ಕಾರ್ಮಿಕರ ಸಾಮಾಜಿಕ ಭದ್ರತಾ ಮತ್ತು ಕಲ್ಯಾಣ ಅಧಿನಿಮಯ 2025 ಜಾರಿ: ಸಂತೋಷ್ ಲಾಡ್

7 months ago

ಹಾಸನ: ರಾಜ್ಯದಲ್ಲಿ ಆನ್ ಲೈನ್ ಪ್ಲಾಟ್ ಫಾರಂನಲ್ಲಿ ಕೆಲಸ ಮಾಡುವ ಗಿಗ್ ಕಾರ್ಮಿಕರು 4 ರಿಂದ 5 ಲಕ್ಷ ಜನ ಇದ್ದಾರೆ. ಇವರನ್ನು ಇಲಾಖೆ ವ್ಯಾಪ್ತಿಗೆ ತರುವ ಮೂಲಕ ಗಿಗ್ ಕಾರ್ಮಿಕರ ಸಾಮಾಜಿಕ ಭದ್ರತಾ ಮತ್ತು ಕಲ್ಯಾಣ ಅಧಿನಿಮಯ 2025 ಅನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದರು.

ನಗರದ ಮಲೆನಾಡು ಇಂಜಿನಿಯರಿಂಗ್ ಕಾಲೇಜಿನ ಆಡಿಟೋರಿಯಮ್‌ನಲ್ಲಿ ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಬೆಂಗಳೂರು, ಸಾರಿಗೆ ಇಲಾಖೆ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಹಾಸನ ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಹಾಗೂ ಅರಿವು ಕಾರ್ಯಕ್ರಮ ವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷಗಳಾಗಿದೆ. ಸಿನಿಮಾ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ದುಡಿಯುತ್ತಿರುವ ಕಾರ್ಮಿಕರನ್ನು ನೋಂದಾಯಿಸಿ ಸಾಮಾಜಿಕ ಭದ್ರತೆ ಒದಗಿಸಲಾಗುತ್ತಿದೆ ಎಂದರು.

ಚಾಲಕ, ನಿರ್ವಾಹಕ, ಕ್ಲೀನರ್, ಬುಕ್ಕಿಂಗ್ ಗುಮಾಸ್ತ, ನಗದು ಗುಮಾಸ್ತ, ಕಾವಲುಗಾರ ಪರಿಚಾಲಕ, ಮೋಟರ್ ಗ್ಯಾರೇಜುಗಳಲ್ಲಿ ಎಲೆಕ್ಟ್ರಿಕಲ್ ಹಾಗೂ ಎಸಿ ಘಟಕಗಳಲ್ಲಿ ಇತರೆ ಕೆಲಸ ಮಾಡುತ್ತಿರುವ ಸುಮಾರು 10 ಲಕ್ಷ ಕಾರ್ಮಿಕರ ರಾಜ್ಯ ಮೋಟಾರು ಸಾರಿಗೆ ಹಾಗೂ ಇತರೆ ಸಂಬಞಧಿತ ಕಾರ್ಮಿಕ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ದಿ ಮಂಡಳಿಯಲ್ಲಿ ನೋಂದಾಯಿಸಿಕೊಂಡಿದ್ದಾರೆ. ಹಾಸನ ಜಿಲ್ಲೆಯಲ್ಲಿ 37,000 ಜನ ನೋಂದಾಯಿಸಿದ್ದಾರೆ. ಸ್ಮಾರ್ಟ್ ಕಾರ್ಡ್ ವಿತರಿಸಲಾಗಿದೆ ಎಂದರು.

ಆಶಾ ದೀಪ ಯೋಜನೆಯನ್ನು ಜಾರಿಗೊಳಿಸಿದ್ದು, ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಮಕ್ಕಳಿಗೆ ಕೆಲಸ ಕೊಟ್ಟರೆ ಅಂತವರಿಗೆ ಶೇ. 50 ಸಂಬಳ ಕೊಡಲಾಗುವುದು. ರಾಜ್ಯದ 7 ಸಾವಿರ ಮಕ್ಕಳಿಗೆ ಕೆಲಸ ಸಿಕ್ಕಿದ್ದು, 2 ವರ್ಷಗಳವರೆಗೆ ಸಂಬಳ ನೀಡಲಾಗುವುದು ಎಂದರು.

