ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಮತ್ತೊಮ್ಮೆ ಮುಜುಗರಕ್ಕೆ ಸಿಲುಕಿಸಿದೆ. ಇವರ ವಿರುದ್ಧದ ಅಕ್ರಮ ಆಸ್ತಿಗಳಿಕೆ ಪ್ರಕರಣದ ತನಿಖೆಗೆ ಸಿಬಿಐಗೆ ನೀಡಿದ್ದ ಅನುಮತಿಯನ್ನು ರಾಜ್ಯ ಸರ್ಕಾರ ವಾಪಸ್ ಪಡೆದಿರುವುದನ್ನು ಹೈಕೋರ್ಟ್ ನಲ್ಲಿ ಪ್ರಶ್ನಿಸಲಾಗಿದೆ.
ಈ ಕುರಿತು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಶಿವಕುಮಾರ್ ಅವರ ವಿರುದ್ಧದ ಸಿಬಿಐ ತನಿಖೆ ಕುರಿತಾದ ಅರ್ಜಿ ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪ್ರಸ್ತಾವನೆಗೆ ಸಮ್ಮತಿಸಿದ ಹೈಕೋರ್ಟ್ ತನಿಖೆ ರದ್ದುಪಡಿಸಲು ಸಿಬಿಐಗೆ ಸೂಚಿಸಿತ್ತು. ಇದೇ ವೇಳೆ ಸರ್ಕಾರದ ನಿರ್ಧಾರವನ್ನು ಯಾರಾದರೂ ಕೋರ್ಟ್ ನಲ್ಲಿ ಪ್ರಶ್ನಿಸಬಹುದಾಗಿದೆ ಎಂದಿತ್ತು.
ಈ ಆದೇಶದನ್ವಯ ಇದೀಗ ಯತ್ನಾಳ್ ಸಾರ್ವಜನಿಕ ಹಿತಾಸಕ್ತಿ ರಿಟ್ ಸಲ್ಲಿಸಿದ್ದು, ಸಿಬಿಐ ತನಿಖೆಗೆ ಅನುಮತಿ ನೀಡಿದ್ದ ಹಿಂದಿನ ಸರ್ಕಾರದ ಆದೇಶ ಹಿಂಪಡೆದ ರಾಜ್ಯ ಸರ್ಕಾರದ ಆದೇಶವನ್ನು ರದ್ದುಪಡಿಸಲು ಮನವಿ ಮಾಡಿದ್ದಾರೆ.
ಸಿಬಿಐ ತನಿಖೆ ಬಹುತೇಕ ಮುಕ್ತಾಯದ ಹಂತದಲ್ಲಿದೆ. ಈ ಹಂತದಲ್ಲಿ ರಾಜ್ಯ ಸರ್ಕಾರದ ಕ್ರಮ ಕಾನೂನು ಬಾಹಿರವಾಗಿದೆ. ಸಿಬಿಐ ತನಿಖೆಯನ್ನು ಮೊಟಕುಗೊಳಿಸುವ ಉದ್ದೇಶ ಹೊಂದಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.




