ರಾಜ್ಯದಲ್ಲಿ ಐದು ದಿನ ಯೆಲ್ಲೋ ಅಲರ್ಟ್

2 years ago

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ವೈಭವ ಆರಂಭವಾಗಿದ್ದು, ನೈರುತ್ಯ ಮಾರುತಗಳು ರಾಜ್ಯಾದ್ಯಂತ ಉತ್ತಮ ಮಳೆ ಸುರಿಸಿವೆ. ಉತ್ತಮವಾಗಿ ಮಳೆಯಾಗುತ್ತಿರುವುದು ರಾಜ್ಯದ ರೈತಾಪಿ ಸಮುದಾಯದಲ್ಲಿ ಅತೀವ ಹರ್ಷಕ್ಕೆ ಕಾರಣವಾಗಿದೆ.

ಇದರ ನಡುವೆ ಮುಂದಿನ ಐದು ದಿನಗಳ ಕಾಲ ರಾಜ್ಯದ ಕರಾವಳಿ, ಮಲೆನಾಡು ಹಾಗೂ ಉತ್ತರ ಕರ್ನಾಟಕದ ಹಲವೆಡೆ ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು, ಹಳದಿ ಮುನ್ನೆಚ್ಚರಿಕೆ (ಯಲ್ಲೋ ಅಲರ್ಟ್)ಯನ್ನು ಹವಾಮಾನ ಇಲಾಖೆ ನೀಡಿದೆ.

ಬೆಳಗಾವಿ, ವಿಜಯಪುರ, ಕೊಪ್ಪಳ. ಗದಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಶಿವಮೊಗ್ಗ, ಕೊಡಗು, ಹಾಸನ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿದ್ದು, ಹಳದಿ ಮುನ್ನೆಚ್ಚರಿಕೆ ನೀಡಲಾಗಿದೆ.

ರಾತ್ರಿ ವೇಳೆ ಸಾಧಾರಣ ಮಳೆಯಾಗಲಿದೆ. ಆದರೆ. ಕೆಲವೆಡೆ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯೂ ಇದೆ. ಒಮ್ಮೊಮ್ಮೆ ಬಲವಾದ ಮೇಲೈಗಾಳಿ ಬೀಸಲಿದೆ. ಗಂಟೆಗೆ 40 ರಿಂದ 50 ಕಿ.ಮೀ.ವೇಗದಲ್ಲಿ ಗಾಳಿ ಬೀಸುವ ಲಕ್ಷಣಗಳು ಗೋಚರಿಸುತ್ತಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕಳೆದ ಎರಡು ದಿನಗಳಿಂದ ರಾಜ್ಯದೆಲ್ಲೆಡೆ ಮಳೆಯಾಗಿದ್ದು, ಬೆಳಗಾವಿ, ಬಾಗಲಕೋಟೆಯಲ್ಲಿ 9 ಸೆ.ಮೀ. ಮಳೆಯಾಗಿದೆ. ಯಾದಗಿರಿ, ಕೊಪ್ಪಳ, ಮೈಸೂರು, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ರಾಮನಗರ, ಬಳ್ಳಾರಿ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದೆ ಎಂದಿದೆ.

Leave a Reply