24,400 ಮಕ್ಕಳಿಗೆ 20 ಕೋಟಿ, 9 ಕೋಟಿ ರೂ.ವಿವಾಹ ಪ್ರೋತ್ಸಾಹ ಧನ, 3 ಕೋಟಿ ವೈದ್ಯಕೀಯ ಸೌಲಭ್ಯಕ್ಕಾಗಿ, ವಿವಿಧ ಯೋಜನೆಗಳಡಿಯಲ್ಲಿ 54 ಕೋಟಿ ರೂ ಗಳನ್ನು ಜಿಲ್ಲೆಯ ಕಾರ್ಮಿಕರಿಗೆ ನೀಡಿದ್ದೇವೆ ಎಂದರು.

ಸರ್ಕಾರಿ ಕಚೇರಿಗಳಲ್ಲಿ ಹೊರಗುತ್ತಿಗೆಯಲ್ಲಿ ಕೆಲಸ ಮಾಡುತ್ತಿರುವವರ ಶ್ರೇಯೋಭಿವೃದ್ಧಿಗಾಗಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಕಾರ್ಮಿಕರ ವಿವಿದ್ದೋಶ ಸಂಸ್ಥೆಯನ್ನು ಸ್ಥಾಪಿಸಿ ಅದರ ಮೂಲಕ ನಿಯೋಜಿಸಿಕೊಳ್ಳಲು ಯೋಜಿಸಲಾಗಿದ್ದು, ಸಚಿವ ಸಂಪುಟದ ಉಪ ಸಮಿತಿಯನ್ನು ರಚಿಸಲಾಗಿದೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅನುಷ್ಠಾನಗೊಳಿಸಲಾಗುವುದು ಎಂದರು.

ನಮ್ಮ ಸರ್ಕಾರ ಐದು ಗ್ಯಾರೆಂಟಿಗಳ ಮೂಲಕ ವರ್ಷಕ್ಕೆ 60 ಸಾವಿರ ಕೋಟಿ ವೆಚ್ಚ ಮಾಡುತ್ತದೆ. 3 ಲಕ್ಷ ಕೋಟಿ ರೂಪಾಯಿಯನ್ನು ಬಡವರಿಗೆ ವೆಚ್ಚ ಮಾಡುತ್ತಿದ್ದೇವೆ. ಶಕ್ತಿ ಯೋಜನೆಯಿಂದ 500 ಕೋಟಿ ಹೆಣ್ಣು ಮಕ್ಕಳು ಪ್ರಯಾಣ ಮಾಡುವ ಮೂಲಕ ರಾಜ್ಯದ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡಿದ್ದಾರೆ ಎಂದರು.

ಸೆಸ್‌ನಲ್ಲಿ ಶ್ರಮಿಕ ವರ್ಗ ಹಣವನ್ನು ಮೀಸಲಿಟ್ಟು ಇಲಾಖೆಯ ಮೂಲಕ ಸುಮಾರು 1.30 ಕೋಟಿ ಕಾರ್ಮಿಕ ಶ್ರಮಿಕ ವರ್ಗಗಳಿಗೆ ಕಾರ್ಮಿಕರು ಅಪಘಾತದಲ್ಲಿ ಮೃತಪಟ್ಟರೆ ಆಶ್ರೀತ ಕುಟುಂಬಕ್ಕೆ 15 ಲಕ್ಷ ಪರಿಹಾರ ನೀಡುವ ಕುರಿತು ಯೋಜನೆಯನ್ನು ರೂಪಿಸಲಾಗಿದೆ. ಮುಂದಿನ ದಿನದಲ್ಲಿ ಮುಖ್ಯಮಂತ್ರಿಗಳಿಂದ ಅನುಮೋದನೆ ಪಡೆದು ಜಾರಿಗೊಳಿಸಲಾಗುವುದು ಎಂದರು.

ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷರು ಹಾಗೂ ಶಾಸಕ ಕೆ.ಎಂ ಶಿವಲಿಂಗೇಗೌಡ ಮಾತನಾಡಿ, ಕಾರ್ಮಿಕರ ಜೀವನಕ್ಕೆ ಭದ್ರತೆ ನೀಡುವುದರ ಜೊತೆಗೆ ಕಾರ್ಮಿಕ ಇಲಾಖೆಯಲ್ಲಿ ಜನೋಪಯೋಗಿ ಕೆಲಸ ಮಾಡಬಹುದು ಎಂಬುದನ್ನು ಕಾರ್ಮಿಕ ಸಚಿವರು ಮಾಡಿ ತೋರಿಸಿದ್ದಾರೆ ಎಂದರು.

