅಧಿಕಾರಿಗಳ ಸಭೆ ನಡೆಸಿ, ಅವರಿಗೆ ಸೂಚನೆ ನೀಡಿದ್ದೇನೆ ಎಂದರು.
ಹೆಚ್ಚು ಮಳೆಯಾದಗಲೆಲ್ಲಾ ಊರೊಳಗೆ ನೀರು ನುಗ್ಗುತ್ತಿದೆ, ಇದನ್ನು ತಪ್ಪಿಸಲು ನಾಲೆಗೆ ತಡೆಗೋಡೆ ನಿರ್ಮಾಣ ಮಾಡಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ ಮತ್ತು ರೂ. 13 ಕೋಟಿ ವೆಚ್ಚದಲ್ಲಿ ತಡೆಗೋಡೆಯ ನೀಲನಕ್ಷೆಯನ್ನು ಸಿದ್ಧಪಡಿಸಿದ್ದಾರೆ. ತಡೆಗೋಡೆ ನಿರ್ಮಾಣ ಕುರಿತು ಸರ್ಕಾರದ ಜೊತೆ ನಾನು ಮಾತನಾಡುತ್ತೇನೆ ಎಂದು ಭರವಸೆ ನೀಡಿದರು.
ಬೆಳಗಾವಿ – ಗೋವಾ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅರ್ಧದಲ್ಲೇ ಸ್ಥಗಿತಗೊಂಡಿದೆ. ಈ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸಲು ಅಗತ್ಯವಿರುವ ಅನುದಾನ ಬಿಡುಗಡೆ ಮಾಡುವಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಪತ್ರ ಬರೆಯುತ್ತೇನೆ ಎಂದು ವಾಗ್ದಾನ ನೀಡಿದರು.
ಕೆಲವು ಮನೆಗಳಲ್ಲಿ ಮೂರು – ನಾಲ್ಕು ಕುಟುಂಬಗಳು ವಾಸವಿರುತ್ತವೆ. ಅಂತಹಾ ಮನೆಗಳು ಪ್ರವಾಹದಿಂದ ಬಿದ್ದುಹೋದರೆ ಪ್ರತಿ ಕುಟುಂಬಕ್ಕೂ ಪ್ರತ್ಯೇಕ ಮನೆ ಕಟ್ಟಿಸಿಕೊಡುವಂತೆ ನಾನು ಈ ಹಿಂದೆಯೇ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದೆ. ಆದರೆ ಸರ್ಕಾರ ಅಂತಹಾ ಕುಟುಂಬಕ್ಕೆ ಕೇವಲ ಒಂದು ಮನೆ ಕಟ್ಟಿಸಿಕೊಟ್ಟು ಕೈತೊಳೆದುಕೊಂಡಿದೆ ಎಂದು ಆರೋಪಿಸಿದರು.




