10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ
ಚಿತ್ರನಟಿ ಶ್ರೀಲೀಲಾ ಭಾಗಿ
ಬಳ್ಳಾರಿ: ಸಿಎಂ ಸಿದ್ದರಾಮಯ್ಯ ಅವರು ಯೋಗಾಭ್ಯಾಸ ಮಾಡುವ ಮೂಲಕ, ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
- ಭಾರತ ಕಲ್ಯಾಣ ರಾಷ್ಟ್ರವಾಗಲು ಅಂಬೇಡ್ಕರರ ವಿಚಾರಗಳನ್ನು ಅಳವಡಿಸಿಕೊಳ್ಳಬೇಕು: ಕೆ.ವೈ.ನಾರಾಯಣಸ್ವಾಮಿ
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆಯುಷ್ ಇಲಾಖೆ ಸಹಯೋಗದಲ್ಲಿ ಶುಕ್ರವಾರ ಬೆಳ್ಳಂ ಬೆಳಿಗ್ಗೆ ಸಂಡೂರು ತಾಲ್ಲೂಕು ತೋರಣಗಲ್ಲಿನ ಜೆಎಸ್ಡಬ್ಲ್ಯೂ ಟೌನ್ಶಿಪ್ ವಿದ್ಯಾನಗರದಲ್ಲಿ ಏರ್ಪಡಿಸಲಾದ ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಸಿದ್ದರಾಮಯ್ಯ ಅವರು ಪಾಲ್ಗೊಂಡು, ಕೆಲವು ಯೋಗಾಸನಗಳ ಅಭ್ಯಾಸ ಮಾಡಿದರು.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿಗಳು, ವೇದಿಕೆಯಲ್ಲಿದ್ದ ಸಿಎಂ, ಗಣ್ಯಾತಿಗಣ್ಯರು ಸೇರಿದಂತೆ ಮಕ್ಕಳು, ಸಾರ್ವಜನಿಕರು ಹಾಗೂ ಪಾಲ್ಗೊಂಡಿದ್ದ ಜನಸ್ತೋಮಕ್ಕೆ ಯೋಗದ ವಿವಿಧ ಆಸನಗಳ ಅಭ್ಯಾಸ ಮಾಡಿಸಿದರು.
ಪ್ರತಿನಿತ್ಯ ಯೋಗಾಭ್ಯಾಸ ಮಾಡುವುದರಿಂದ ಜನರ ಆರೋಗ್ಯ ಉತ್ತಮವಾಗಿರುವುದರ ಜೊತೆಗೆ, ಇಡೀ ದಿನ ವ್ಯಕ್ತಿ ಲವಲವಿಕೆಯಿಂದ ಇರಲು ಸಹಕಾರಿಯಾಗಿದೆ. ಹೀಗಾಗಿ ಎಲ್ಲರೂ ನಿತ್ಯ ಯೋಗಾಭ್ಯಾಸ ಮಾಡಬೇಕು ಎಂದು ಮನವಿ ಮಾಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯೋಗಾಭ್ಯಾಸದಲ್ಲಿ ಆಸಕ್ತಿಯಿಂದಲೇ ಪಾಲ್ಗೊಂಡು, ವಿವಿಧ ಆಸನಗಳನ್ನು ಅಭ್ಯಾಸ ಮಾಡಿದರು. ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಭಾಗವಹಿಸಿದ್ದ ಖ್ಯಾತ ಚಲನಚಿತ್ರ ನಟಿ ಶ್ರೀಲೀಲಾ ಎಲ್ಲರ ಆಕರ್ಷಣೆಯ ಕೇಂದ್ರ ಬಿಂದುವಾದರು. ನಟಿ ಶ್ರೀಲೀಲಾ ಕೂಡ ಖುಷಿಯಿಂದಲೇ ಯೋಗಾಭ್ಯಾಸದಲ್ಲಿ ಪಾಲ್ಗೊಂಡು ಮಿಂಚಿದರು.