ಅಸಂಘಟಿತ ಕಾರ್ಮಿಕರ ನೋದಾಯಿಸಿಕೊಳ್ಳಬೇಕು, ಕಷ್ಟದಲ್ಲಿರುವ ಕಾರ್ಮಿಕರು ಹಾಗೂ ಶ್ರಮಿಕ ವರ್ಗ ಸಂತೋಷವಾಗಿರಬೇಕು ಆಗ ಮಾತ್ರ ದೇಶದಲ್ಲಿ ಅಭಿವೃದ್ಧಿ ಸಾಧ್ಯ ಎಂದರು.

ಸಂತೋಷ್ ಲಾಡ್ ಅವರ ದೂರದೃಷ್ಟಿ, ಕಾಳಜಿ ಮೆಚ್ಚುವಂತಹುದು, ಕಾರ್ಮಿಕರ ಮಕ್ಕಳ ವ್ಯಾಸಂಗಕ್ಕಾಗಿ ವಸತಿ ನಿಲಯ ತಂದಿದ್ದಾರೆ ಅದಕ್ಕೆ 32 ಕೋಟಿ ರೂ ಕೊಟ್ಟಿದ್ದಾರೆ. ಜಿಲ್ಲೆಯಲ್ಲಿ ಅರಸೀಕೆರೆ ತಾಲ್ಲೂಕಿಗೆ ಮಂಜೂರಾತಿಯಾಗಿದೆ ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದರು.

ಸಂಸದ ಶ್ರೇಯಸ್ ಎಂ ಪಟೇಲ್ ಮಾತನಾಡಿ, ಕಾರ್ಮಿಕರ ಏಳಿಗಾಗಿ ದುಡಿಯುತ್ತಿರುವ ಕಾರ್ಮಿಕ ಸಚಿವರು 101 ವರ್ಗಗಳಿಗೆ ಸ್ಮಾರ್ಟ್ ಕಾರ್ಡ್ ನೀಡುವ ಕೆಲಸವನ್ನು ಮಾಡುತ್ತಿದ್ದಾರೆ. ಹಿಂದುಳಿದ ವರ್ಗಗಳ ಕಾರ್ಮಿಕರು ಹಾಸನ ಜಿಲ್ಲೆಯಲ್ಲಿ 4,53,084 ನೋಂದಾಯಿಸಿಕೊAಡಿದ್ದಾರೆ. ಸರ್ಕಾರ ಕಾರ್ಮಿಕರನ್ನು ಗುರುತಿಸುವ ಕೆಲಸವನ್ನು ಮಾಡುತ್ತಿದೆ ಎಂದರು.

ಶಾಸಕ ಸ್ವರೂಪ್ ಪ್ರಕಾಶ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಾರ್ಮಿಕರ ಪರವಾಗಿ ಶ್ರದ್ಧೆಯಿಂದ ಸಚಿವರು ಕೆಲಸ ಮಾಡುತ್ತಿದ್ದಾರೆ. 25 ರಿಂದ 101 ವಲಯಗಳನ್ನು ತೆಗೆದುಕೊಂಡು ಹೋಗಿದ್ದಾರೆ. ಅರ್ಹರು ಇದರ ಪ್ರಯೋಜನ ಪಡೆಯಬೇಕು ಐತಿಹಾಸಿಕ ಯೋಜನೆಯನ್ನು ರೂಪಿಸಿದ್ದಾರೆ ಈ ಯೋಜನೆಗಳನ್ನು ಎಲ್ಲಾ ಕಾರ್ಮಿಕರು ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಕಡೂರು ಕ್ಷೇತ್ರದ ಶಾಸಕ ಆನಂದ್, ಕಾರ್ಮಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಮೊಹಿಸಿನ್, ಕಾರ್ಮಿಕ ಇಲಾಖೆ ಆಯುಕ್ತ ಹೆಚ್.ಎನ್. ಗೋಪಾಲಕೃಷ್ಣ ಮತ್ತಿತರರು ಹಾಜರಿದ್ದರು.

Leave a Reply