ಸಮಾರಂಭದಲ್ಲಿ ನೆರೆದಿದ್ದ ಮಕ್ಕಳಾದಿಯಾಗಿ ಸಾರ್ವಜನಿಕರು ಕೂಡ ನಟಿ ಶ್ರೀಲೀಲಾ ಅವರಿಗೆ ಚಪ್ಪಾಳೆಯ ಸುರಿಮಳೆಗೈದರು. ಸಂತೋಷದಿಂದ ಪ್ರತಿಕ್ರಿಯಿಸಿದ ಶ್ರೀಲೀಲಾ, ಬಳ್ಳಾರಿ ಜಿಲ್ಲೆಯ ತೋರಣಗಲ್ನಲ್ಲಿ ನಡೆಸಲಾಗುತ್ತಿರುವ ಅಂತರಾಷ್ಟ್ರೀಯ ಯೋಗ ದಿನಾಚರಣೆ ಸಂದರ್ಭದಲ್ಲಿ ತಮ್ಮೆಲ್ಲರನ್ನು ಈ ರೀತಿಯಾಗಿ ಭೇಟಿಯಾಗಿದ್ದು ತುಂಬಾ ಸಂತಸ ತಂದಿದೆ. ಜನರು ನನ್ನ ಮೇಲೆ ತೋರಿಸುತ್ತಿರುವ ಪ್ರೀತಿಗೆ ನಾನು ಚಿರಋಣಿಯಾಗಿದ್ದೇನೆ. ನಿತ್ಯ ಯೋಗಾಭ್ಯಾಸದಿಂದ ಆರೋಗ್ಯ ಚೆನ್ನಾಗಿರುತ್ತದೆ. ಎಲ್ಲರೂ ನಿತ್ಯ ಯೋಗಾಭ್ಯಾಸ ಮಾಡಬೇಕು ಎಂದು ಕರೆ ನೀಡಿದರು.
ನಟಿ ಶ್ರೀಲೀಲಾ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸಮಾರಂಭದಲ್ಲಿ ಭಾಗಿಯಾಗಿದ್ದ ಸಾರ್ವಜನಿಕರು ಕೂಡ ಕಾಣುವ ರೀತಿಯಲ್ಲಿ ತಮ್ಮ ಮೊಬೈಲ್ನಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಂಡು ಖುಷಿಪಟ್ಟರು. ಮಕ್ಕಳು, ಜನರು ನಟಿಯೊಂದಿಗೆ ಸೆಲ್ಫಿ ಪಡೆಯಲು ಮುಗಿಬಿದ್ದಿದ್ದು ಕಂಡುಬಂದಿತು.
ಬಳ್ಳಾರಿ ಜಿಲ್ಲೆಯ ಕಲಾವಿದ ಮಂಜುನಾಥ ಗೋವಿಂದವಾಡ ಅವರು ರಚಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಚಿತ್ರ ಕಲಾಕೃತಿಯನ್ನು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳಿಗೆ ಕಲಾವಿದರ ಕೈನಿಂದಲೇ ಹಸ್ತಾಂತರಿಸಲಾಯಿತು.
12 ನೇ ಶತಮಾನದ ಕವಿಯತ್ರಿ ಅಕ್ಕಮಹಾದೇವಿ ಅವರ ಬೃಹತ್ ಚಿತ್ರ ಕಲಾಕೃತಿಯನ್ನು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನಾವರಣಗೊಳಿಸಿದರು. ಸಾವಿರಾರು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು, ಮಕ್ಕಳು, ಸಾರ್ವಜನಿಕರು ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡು ಯೋಗಾಭ್ಯಾಸ ನಡೆಸಿ ಸಂಭ್ರಮಿಸಿದರು.
ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಕಾರ್ಮಿಕ ಸಚಿವ ಸಂತೋಷ್ ಎಸ್ ಲಾಡ್, ಸಂಸದ ಈ. ತುಕಾರಾಂ, ಕೆ.ಎಂ.ಎಫ್. ಅಧ್ಯಕ್ಷ ಭೀಮಾ ನಾಯಕ್, ವಿಧಾನಪರಿಷತ್ ಸದಸ್ಯ ಗೋವಿಂದರಾಜ್, ಡಾ. ಬಾಬು ಜಗಜೀವನರಾಂ ಚರ್ಮ ಕೈಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ್, ವಡ್ಡು ಗ್ರಾಮ ಪಂಚಾಯತ್ ಅಧ್ಯಕ್ಷೆ ನಿಂಗಮ್ಮ ನಾಗರಾಜ್, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿ.ಪಂ. ಸಿಇಒ ರಾಹುಲ್ ಶರಣಪ್ಪ ಸಂಕನೂರ, ಎಸ್ಪಿ ರಂಜಿತ್ ಕುಮಾರ್ ಬಂಡಾರು, ಉಪವಿಭಾಗಾಧಿಕಾರಿ ಎನ್. ಹೇಮಂತ್, ಗಣ್ಯರಾದ ವಿನಯ್ ಗುರೂಜಿ ಸೇರಿದಂತೆ ಇತರರು ಸಮಾರಂಭದಲ್ಲಿ ಭಾಗವಹಿಸಿದ್ದರು.

















